ಪರೀಕ್ಷೆ ಬರೆಯಲು SSLC ವಿದ್ಯಾರ್ಥಿಗಳಿಗೆ ಎದುರಾಯ್ತು ಮತ್ತೊಂದು ಆತಂಕ!
ಬೆಂಗಳೂರು, ಜು. 14: ಆಲ್ ದ ಬೆಸ್ಟ್... ಬನ್ನಿ ಮಕ್ಕಳೇ.. ನಿಮಗಾಗಿ ಎಲ್ಲ ಸಿದ್ಧತೆಯಾಗಿದೆ. ಧೈರ್ಯವಾಗಿ ಪರೀಕ್ಷೆ ಬರೆಯಿರಿ, ಆಲ್ ದ ಬೆಸ್ಟ್ ಎಂದು ನಟ-ನಟಿಯಿಂದ ಶುಭಹಾರೈಸಿ ರಾಜ್ಯ ಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ಮಕ್ಕಳಲ್ಲಿ ಧೈರ್ಯ ತುಂಬುವ ನಿಟ್ಟಿನಲ್ಲಿ ವಿನೂತನ ಪ್ರಯೋಗ ಮಾಡಿದೆ.
ಆದರೆ ಇದೇ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಬೇಕಾಗಿರುವ ಮತ್ತೊಂದು ಅಗತ್ಯ ಸೌಲಭ್ಯ ಒದಗಿಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಲಕ್ಷ ತೋರಿಸುತ್ತಿದೆ ಎಂಬ ಗಂಭೀರ ಆರೋಪ ಎದುರಾಗಿದೆ. ಮಕ್ಕಳು ಪರೀಕ್ಷೆ ಬರೆಯಲು ಸ್ಯಾನಿಟೈಸರ್, ಸೇರಿದಂತೆ ಸೂಕ್ತ ವ್ಯವಸ್ಥೆ ಕೊಡುವುದಾಗಿ ಹೇಳುತ್ತಿರುವ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೇಕಾಗಿರುವ ಮಹತ್ವದ ಅಂಶವನ್ನೇ ಮರೆತಿದೆ ಎಂಬ ಆರೋಪ ಕೇಳಿ ಬಂದಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷೆ ಸುಸೂತ್ರವಾಗಿ ನಡೆಯಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹಲವು ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಆದರೆ ಆ ಕ್ರಮಗಳೆಲ್ಲವೂ ಕೇವಲ ಕಾಗದದಲ್ಲಿನ ಆದೇಶಗಳಾಗಿವೆ. ಅವುಗಳಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ವಿದ್ಯಾರ್ಥಿಗಳ ಪರವಾಗಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಪರೀಕ್ಷೆ ಬರೆಯಲಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಬಹುದೊಡ್ಡ ಸಮಸ್ಯೆಯನ್ನು ಎದುರಿಸುತ್ತಿದ್ದು, ಅದನ್ನು ತಕ್ಷಣ ಪರಿಹರಿಸುವಂತೆ ಎಎಪಿ ಪ್ರತಿಭಟನೆ ಮಾಡಿದೆ, ಜೊತೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆ ಏನು?

ಎಎಪಿಯಿಂದ ಮುತ್ತಿಗೆ ಪ್ರಯತ್ನ!
