ಪ್ರಿಯಾಂಕ್ ಖರ್ಗೆ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು
ಬೆಂಗಳೂರು ಆಗಸ್ಟ್ 16: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಮ್ ಆದ್ಮಿ ಪಕ್ಷ ಮಂಗಳವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಆಮ್ ಆದ್ಮಿ ಪಕ್ಷ (ಎಎಪಿ)ದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಅವರು, ಮಾಜಿ ಸಚಿವ ಪ್ರಿಯಾಂಕ ಖರ್ಗೆ ಆಗಸ್ಟ್ 12ರಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ಮಾತನಾಡುವಾಗ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟು ಅಪಮಾನಿಸಿದ್ದಾರೆ. ಇದು ಲಂಚ - ಮಂಚದ ಸರ್ಕಾರ, ಯುವಕರಿಗೆ ನೌಕರಿ ಬೇಕಾದರೆ ಲಂಚ ಕೊಡಬೇಕು. ಆದರೆ ಯುವತಿಯರಿಗೆ ನೌಕರಿ ಬೇಕಾದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿರುವುದು ಖಂಡನೀಯ ಎಂದರು.
ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ಮಹಿಳಾ ಮಾಜಿ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.
ರಾಜಕೀಯಕ್ಕಾಗಿ ಕೀಳು ಹೇಳಿಕೆ
ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಕೀಳು ಹೇಳಿಕೆ ನೀಡುವುದು ಇದೇನು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್ ಅವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ ಎಂದರು.
ಈ ಹೇಳಿಕೆಯನ್ನು ಎಎಪಿ ಪಕ್ಷ ಖಂಡಿಸುತ್ತದೆ. ಅಲ್ಲದೇ ಹೇಳಿಕೆಯ ತೀವ್ರತೆಯನ್ನು ಗಮನಿಸಿಯೇ ಎಎಪಿ ರಾಜ್ಯ ಮಹಿಳಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು ಎಎಪಿ ಮಾಧ್ಯಮ ವಕ್ತಾರೆ ಉಷಾ ಮೋಹನ್ ಈ ವೇಳೆ ಒತ್ತಾಯಿಸಿದರು.
Recommended Video