ಉಚಿತ ಬಸ್ ಪಾಸ್ ವಾಪಸಾತಿ ವಿರೋಧಿಸಿ ಎಬಿವಿಪಿ ಪ್ರತಿಭಟನೆ
ಬೆಂಗಳೂರು, ಜೂನ್ 14: ಹೈಸ್ಕೂಲ್, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಾಪಾಸಾತಿ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಶೇಷಾದ್ರಿಪುರಂನಿಂದ ಮೌರ್ಯ ವೃತ್ತದವರೆಗೆ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಘೋಷಣೆ ಕೂಗಿದರು.
ಹೈಸ್ಕೂಲ್-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಇಲ್ಲ
ರಾಜ್ಯದಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ಹಾಗೂ ಇನ್ನಿತರ ಎಲ್ಲ ವರ್ಗಗಳ ಬಡ ವಿದ್ಯಾರ್ಥಿಗಳಿಗೆ 2018-19ನೇ ಸಾಲಿನಲ್ಲಿ ಉಚಿತ ಬಸ್ ಪಾಸ್ ನೀಡುವದಾಗಿ ಬಜೆಟ್ನಲ್ಲಿ ಘೋಷಿಸಲಾಗಿತ್ತು. ಆದರೆ ಈಗಾಗಲೇ ಶಾಲಾ-ಕಾಲೇಜುಗಳ ಆರಂಭಗೊಂಡು ತಿಂಗಳು ಗತಿಸಿದರೂ ಬಸ್ ಪಾಸ್ ವಿತರಣೆ ಪೂರ್ಣಗೊಂಡಿಲ್ಲ.
ಇಂತಹ ಸಂದರ್ಭದಲ್ಲೇ ಇಡೀ ಬಸ್ ಪಾಸ್ ನೀತಿಯಲ್ಲಿ ಬದಲಿಸಿದರೆ ವಿದ್ಯಾರ್ಥಿಗಳಿಗೆ ಭಾರಿ ಸಮಸ್ಯೆ ಉಂಟಾಗಲಿದೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ೋಷಿಸಿದಂತೆ ಉಚಿತ ಬಸ್ ಪಾಸ್ ವ್ಯವಸ್ಥೆ ಮುಂದುವರಿಸದಿದ್ದರೆ ರಾಜ್ಯಾದ್ಯಂತ ಹೋರಾಟ ವಿಸ್ತರಿಸಲಾಗುವುದು ಎಂದು ಎಬಿವಿಪಿ ಎಚ್ಚರಿಕೆ ನೀಡಿದೆ.
ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವುದಾಗಿ ಹಿಂದಿನ ಸರ್ಕಾರ ಹೇಳಿತ್ತು, ನಂತರ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ನೀಡುವುದಾಗಿ ತಿಳಿಸಿತ್ತು, ಆದರೆ ಇದೀಗ ರಾಜ್ಯ ಸರ್ಕಾರ ಕೇವಲ ಒಂದರಿಂದ 7ನೇ ತರಗತಿವರೆಗೆ ಮಾತ್ರ ಉಚಿತ ಬಸ್ ಪಾಸ್ ನೀಡುವ ನಿರ್ಧಾರದಿಂದ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ನಿರ್ಧರಿಸಿರುವುದಾಗಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದಾರೆ. ಉಚಿತ ಬಸ್ಪಾಸ್ನ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ರಾಜ್ಯದ ಸಾರಿಗೆ ನಿಗಮಗಳು 500ಕೋಟಿ ನಷ್ಟದಲ್ಲಿದೆ. ಹೀಗಾಗಿ ಸಾರಿಗೆ ಇಲಾಖೆಗೆ ಸರ್ಕಾರಿ ಅನುದಾನದ ಅಗತ್ಯವಿದೆ. ಇದಕ್ಕಾಗಿ 629 ಕೋಟಿ ರೂ. ಅನುದಾನದ ಅಗತ್ಯವಿದೆ ಎಂದಿದ್ದಾರೆ.
ಸಚಿವರ ಹೇಳಿಕೆಯನ್ನು ವಿರೋಧಿಸಿ ಬಡ ವರ್ಗದ , ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಸ್ ಪಾಸ್ ನೀಡಿದರೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಉಚಿತ ಬಸ್ ಪಾಸ್ ವಿತರಣೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಯಾವುದೇ ರೀತಿಯ ಹೊರೆಯಾಗುವುದಿಲ್ಲ, ಬದಲಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ನಗರ ಸಂಘಟನಾ ಕಾರ್ಯದರ್ಶಿ ಸಚಿನ್ ತಿಳಿಸಿದ್ದಾರೆ.