ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಎಎಪಿಯಿಂದ ಪುಸ್ತಕ ಬಿಡುಗಡೆ
ಬೆಂಗಳೂರು ಆಗಸ್ಟ್ 03: ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಆಡಳಿತದಲ್ಲಿ ವೈಫಲ್ಯವಾಗಿದೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ)ಕರ್ನಾಟಕ ಸರ್ಕಾರದ ವೈಪಲ್ಯಗಳ ಕುರಿತು ಕೃತಿ ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಬುಧವಾರ ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸರ್ಕಾರದ ಸಾಲು ಸಾಲು ವೈಫಲ್ಯಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ರಚಿಸಲಾದ 'ಬಿಜೆಪಿಯ ಬೊಗಳೆ ಆಡಳಿತ' ಪುಸ್ತಕವನ್ನು ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ 40% ಕಮಿಷನ್ ದಂಧೆಯಿಂದಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ನಿರೀಕ್ಷಿತ ಅಭಿವೃದ್ಧಿ ಕೆಲಸಗಳು ಕಳೆದ ಒಂದು ವರ್ಷದ ಅವಧಿಯಲ್ಲಿ ಆಗಿಲ್ಲ ಎಂದರು.
'ಪಠ್ಯಪುಸ್ತಕ ಪರಿಷ್ಕರಣೆ ವಿವಾದ, ಕೋಮುದ್ವೇಷ, ಪಿಎಸ್ಐ ಹಗರಣ, ಗುತ್ತಿಗೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಮುಂತಾದವುಗಳೇ ಸರ್ಕಾರದ ಒಂದು ವರ್ಷದ ಸಾಧನೆಗಳು ಎಂದರೆ ತಪ್ಪಾಗಲಾರದು. ಅಧಿಕಾರಕ್ಕೆ ಬಂದರೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಲೋಕಾಯುಕ್ತ ಸಂಸ್ಥೆಯನ್ನು ಮರಳಿ ಬಲಪಡಿಸುವುದಕ್ಕೆ ಅನುಮೋದನೆ ನೀಡುವುದಾಗಿ ಬಿಜೆಪಿಯು 2018ರ ಚುನಾವಣೆಯ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿತ್ತು.

ಬಿಜೆಪಿ ಕೋಮುದ್ವೇಷ ಹರಡುತ್ತಿದೆ
ಬಿಜೆಪಿ ಸರ್ಕಾರದ ತನ್ನ ಆಡಳಿತ ವೈಫಲ್ಯಗಳನ್ನು ಮರೆಮಾಚಲು ಹಾಗೂ ರಾಜಕೀಯ ಲಾಭ ಪಡೆಯಲು ಬಿಜೆಪಿಯು ಕೋಮುದ್ವೇಷ ಹರಡುತ್ತಿದೆ. ಬಿಜೆಪಿಯ ಈ ದುರಾಡಳಿತದಿಂದ ರಾಜ್ಯದ ಜನರ ನೆಮ್ಮದಿಯೇ ನಾಶವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು.

ಲೋಕಾಯುಕ್ತ ಬಲಗೊಳಿಸಲು ಆಗಿಲ್ಲ
ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ ನೀಡಿದ ಭರವಸೆ ಈಡೇರಿಸಿಲ್ಲ. ಇನ್ನೂ ಲೋಕಾಯುಕ್ತ ಸಂಸ್ಥೆಯು ಹಲ್ಲು ಕಿತ್ತ ಹಾವಿನ ಸ್ಥಿತಿಯಲ್ಲಿಯೇ ಇದೆ. ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ಸಿದ್ಧವೆಂದು ಬಿಜೆಪಿ ನಾಯಕರು ಕಳೆದ ಮೂರು ವರ್ಷಗಳಿಂದ ಬೊಗಳೆ ಬಿಡುತ್ತಿದ್ದಾರೆಯೇ ಹೊರತು, ಈ ಸಂಬಂಧ ಯಾವುದೇ ಕ್ರಮಗಳನ್ನು ಇದುವರೆಗೆ ಕೈಗೊಂಡಿಲ್ಲ ಎಂದು ಅವರು ದೂರಿದರು.

ಮೂಲಭೂತ ಸಮಸ್ಯೆ ಸಿಲುಕಿದ ಬೆಂಗಳೂರು
ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಸಿಲಿಕಾನ್ ಸಿಟಿ, ಉದ್ಯಾನ ನಗರಿ ಎಂದು ಕರೆಸಿಕೊಳ್ಳುವ ರಾಜ್ಯ ರಾಜಧಾನಿ ಬೆಂಗಳೂರು ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರದ ರಸ್ತೆಗಳು ಗುಂಡಿಮಯವಾಗಿವೆ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಸರಿಯಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಂಡಿಲ್ಲ. ಸ್ವಲ್ಪವೇ ಮಳೆ ಬಂದರೆ ಸಾಕು ಮನೆಗಳಿಗೆ ನೀರು ನುಗ್ಗುತ್ತಿದ್ದು, ಪ್ರತಿ ಭಾರಿ ಮಳೆಗಾಲದಲ್ಲಿ ಜನರ ಪಾಡು ಹೇಳತೀರದು ಎಂದರು.

ಸಮರ್ಪಕ ನೀರು ಪೂರೈಕೆ ಸಾಧ್ಯವಾಗಿಲ್ಲ
ರಸ್ತೆಗಳು ಸಮಸ್ಯೆಗಳಿಂದ ಹೊರತಾಗಿಲ್ಲ, ಅರ್ಧಗಂಟೆ ಮಳೆ ಪ್ರಮುಖ ರಸ್ತೆಗಳೇ ನದಿಗಳಂತಾಗಿ ಪರಿವರ್ತನೆಯಾಗುವುದು ಇಲ್ಲ ಸಾಮಾನ್ಯ ಎಂಬಂತಾಗಿದೆ. ರಾಜಧಾನಿ ಬೆಂಗಳೂರಿನಲ್ಲೇ ಹಲವು ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನೂ ಸರ್ಕಾರಿ ಶಾಲೆಗಳು, ಸರ್ಕಾರಿ ಆರೋಗ್ಯ ಕೇಂದ್ರಗಳು ಮೂಲ ಸೌಕರ್ಯಗಳಿಲ್ಲದೇ ಶೋಚನೀಯ ಸ್ಥಿತಿ ತಲುಪಿವೆ ಎಂದು ಅವರು ಸರ್ಕಾರದ ವೈಫಲ್ಯಗಳ ಕುರಿತು ವಿವರಿಸಿದರು.












Click it and Unblock the Notifications