ಪ್ರಜ್ವಲ್ ರೇವಣ್ಣ ಅನರ್ಹ: ದೂರುದಾರ, ಜೆಡಿಎಸ್ ಶಾಸಕ ಎ.ಮಂಜು ಹೇಳಿದ್ದೇನು..?
ಹಾಸನ, ಸೆಪ್ಟೆಂಬರ್ 1: ಚುನಾವಣಾ ನಾಮಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಆರೋಪದ ಮೇಲೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಚುನಾವಣಾ ಆಯೋಗಕ್ಕೆ ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ 2019ರ ಲೋಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಯಗೊಂಡಿದ್ದ ಎ.ಮಂಜು ಅರ್ಜಿ ಸಲ್ಲಿಕೆ ಮಾಡಿದ್ದರು.

ಎ. ಮಂಜು ತಮ್ಮ ಸೋಲಿನ ಬಳಿಕ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇನ್ನು ಕೋರ್ಟ್ನಲ್ಲಿ ವಿಚಾರಣೆ ಬಾಕಿ ಇರುವಾಗಲೇ ಎ. ಮಂಜು, 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿ, ಈಗ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಇದೀಗ ಜೆಡಿಎಸ್ ಪಕ್ಷದಲ್ಲೇ ಇದ್ದು, ಜೆಡಿಎಸ್ ಸಂಸದನ ಅನರ್ಹಕ್ಕೆ ಕಾರಣವಾದ ಎ. ಮಂಜು ಈ ಬಗ್ಗೆ ಮಾತನಾಡಿದ್ದು, 'ಬದಲಾದ ಸನ್ನಿವೇಶದಲ್ಲಿ ನಾನು ಜೆಡಿಎಸ್ ಶಾಸಕನಾಗಿದ್ದೇನೆ. ಈ ಪ್ರಕರಣದ ವಿಚಾರ ಬೇರೆ. ನೀನು ಮೊದಲು ಪಕ್ಷ ಸೇರು ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದರು. ಜೆಡಿಎಸ್ ಪಕ್ಷಕ್ಕೆ ಸೇರುವಾಗ ಯಾವುದೇ ಷರತ್ತುಗಳು ಇರಲಿಲ್ಲ. ತಪ್ಪು ಮಾಹಿತಿ ಕೊಡಬಾರದು ಎನ್ನುವ ಎಚ್ಚರಿಕೆ ಇದು. ಕೋರ್ಟ್ ಆದೇಶವನ್ನು ಗೌರವಿಸುತ್ತೇನೆ' ಎಂದಿದ್ದಾರೆ.
ಇನ್ನು ಈ ಬಗ್ಗೆ ಖ್ಯಾತ ವಕೀಲೆ ಪ್ರಮೀಳ ನೇಸರ್ಗಿ ಮಾಹಿತಿ ನೀಡಿದ್ದು, ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರು ಅನರ್ಹಗೊಂಡಿದ್ದು, ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಪ್ರಜ್ವಲ್ ರೇವಣ್ಣ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ಪ್ರಜ್ವಲ್ ರೇವಣ್ಣ ಕೂಡಾ ಎ.ಮಂಜು ವಿರುದ್ದ ದೂರು ಸಲ್ಲಿಸಿದ್ದರು. ಪ್ರಜ್ವಲ್ ಮತ್ತು ಮಂಜು ಇಬ್ಬರೂ ಆರು ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ತಿಳಿದು ಬಂದಿದೆ.












Click it and Unblock the Notifications