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅಗತ್ಯವಾಗಿರುವ ಹಾಲ್ಟಿಕೆಟ್ ಕೊಡದೇ ಹಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳನ್ನು ಸತಾಯಿಸುತ್ತಿದ್ದು, ಅಂತಹ ಖಾಸಗಿ ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ. ಈ ಬೇಡಿಕೆ ಈಡೇರಿಸಲು ಆಗ್ರಹಿಸಿ ಎಎಪಿಯ ನೂರಾರು ಕಾರ್ಯಕರ್ತರು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ಜುಲೈ 19 ಹಾಗೂ 22 ರಂದು ಎಸ್ಎಸ್ಎಲ್ಸಿ ಪರೀಕ್ಷೆ ಆಯೋಜಿಸಲಾಗಿದೆ. ಎಸ್ಎಸ್ಎಲ್ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಕಳೆದ ಜೂನ್ 29ರಿಂದಲೇ ಮಂಡಳಿಯ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆಯಾ ಶಾಲೆಗಳ ಮುಖ್ಯೋಪಾದ್ಯಾಯರು ವಿದ್ಯಾರ್ಥಿಗಳಿಗೆ ಒದಗಿಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಆದರೆ ಅದಾಗುತ್ತಿಲ್ಲ ಎಂಬುದು ವಿದ್ಯಾರ್ಥಿಗಳು ಹಾಗೂ ಎಎಪಿ ಆರೋಪ.

ಅಸಮರ್ಥ ಶಿಕ್ಷಣ ಸಚಿವ ಸುರೇಶ್ ಕುಮಾರ್
ಹಾಲ್ಟಿಕೆಟ್ ಸಿಗದೇ ಪರದಾಡುತ್ತಿರುವ ವಿದ್ಯಾರ್ಥಿಗಳ ಸಂಕಷ್ಟ ನಿವಾರಿಸಲು, ಬೆಂಗಳೂರಿನ ಮಲ್ಲೇಶ್ವರದ ಪರೀಕ್ಷಾ ಮಂಡಳಿಯ ಕಚೇರಿಯ ಎದುರು ಪ್ರತಿಭಟಿಸಿದ ಎಎಪಿ ಕಾರ್ಯಕರ್ತರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಆತಂಕದ ಮಧ್ಯೆ ಪರೀಕ್ಷೆ ಬರೆಯಲು ಮುಂದಾಗಿರುವ ವಿದ್ಯಾರ್ಥಿಗಳಿಗೆ ಯಾವುದೇ ಅಡ್ಡಿಯಿಲ್ಲದೆ ಪರೀಕ್ಷಾ ಪ್ರವೇಶಪತ್ರ ಕೊಡಬೇಕು. ಪ್ರವೇಶಪತ್ರ ಕೊಡದೇ ಸತಾಯಿಸುತ್ತಿರುವ ಶಾಲೆಗಳ ವಿರುದ್ಧ ಗೂಂಡಾ ಕಾಯ್ದೆಯಿಡಿ ಕ್ರಮ ಕೈಗೊಳ್ಳಬೇಕು. ಇದೆಲ್ಲವನ್ನು ಮಾಡಲು ಅಸಮರ್ಥ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬಹು ಅಂಗಾಂಗ ವೈಕಲ್ಯದಿಂದ ಬಳಲುತ್ತಿರುವ ಸರ್ಕಾರ ಮುಂದಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಆನ್ಲೈನ್ ಮೂಲಕ ಪ್ರವೇಶಪತ್ರ ಕೊಡಿ
ಇದೇ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್ ದಾಸರಿ, "ಕೋವಿಡ್ ಹಾಗೂ ಲಾಕ್ಡೌನ್ನಿಂದಾಗಿ ಪೋಷಕರು ಆದಾಯವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಖಾಸಗಿ ಶಾಲೆಗಳಿಗೆ ಕಾಣುತ್ತಿಲ್ಲ. ಶೇಕಡಾ 70ರಷ್ಟು ಮಾತ್ರ ಶುಲ್ಕವನ್ನು ಮಾತ್ರ ಪಡೆಯಬೇಕೆಂಬ ನಿಯಮವನ್ನು ಅವು ಗಾಳಿಗೆ ತೂರಿವೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಾಲೆಗಳಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಎಷ್ಟು ಕಮಿಷನ್ ಬರುತ್ತಿದೆ? ವಿದ್ಯಾರ್ಥಿಗಳು ಹಾಗೂ ಪೋಷಕರ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳದ ಸುರೇಶ್ ಕುಮಾರ್ ಶಿಕ್ಷಣ ಸಚಿವರಾಗಿರುವುದು ರಾಜ್ಯದ ದುರಾದೃಷ್ಟ. ಅಸಮರ್ಥರಾಗಿರುವ ಅವರು ತಕ್ಷಣವೇ ರಾಜೀನಾಮೆ ನೀಡಬೇಕು" ಎಂದು ಆಗ್ರಹಿಸಿದರು.
