ABP News CVoter Exit Poll: ಕಮರಿದ ಕಮಲ ನಾಯಕರ ಕನಸು, ಅರಳಿದ ಕೈ
ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. 224 ಕ್ಷೇತ್ರಗಳಿಗೆ ಒಂದೇ ಹಂತದ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು ಜನಪ್ರತಿನಿಧಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಇನ್ನೂ ಮೂರೇ ದಿನದಲ್ಲಿ ಅಂದರೆ ಶನಿವಾರ ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ಅಧಿಕಾರ ನಡೆಸುವವರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಶನಿವಾರವೇ ಸಿಗಲಿದೆ. ಅದಾಗಲೇ ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಯಾವ ಪಕ್ಷ ಬಹುಮತ ಪಡೆಯಲಿದೆ ಎನ್ನುವ ಬಗ್ಗೆ ಮಾಹಿತಿಯನ್ನು ಬಹಿರಂಗ ಪಡಿಸಿವೆ. ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದೆ.

ಎಬಿಪಿ ನ್ಯೂಸ್-ಸಿವೋಟರ್ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ಗೆ ಬಹುಮತ ಸಿಗಲಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ 81ರಿಂದ 101 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನೂ ಬಿಜೆಪಿ 66 ರಿಂದ 86 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದರೆ, ಜೆಡಿಎಸ್ 20ರಿಂದ 27 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ.
ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 7 ಗಂಟೆಗೆ ಮತದಾನ ಕೇಂದ್ರಗಳು ತೆರೆದಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಿತು. 224 ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಪ್ರಾಥಮಿಕವಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಕರ್ನಾಟಕ ಚುನಾವಣಾ ಪ್ರಚಾರ ಸೋಮವಾರ (ಮೇ 8) ಅಂತ್ಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ನ ಮಾಜಿ ಪ್ರಧಾನ ಕಾರ್ಯದರ್ಶಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಎಲ್ಲರೂ ಚುನಾವಣಾ ಪ್ರಚಾರದಲ್ಲಿ ಭರ್ಜರಿ ಮತಬೇಟೆ ಮಾಡಿದ್ದಾರೆ.
ರಾಜ್ಯದಾದ್ಯಂತ 58,545 ಮತಗಟ್ಟೆಗಳಲ್ಲಿ 5,31,33,054 ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅರ್ಹರಾಗಿದ್ದರು. ಇಂದು ಸರಿಸುಮಾರು ಶೇ.65ಕ್ಕೂ ಹೆಚ್ಚು ಮತದಾನ ಆಗಿದೆ. ಮೇ 13 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications