ಮೂಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಳಗಾವಿ, ಜನವರಿ 18: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್, ಮೂಡಾ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಇಡಿ ಸಂಸ್ಥೆಯ ತನಿಖೆ ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ.

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಕಳೆದ ಬಾರಿಯ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರಲಿಲ್ಲ ಎನ್ನುವ ಸಂಸದ ಜಗದೀಶ್ ಶೆಟ್ಟರ್ ಅವರ ಆರೋಪದ ಬಗ್ಗೆ ಕೇಳಿದಾಗ, ಉದ್ಘಾಟನಾ ಫಲಕದಲ್ಲಿಯೇ ಶೆಟ್ಟರ್ ಅವರ ಹೆಸರಿದೆ. ಆಹ್ವಾನ ಪತ್ರಿಕೆಯನ್ನು ನಾನೇ ಕೊಡುತ್ತೇನೆ. ಹೀಗಿದ್ದರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಪಕ್ಷದವರಿಗೂ ಆಹ್ವಾನ ನೀಡಲಾಗುವುದು ಎಂದು ನಾನೇ ಖುದ್ದಾಗಿ ಹೇಳುತ್ತಿದ್ದೇನೆ. ಸರ್ಕಾರಿ ಕಾರ್ಯಕ್ರಮಕ್ಕೆ ಎಲ್ಲರೂ ಬರಬಹುದು. ಜೈ ಬಾಪು, ಜೈ ಭೀಮ್ , ಜೈ ಸಂವಿಧಾನ ಸಮಾವೇಶಕ್ಕೆ ದಳ, ಬಿಜೆಪಿಯವರು ಬಿಟ್ಟು ಮಾಧ್ಯಮದವರು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಬಹುದು ಎಂದು ತಿಳಿಸಿದರು.
ಮಹದಾಯಿ ವಿವಾದ ಬಗೆಹರಿಯದ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಕಳೆದ ಹತ್ತು ದಿನಗಳ ಹಿಂದೆ ದೆಹಲಿಯಲ್ಲಿ ಸಭೆ ನಡೆದಿತ್ತು. ನಾನು ಹಾಗೂ ಎಚ್. ಕೆ. ಪಾಟೀಲ್ ಅವರು ಇದೇ ವಿಚಾರವಾಗಿ ಇಂದು ಅರ್ಧ ಗಂಟೆ ಚರ್ಚೆ ಮಾಡಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ಪ್ರಧಾನಿಗಳನ್ನು ಭೇಟಿ ಮಾಡಿ ಈ ವಿಚಾರ ಪ್ರಸ್ತಾಪ ಮಾಡಿದಾಗ ಕೇಂದ್ರ ಜಲಶಕ್ತಿ ಸಚಿವರರಿಗೆ ಈ ವಿಚಾರವನ್ನು ತಿಳಿಸಲಾಗಿದೆ ಎಂದು ಖುದ್ದು ಪ್ರಧಾನಿಗಳೇ ಹೇಳಿದ್ದರು. ಹುಬ್ಬಳ್ಳಿಯ ಸಂಸದರನ್ನು ಭೇಟಿಯಾಗಿ ಅವರಿಗೂ ವಿಚಾರ ತಿಳಿಸಿದಾಗ ಅವರೂ ಸಹ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದರು. ಕಳೆದ ಬಾರಿ ನಡೆದ ಸಭೆಯಲ್ಲಿ ಇದರ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ಆದರೆ ಆಸೆ ನೆರವೇರಲಿಲ್ಲ. ಮುಂದೆ ಸಂಸತ್ ಅಧಿವೇಶನ ನಡೆಯುವ ವೇಳೆಯಲ್ಲಿ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.












Click it and Unblock the Notifications