ತಕ್ಷಣವೇ ಎಲ್ಲ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪ್ರವೇಶಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಹಕ್ಕೊತ್ತಾಯ ಪತ್ರವನ್ನು ಮಂಡಳಿಯ ನಿರ್ದೇಶಕರಿಗೆ ಇದೇ ಸಂದರ್ಭದಲ್ಲಿ ಕೊಡಲಾಗಿದೆ.
Recommended Video

ಮಕ್ಕಳ ಬದುಕಿನೊಂದಿಗೆ ಚೆಲ್ಲಾಟ
"ವಿದ್ಯಾರ್ಥಿಗಳು ಹಾಗೂ ಪೋಷಕರ ಬದುಕಿನ ಜೊತೆ ಖಾಸಗಿ ಶಾಲೆಗಳು ಚೆಲ್ಲಾಟ ಆಡುತ್ತಿವೆ. ದುಬಾರಿ ಶುಲ್ಕ ಕಟ್ಟಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ಕೊಡುತ್ತಿಲ್ಲ. ವಿದ್ಯಾರ್ಥಿಗಳ ಬಗ್ಗೆ ಸ್ವಲ್ಪವಾದರೂ ಕಾಳಜಿಯಿದ್ದರೆ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ನೇರವಾಗಿ ಪ್ರವೇಶಪತ್ರ ವಿತರಿಸಬೇಕು. ಶುಲ್ಕದಂಧೆಯಲ್ಲಿ ತೊಡಗಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವ ಬದಲು ಜಾಣ ಕುರುಡು ಪ್ರದರ್ಶಿಸುತ್ತಿರುವ ಸರ್ಕಾರಕ್ಕೆ ನಾಚಿಕೆಯಾಗಬೇಕು. ಈ ಕಾರಣಕ್ಕೆ ವಿದ್ಯಾರ್ಥಿಗಳು ಅಥವಾ ಪೋಷಕರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ನೇರ ಹೊಣೆ" ಎಂದು ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಕ್ರೋಶ ವ್ಯಕ್ತಪಡಿಸಿದರು.
ಆನ್ಲೈನ್ ಶಿಕ್ಷಣ, ಮೊಬೈಲ್ ನೆಟ್ವರ್ಕ ಸಮಸ್ಯೆ ಪರಿಹರಿಸಲು ಮುಂದಾಗಿರುವ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳ ಮತ್ತೊಂದು ನೈಜ ಸಮಸ್ಯೆ ನೀಗಿಸಬೇಕಿದೆ. ಇಲ್ಲದಿದ್ದರೆ ಎಸ್ಎಸ್ಎಲ್ಸಿ ಪರೀಕ್ಷೆ ಎಂಬುದು ಕೇವಲ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಫಿಯಾದ ಒತ್ತಡಕ್ಕೆ ಮಣಿದು ಮಾಡಲಾಗುತ್ತಿರುವ ಕೆಲಸ ಎಂಬ ಆರೋಪ ನಿಜವಾದಂತಾಗುತ್ತದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಯಪಡಿಸಿದ್ದಾರೆ. ಸ್ಯಾನಿಟೈಸರ್ ಜೊತೆಗೆ ಪರೀಕ್ಷೆ ಬರೆಯಲು ಅಗತ್ಯವಾಗಿರುವ ಹಾಲ್ಟಿಕೆಟ್ನ್ನು ಒದಗಿಸುವ ಮಹತ್ವದ ಜವಾಬ್ದಾರಿ ರಾಜ್ಯ ಶಿಕ್ಷಣ ಇಲಾಖೆ ಮೇಲಿದೆ!












Click it and Unblock the Notifications