"ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಬಿಜೆಪಿಯವರ ಹಣೆಯಲ್ಲಿ ಬರೆದಿಲ್ಲ"
ಬೆಂಗಳೂರು, ಅಕ್ಟೋಬರ್ 25: ಬಿಜೆಪಿ ಅಧಿಕಾರಕ್ಕೆ ಬಂದಾಗ, ಏನು ಬೇಕಾದರೂ ಮಾಡಲಿ. ಅಧಿಕಾರಕ್ಕೆ ಬರುವುದು, ಜಿಬಿಎ ರದ್ದುಗೊಳಿಸುವುದು ಅವರ ಹಣೆಯಲ್ಲಿ ಬರೆದಿಲ್ಲ. ಇದು ಹೀಗೆ ಮುಂದುವರಿಯಲಿದೆ. ಅವರಿಗೆ ಜಿಬಿಎ ಬೇಡವಾದರೆ ಅವರು ಮುಂಬರುವ ಪಾಲಿಕೆಗಳ ಚುನಾವಣೆಯನ್ನು ಬಹಿಷ್ಕರಿಸಲಿ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಚುನಾವಣೆಯಿಂದ ಹಿಂದೆ ಸರಿಯಲಿ ನೋಡೋಣ. ಅವರ ಕಾರ್ಯಕರ್ತರೆಲ್ಲರೂ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗುತ್ತಿದ್ದಾರೆ ಎಂದು ತಿಳಿಸಿದರು
ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಎ ಖಾತಾ ಹಾಗೂ ಬಿ ಖಾತಾ ಪರಿವರ್ತನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಜೆಡಿಎಸ್ ಆರೋಪ ಮಾಡಿದೆ. ಬಹಿರಂಗ ಚರ್ಚೆಗೆ ಬನ್ನಿ ಎಂದು ನಾನು ಕರೆಯುತ್ತಲೇ ಇದ್ದೇನೆ. ಎ ಖಾತಾ ಬಿ ಖಾತಾ ವಿಚಾರದಲ್ಲಿ ಯಾವ ಭ್ರಷ್ಟಾಚಾರ ನಡೆಯುತ್ತಿದೆ? ಬೆಂಗಳೂರು ನಾಗರಿಕರ ಆಸ್ತಿ ದಾಖಲೆ ಸರಿಪಡಿಸಿಕೊಳ್ಳಲು, ಅವರಿಗೆ ಮುಂದೆ ಬ್ಯಾಂಕ್ ಸಾಲ ಹಾಗೂ ಇತರೆ ಸೌಲಭ್ಯ ಸಿಗಬೇಕು, ಜನರಿಗೆ ಉತ್ತಮ ಸೌಕರ್ಯ ಒದಗಿಸಬೇಕು, ಜನರು ತೆರಿಗೆ ಪಾವತಿಸುವಂತಾಗಬೇಕು ಎಂಬ ಉದ್ದೇಶದಿಂದ ನಾವು ಈ ಯೋಜನೆ ಮಾಡುತ್ತಿದ್ದೇವೆ.

ಜನರ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ. ನಮ್ಮ ಈ ಕಾರ್ಯವನ್ನು ದೇಶದ ಯಾವುದೇ ನಗರದಲ್ಲಿ ಮಾಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ನಮ್ಮ ಈ ಯೋಜನೆಗೆ ಸಾವಿರಾರು ಜನ ಅರ್ಜಿ ಹಾಕುತ್ತಿದ್ದಾರೆ. ಅವರ ಕಾಲದಲ್ಲಿ ಯಾಕೆ ಆಸ್ತಿಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡಲಿಲ್ಲ? ಇ ಖಾತಾ ಮಾಡಿಕೊಡಲು ಅವರಿಂದ ಆಗಲಿಲ್ಲ. ಅವರಿಗೆ ಇಂತಹ ಯಾವುದೇ ಆಲೋಚನೆಗಳು ಇರಲಿಲ್ಲ. ಕುಮಾರಸ್ವಾಮಿ ಅವರು ಕೈಗಾರಿಕೆ ತರುತ್ತೇನೆ ಎನ್ನುತ್ತಾರಲ್ಲ, ತರಲಿ. ರಾಮನಗರದಲ್ಲಿ ಕೈಗಾರಿಕೆ ಮಾಡುತ್ತಾರೋ, ಬಿಡದಿಯಲ್ಲಿ ಮಾಡುತ್ತಾರೋ, ಮಂಡ್ಯದಲ್ಲಿ ಮಾಡುತ್ತಾರೋ ಎಲ್ಲಿ ಮಾಡುತ್ತಾರೆ ಎಂದು ಅವರೇ ಪಟ್ಟಿ ನೀಡಲಿ. ಅಗತ್ಯ ಭೂಮಿ ಬಗ್ಗೆ ಅರ್ಜಿ ಹಾಕಲಿ. ಸುಮ್ಮನೆ ಖಾಲಿ ಮಾತಾಡಿದರೆ ಯಾರೂ ಒಪ್ಪುವುದಿಲ್ಲ ಎಂದು ತಿಳಿಸಿದರು.
ಸುರಂಗ ರಸ್ತೆಗೆ ಸಂಸದ ತೇಜಸ್ವಿ ಸೂರ್ಯ ಅವರ ವಿರೋಧದ ಕುರಿತು ಮಾತನಾಡಿ, ಯಾರೂ ಏನಾದರೂ ವಿರೋಧ ಮಾಡಿಕೊಳ್ಳಲಿ. ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಸರ್ಕಾರ ಉತ್ತಮ ಕೆಲಸ ಮಾಡಿ ಹೆಸರು ಮಾಡಬಾರದು ಎಂಬುದು ಅವರ ಉದ್ದೇಶ. ನಾನು ಈ ಯೋಜನೆಗೆ ಯಾವುದೇ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ. ಒಂದು ಸಣ್ಣ ಭಾಗದಲ್ಲಿ ಈ ರಸ್ತೆ ಹಾದುಹೋಗುತ್ತದೆ. ಇದನ್ನು ಪರಿಶೀಲನೆ ಮಾಡುತ್ತೇನೆ. ಸಮಸ್ಯೆ ಇದ್ದರೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಲಾಲ್ ಬಾಗ್ ಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ. ಲಾಲ್ ಬಾಗ್ ನ ಸ್ವಲ್ಪ ಜಾಗವನ್ನು ಈ ಯೋಜನೆ ಕಾಮಗಾರಿ ನಡೆಯುವವರೆಗೂ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ ಮತ್ತೆ ಲಾಲ್ ಬಾಗ್ ಉದ್ಯಾನಕ್ಕೆ ಹಿಂತಿರುಗಿಸುತ್ತೇವೆ ಎಂದು ತಿಳಿಸಿದರು.
ಸಾವಿರಾರು ಇತಿಹಾಸವಿರು ವ ಜಾಗ ಎಂದು ತೇಜಸ್ವಿ ಸೂರ್ಯ ಹೇಳುತ್ತಿದ್ದಾರೆ ಎಂದಾಗ, "ಸುರಂಗ ರಸ್ತೆಯನ್ನು ಭೂಮಿಯ ಒಳಗೆ ಕೊರೆಯಲಾಗುವುದು. ಹೊರಗೆ ಮಾಡಲು ಆಗುವುದಿಲ್ಲ. ಅವರ ಮಾತು ಕೇಳಿಕೊಂಡು ಯೋಜನೆ ನಿಲ್ಲಿಸಲು ಆಗುವುದಿಲ್ಲ. ಹಾಗಿದ್ದರೆ ಮುಂಬೈ ನಲ್ಲಿ ಯಾಕೆ ಭೂಮಿ ಕೊರೆದು ಸುರಂಗ ರಸ್ತೆ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಯಾಕೆ ಮಾಡುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ನಾನು ಆತನ ಮಾತಿಗೆ ಬಾಗುವುದಿಲ್ಲ. ಹೋರಾಟ ಮಾಡುವವರು ಮಾಡುತ್ತಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಜನರಿಗಾಗಿ ಕೆಲಸ ಮಾಡುತ್ತಿದ್ದೇವೆ. ಅವರ ಕಾಲದಲ್ಲಿ ಬೆಂಗಳೂರಿಗಾಗಿ ಯಾವುದೇ ಒಳ್ಳೆಯ ಕೆಲಸ ಮಾಡಲು ಆಗಲಿಲ್ಲ. ತೇಜಸ್ವಿ ಸೂರ್ಯ ಎಂದರೆ ಖಾಲಿ ಟ್ರಂಕ್ ಎಂದು ಕಿಡಿಕಾರಿದರು.












Click it and Unblock the Notifications