ಪ್ರಧಾನಿ ಮೋದಿಗೆ ಎಎಪಿ ರಾಜ್ಯಾದ್ಯಕ್ಷ ಮುಖ್ಯಮಂತ್ರಿ ಚಂದ್ರು ಪತ್ರ: ಆಗ್ರಹವೇನು?
ಬೆಂಗಳೂರು, ಸೆಪ್ಟಂಬರ್ 06: ಪ್ರಸಕ್ತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದ ಅಂತ್ಯಕ್ಕೆ ಸಮೀಪಿಸಿದರೂ ಒಂದೇ ಒಂದು ಪೈಸೆ ಅನುದಾನವನ್ನು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಖುದ್ದು ಅವರೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ವಿಷಯ ಕುರಿತು ಆಮ್ ಆದ್ಮಿ ಪಕ್ಷ ಪ್ರಕಟಣೆ ಹೊರಡಿಸಿದೆ. ಪತ್ರದಲ್ಲಿ ಅವರು, ಜಿಎಸ್ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ನಂ.2 ಸ್ಥಾನದಲ್ಲಿರುವ ಕರ್ನಾಟಕಕ್ಕೆ ಈ ಪರಿಯ ಅನ್ಯಾಯ ಎಸಗುತ್ತಿರುವುದು ಏಕೆ? ಎಂದು ಮುಖ್ಯಮಂತ್ರಿ ಚಂದ್ರು ಅವರು ಪ್ರಶ್ನೆ ಮಾಡಿದ್ದಾರೆ.
ಆಗಸ್ಟ್ನಲ್ಲಿ ತೆರಿಗೆ ಸಂಗ್ರಹ ಶೇಕಡಾ 16 ರಷ್ಟು ವೃದ್ಧಿಯಾಗಿದ್ದು 11,116 ಕೋಟಿ ರೂಪಾಯಿಗೆ ಮುಟ್ಟಿದೆ. ಜಿಎಸ್ಟಿ ಪರಿಹಾರವನ್ನು ಕೊಡುತ್ತಿಲ್ಲ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಿಡುಗಾಸೂ ಬಿಡುಗಡೆ ಮಾಡುತ್ತಿಲ್ಲ.

ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜೆಪಿ ಸೋತರೆ ಕೇಂದ್ರದ ಯೋಜನೆಗಳು ಬಂದ್ ಆಗಲಿವೆ ಎಂದಿದ್ದರು. ಅವರ ಮಾತಿನಂತೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆಯೇ? ಎಂದು ಅವರು ಕೇಳಿದ್ದಾರೆ.
23 ಇಲಾಖೆಗಳ 61 ಯೋಜನೆಗಳಿಗೆ ಹಣ ಕೊಡಿ
ಒಟ್ಟು 23 ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುತ್ತಿರುವ 61 ಯೋಜನೆಗಳಿಗೆ ಆಗಸ್ಟ್ ತಿಂಗಳು ಕಳೆದರೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದರೆ ಏನರ್ಥ?. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿಲ್ಲ ಎಂಬ ಕಾರಣಕ್ಕೆ ಈ ಅನ್ಯಾಯವನ್ನು ಎಸಗಲಾಗುತ್ತಿದೆಯೇ?.
25 ಸಂಸದರನ್ನು ಕೊಟ್ಟಿರುವ ಕರ್ನಾಟಕದ ಬಗ್ಗೆ ಅನುದಾನ ವಿಚಾರದಲ್ಲಿ ತಿರಸ್ಕಾರವೇಕೆ? ಕರ್ನಾಟಕ ಭಾರತದಲ್ಲಿ ಇಲ್ಲವೇ? ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದ ರಾಜಧರ್ಮದ ಪಾಠವನ್ನು ನೆನಪಿಸಿಕೊಳ್ಳಬೇಕು.
ಒಂದೆಡೆ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿ ರಾಜ್ಯವನ್ನು ಕಾಂಗ್ರೆಸ್ ಸಂಕಷ್ಟಕ್ಕೆ ತಳ್ಳುತ್ತಿದೆ. ರಾಜ್ಯದಲ್ಲಿ ಪೂರಕ ಮಳೆಯಾಗದೆ ಬರಗಾಲ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಮೂಲಕ ಕನ್ನಡಿಗರ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದರು.

ಗಾಯದ ಮೇಲೆ ಬರೆ ಎಳೆಯಲಾಗಿದೆ
ಇನ್ನೊಂದೆಡ ಕೇಂದ್ರ ಸರ್ಕಾರ ನರೇಗಾ, ಗ್ರಾಮ ಸಡಕ್, ಪಿಎಂ ಆವಾಸ್ ಯೋಜನೆ, ಪಿಂಚಣಿ ಮುಂತಾದ ಕೇಂದ್ರ ಪುರಸ್ಕೃತ ಪ್ರಮುಖ ಇಲಾಖೆಗಳಿಗೆ ಅನುದಾನ ಬಿಡುಗಡೆ ಮಾಡದೆ ಗಾಯದ ಮೇಲೆ ಬರೆ ಎಳೆದಿದೆ ಎಂದು ದೂರಿದರು.
ಈ ಯೋಜನೆಗಳು ಅನುದಾನದ ಕೊರತೆಯಿಂದ ಸ್ಥಗಿತಗೊಂಡರೆ ಬಡವರ, ಶ್ರಮಿಕರ, ಮಹಿಳೆಯರ ಜೀವನೋಪಾಯದ ಮೇಲೆ ಪರಿಣಾಮ ಬೀಳುತ್ತದೆ. ದ್ವೇಷ ರಾಜಕಾರಣವನ್ನು ಬಿಟ್ಟು ರಾಜ್ಯಕ್ಕೆ ನ್ಯಾಯಯುತವಾಗಿ ಸಲ್ಲಬೇಕಿರುವ ಅನುದಾನವನ್ನು ಕೇಂದ್ರ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಸ್ವತಃ ಹೊಣೆಗಾರಿಕೆ ತೆಗೆದುಕೊಂಡು ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ದ್ವೇಷ ರಾಜಕಾರಣ ಸಹಿಸುವುದಿಲ್ಲ
ಈ ಕುರಿತು ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ಆಯಾ ಇಲಾಖೆಗಳ ಮೂಲಕ ಅನುದಾನ ವಿಳಂಬಗೊಳ್ಳುತ್ತಿರುವ ಬಗ್ಗೆ ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಬಿಜೆಪಿ, ಕಾಂಗ್ರೆಸ್ ನಡುವಣ ದ್ವೇಷ ರಾಜಕಾರಣಕ್ಕೆ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ಸಕಾಲಕ್ಕೆ ಅನುದಾನ ಬಿಡುಗಡೆಯಾಗದಿದ್ದರೆ ದೊಡ್ಡ ಮಟ್ಟದ ಹೋರಾಟ ಸಂಘಟಿಸಲಾಗುವುದು. ನಮ್ಮ ರಾಜ್ಯಕ್ಕೆ ಬರಬೇಕಿರುವ ಅನುದಾನವನ್ನು ದಯವಿಟ್ಟು ಬಿಡುಗಡೆ ಮಾಡಿ ಎಂದು ನಾಡಿನ ಜನತೆಯ ಪರವಾಗಿ ವಿನಮ್ರವಾಗಿ ಕೇಳಿಕೊಳ್ಳುತ್ತಿದ್ದೇನೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.












Click it and Unblock the Notifications