ನನ್ನ ಜೀವ ಹೋದರೂ ಪರವಾಗಿಲ್ಲ, ಸರಕಾರದ ವಿರುದ್ದ ಅಹೋರಾತ್ರಿ ಧರಣಿ: ಕುಮಾರಸ್ವಾಮಿ
ಬೆಂಗಳೂರು, ಅ 10: ಸರಕಾರ ಎಲ್ಲಾ ವಿಚಾರದಲ್ಲೂ ಮಾತು ತಪ್ಪಿದೆ ಎಂದು ಆಪಾದಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸರಕಾರದ ವಿರುದ್ದ ಅಹೋರಾತ್ರಿ ಧರಣಿ ನಡೆಸಲು ಮುಂದಾಗಿದ್ದಾರೆ.
ಈ ಬಗ್ಗೆ ಸಾಲುಸಾಲು ಟ್ವೀಟ್ ಮಾಡಿರುವ ಎಚ್ಡಿಕೆ, "ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಈ ಬಗ್ಗೆ ಮೌನಕ್ಕೆ ಶರಣಾಗಿದೆ"ಎಂದು ಕಿಡಿಕಾರಿದ್ದಾರೆ.
ಜೀವ ಮುಖ್ಯ ಅನಿಸಿದರೆ ಹೀಗೆ ಮಾಡಿ: ಎಚ್.ಡಿ. ಕುಮಾರಸ್ವಾಮಿ!
"ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದ ಮುಖ್ಯಮಂತ್ರಿಗಳು ಇದುವರೆಗೂ ಸಾಂತ್ವನ ಕೇಂದ್ರಗಳಿಗೆ ಒಂದು ನಯಾಪೈಸೆ ಬಿಡುಗಡೆ ಮಾಡದಿರುವುದು ಕೋವಿಡ್-19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ" ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
"ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ. ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ,ಆತ್ಮವಿಶ್ವಾಸ ಮೂಡಿಸುತ್ತಿವೆ".
'ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳ ಸಿಬ್ಬಂದಿಗೂ ವೇತನವಿಲ್ಲ. ದೂರು ದುಮ್ಮಾನ ಪರಿಹರಿಸುವವರು ಯಾರು" ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, "ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ" ಎಂದು ದೂರಿದ್ದಾರೆ.
ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯಸರ್ಕಾರ ಸೋಮವಾರದೊಳಗೆ ವಿದ್ಯಾಗಮನ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ಕೂರುವುದಾಗಿ ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ.
— H D Kumaraswamy (@hd_kumaraswamy) October 10, 2020
2/6
"ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಈ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು"ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಜೊತೆಗೆ, "ಮಕ್ಕಳು ಮತ್ತು ಶಿಕ್ಷಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯಸರ್ಕಾರ ಸೋಮವಾರದೊಳಗೆ ವಿದ್ಯಾಗಮನ ಶಿಕ್ಷಣದ ಯಡವಟ್ಟನ್ನು ನಿಲ್ಲಿಸದಿದ್ದರೆ ವಿಧಾನಸೌಧ ಇಲ್ಲವೇ ಸ್ವಾತಂತ್ರ್ಯ ಉದ್ಯಾನದ ಬಳಿ ಅಹೋರಾತ್ರಿ ಧರಣಿ ಕೂರುವುದಾಗಿ"ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.