ಟೂಲ್ಕಿಟ್ ಹಗರಣ: ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಲೋಕಾಯುಕ್ತಕ್ಕೆ ಎಎಪಿ ದೂರು
ಬೆಂಗಳೂರು ಆಗಸ್ಟ್ 02: ಕೈಗಾರಿಕಾ ತರಬೇತಿ ಕೇಂದ್ರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿತರಿಸುವ ಟೂಲ್ಕಿಟ್ ಖರೀದಿ ಹಗರಣ ಕುರಿತು ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ವಿರುದ್ಧ ಆಮ್ ಅದ್ಮಿ ಪಾರ್ಟಿ (ಎಎಪಿ) ಮುಖಂಡರ ನಿಯೋಗ ಲೋಕಾಯುಕ್ತರಿಗೆ ದಾಖಲೆ ಸಹಿತ ದೂರು ಸಲ್ಲಿಸಿತು.
ಮಂಗಳವಾರ ಲೋಕಾಯುಕ್ತ ಕಚೇರಿಗೆ ತೆರಳಿದ ಎಎಪಿ ಮುಖಂಡರ ನಿಯೋಗವು ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ ಅವರಿಗೆ ದೂರು ಸಲ್ಲಿಸಿ ತನಿಖೆ ಆಗ್ರಹಿಸಲಾಯಿತು ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದರು.
ನಂತರ ಸುದ್ದಿಗಾರರಿಗೆ ಈ ಕುರಿತು ಪ್ರತಿಕ್ರಿಯಿಸಿದ ಪೃಥ್ವಿ ರೆಡ್ಡಿ ಅವರು, 'ಕೈಗಾರಿಕಾ ತರಬೇತಿ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ 13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಸಲಕರಣೆಗಳನ್ನು ಒಳಗೊಂಡ ಟೂಲ್ಕಿಟ್ಗಳನ್ನು ಖರೀದಿಸುವ ಗುತ್ತಿಗೆಯಲ್ಲಿ ಭಾರಿ ಅಕ್ರಮ ನಡೆದಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷವು ದಾಖಲೆ ಸಹಿ ಬಹಿರಂಗವಾಗಿ ಮಾತನಾಡಿದೆ. ನ್ಯಾಯಾಂಗ ತನಿಖೆಗೆ ಆಗ್ರಹಿಸಲಾಗಿದೆ. ಇಷ್ಟಾದರೂ ರಾಜ್ಯ ಸರ್ಕಾರವು ಈ ಹಗರಣದ ಕುರಿತು ಯಾವುದೇ ತನಿಖೆಗೆ ಆದೇಶಿಸಿಲ್ಲ ಎಂದು ಬಿಜೆಪಿ ವಿರುದ್ಧ ಅವರು ದೂರಿದರು.

ಬೋಗಸ್ ಕಂಪನಿಗೆ ಸಾಮಗ್ರಿ ಪೂರೈಕೆಗೆ ಅನುಮತಿ
ಎಎಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಟೆಂಡರ್ನಲ್ಲಿ ಭಾಗವಹಿಸಿದ್ದ 'ಇಂಟಲೆಕ್ ಸಿಸ್ಟಮ್ಸ್ ಸಂಸ್ಥೆ'ಯು ಇಲಾಖೆಗೆ ನಕಲಿ ದಾಖಲೆಗಳನ್ನು ನೀಡಿ ತಾಂತ್ರಿಕ ಅನುಮೋದನೆ ಪಡೆದುಕೊಂಡಿದೆ. ಮಂತ್ರಿಗಳ ಪ್ರಭಾವದಿಂದಾಗಿ ಬೋಗಸ್ ಕಂಪನಿಗೆ 22 ಕೋಟಿ ರೂಪಾಯಿ ಮೊತ್ತದ ಸಾಮಗ್ರಿಗಳನ್ನು ಪೂರೈಸಲು ಅನುಮತಿ ನೀಡಿರುವುದು ರಾಜ್ಯ ಬಿಜೆಪಿ ಸರ್ಕಾರದ 40ಪರ್ಸೆಂಟ ಕಮಿಷನ್ ಭ್ರಷ್ಟಾಚಾರಕ್ಕೆ ಸ್ಪಷ್ಟ ಉದಾಹರಣೆ.

ಸಚಿವರನ್ನು ರಕ್ಷಣೆ ಮಾಡುತ್ತಿರುವ ಬಿಜೆಪಿ
ಮೊದಲ ಬಾರಿ ಟೆಂಡರ್ ಕರೆದಾಗ ಇದೇ ಕಂಪನಿಗೆ ತಾಂತ್ರಿಕ ಅರ್ಹತೆ ಇಲ್ಲದ ಕಾರಣಕ್ಕಾಗಿ ಟೆಂಡರ್ ಪ್ರಕ್ರಿಯೆಯನ್ನೇ ರದ್ದುಗೊಳಿಸಿತ್ತು. ನಂತರ ಮರು ಟೆಂಡರ್ ಕರೆಯುವ ಮೂಲಕ ಮತ್ತದೆ ಕಂಪನಿಗೆ ಅನುಕೂಲ ಮಾಡಿಕೊಡಲಾಯಿತು. ಈ ಮೂಲಕ ನಡೆದ ಹಗರಣದಲ್ಲಿ ಪ್ರಮುಖ ಪಾತ್ರವಿರುವ ಉನ್ನತ ಶಿಕ್ಷಣ ಸಚಿವ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣರವರನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿದೆ. ಸರ್ಕಾರ ಕ್ರಮ ಕೈಗೊಳ್ಳದ ಜನರ ವಿರೋಧಿ ನಡೆ ನೋಡಿದರೆ ಗೊತ್ತಾಗುತ್ತಿದೆ ಎಂದು ಅವರು ಕಿಡಿ ಕಾರಿದರು.

11 ಕೋಟಿ ರು. ನಕಲಿ ಬಿಲ್ ನೀಡಿದ ಕಂಪನಿಗೆ ಟೆಂಡರ್
ಎಎಪಿ ರಾಜ್ಯ ವಕ್ತಾರ ಕೆ.ಮಥಾಯಿ ಮಾತನಾಡಿ, 'ಇಂಟಲೆಕ್ ಸಿಸ್ಟಮ್ಸ್ ಸಂಸ್ಥೆಯು ಈ ಹಿಂದೆ ಬೇರೆಯವರಿಗೆ 22 ಕೋಟಿ ರೂಪಾಯಿ ಹಾಗೂ 11 ಕೋಟಿ ರೂಪಾಯಿ ಮೊತ್ತದ ಸಾಮಗ್ರಿಗಳನ್ನು ಪೂರೈಸಿರುವ ಹಾಗೆ ಸೃಷ್ಟಿಸಿರುವ ಜಿಎಸ್ಟಿ ಬಿಲ್ಗಳು ಸಂಪೂರ್ಣ ನಕಲಿಯಾಗಿವೆ. ಜಿಎಸ್ಟಿ ಮಂಡಳಿ ಕೂಡ ಇವು ನಕಲಿ ಬಿಲ್ ಎಂದು ರುಜುವಾತು ಪಡಿಸಿದೆ. ಹೀಗಿದ್ದರು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಮತ್ತು ಮಂತ್ರಿಗಳು ಅದೇ ಕಂಪನಿಗೆ ಕೋಟ್ಯಂತರ ರೂಪಾಯಿ ಮೊತ್ತದ ಗುತ್ತಿಗೆ ನೀಡಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದರು.

ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ ಎಎಪಿ
ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ ಅವರು ಸರ್ಕಾರದ ಒತ್ತಡಕ್ಕೆ ಮಣಿಯದೇ, ನಿಷ್ಪಕ್ಷಪಾತ ತನಿಖೆ ನಡೆಸಿ ಡಾ. ಅಶ್ವತ್ಥ್ ನಾರಾಯಣ್ ಹಾಗೂ ಎಲ್ಲ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಎಎಪಿ ನಿಯೋಗದಲ್ಲಿ ರಾಜ್ಯ ವಕೀಲರ ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ , ರವಿಚಂದ್ರ ಎಸ್ ನೆರಬೆಂಚಿ, ಉಷಾ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications