ಯಡಿಯೂರಪ್ಪ ವಿರುದ್ಧ ಎಫ್ಐಆರ್, ರಾಜ್ಯಪಾಲರಿಗೆ ಬಿಜೆಪಿ ದೂರು
ಬೆಂಗಳೂರು, ಆ.21 : ಕರ್ನಾಟಕ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳವನ್ನು ದುರುಪಯೋಗ ಪಡಿಸಿಕೊಂಡು ಯಡಿಯೂರಪ್ಪ ವಿರುದ್ಧ ಸುಳ್ಳು ಮೊಕದ್ದಮೆ ದಾಖಲು ಮಾಡುತ್ತಿದೆ ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ರಾಜ್ಯ ಸರ್ಕಾರವನ್ನು ವಜಾಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.
ಸೋಮವಾರ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಕೇಂದ್ರ ಸಚಿವ ಅನಂತ ಕುಮಾರ್ ನೇತೃತ್ವದ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿತು.
ಎಸಿಬಿಯನ್ನು ದುರುಪಯೋಗ ಮಾಡಿಕೊಂಡು ಕರ್ನಾಟಕ ಸರ್ಕಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸುಳ್ಳು ಮೊಕದ್ದಮೆ ದಾಖಲು ಮಾಡುತ್ತಿದೆ. ಸರ್ಕಾರವನ್ನು ವಜಾಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಬಿಜೆಪಿ ನಿಯೋಗ ಮನವಿ ಸಲ್ಲಿಸಿತು.
ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಎಸಿಬಿ ಎರಡು ಎಫ್ಐಆರ್ ದಾಖಲು ಮಾಡಿದೆ. ಈ ಎಫ್ಐಆರ್ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ...

ರಾಜಭವನಕ್ಕೆ ಪಾದಯಾತ್ರೆ
ಬಿಜೆಪಿ ನಾಯಕರ ನಿಯೋಗ ವಿಧಾನಸೌಧದಲ್ಲಿ ಡಾ.ಬಿ.ಎಸ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಿದರು.

ಸರ್ಕಾರದ ವಜಾಕ್ಕೆ ಜಗದೀಶ್ ಶೆಟ್ಟರ್ ಆಗ್ರಹ
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, 'ರಾಜ್ಯ ಸರ್ಕಾರ ಎಸಿಬಿಯನ್ನು ದುರುಪಯೋಗ ಮಾಡಿಕೊಂಡಿದೆ ಎಂಬುದಕ್ಕೆ ಕೆಐಎಡಿಬಿ ಅಧಿಕಾರಿ ಬಸವರಾಜೇಂದ್ರ ಅವರು ಬರೆದಿರುವ ಪತ್ರವೇ ಸಾಕ್ಷಿ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರನ್ನು ಹತ್ತಿಕ್ಕಲು ಸರ್ಕಾರ ಎಸಿಬಿಯನ್ನು ಬಳಸಿಕೊಳ್ಳುತ್ತಿದೆ. ಸರ್ಕಾರವನ್ನು ವಜಾಗೊಳಿಸಲು ಮನವಿ ಸಲ್ಲಿಸಲಾಗಿದೆ' ಎಂದು ಹೇಳಿದರು.

ಸಿದ್ದು ಸರ್ಕಾರದ ಕೌಂಟ್ ಡೌನ್ ಆರಂಭ
ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಅನಂತ ಕುಮಾರ್, 'ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕೌಂಟ್ ಡೌನ್ ಆರಂಭವಾಗಿದೆ. ಶಿವರಾಮ ಕಾರಂತ ಬಡಾವಣೆ ಯೋಜನೆಯನ್ನು ಕೈಕೋರ್ಟ್ ರದ್ದು ಮಾಡಿದೆ. ಹೀಗಿರುವಾಗ ಯಡಿಯೂರಪ್ಪ ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡುತ್ತಾರೆ ಎಂಬುದು ಹಾಸ್ಯಸ್ಪದ' ಎಂದರು.

ಸಿದ್ದರಾಮಯ್ಯ ವಿರುದ್ಧ 15ದೂರು ದಾಖಲು
ಕೆ.ಎಸ್.ಈಶ್ವರಪ್ಪ ಮಾತನಾಡಿ, 'ಸಿದ್ದರಾಮಯ್ಯ ವಿರುದ್ಧ ಎಸಿಬಿಯಲ್ಲಿ ಹದಿನೈದು ದೂರು ದಾಖಲಾಗಿದೆ. ಹಲವು ಸಚಿವರ ವಿರುದ್ಧ ದೂರುಗಳು ದಾಖಲಾಗಿವೆ. ಆದರೆ, ಒಂದೇ ಒಂದು ದೂರಿನ ಕುರಿತು ಎಫ್ಐಆರ್ ದಾಖಲಾಗಿಲ್ಲ. ಮೊದಲು ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಬೇಕು' ಎಂದು ಈಶ್ವರಪ್ಪ ಒತ್ತಾಯಿಸಿದರು.

ಬಿಜೆಪಿ ನಿಯೋಗದಲ್ಲಿ ಯಾರಿದ್ದರು?
ಬಿಜೆಪಿ ನಾಯಕರ ನಿಯೋಗದಲ್ಲಿ ಅನಂತ ಕುಮಾರ್, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಅರವಿಂದ ಲಿಂಬಾವಳಿ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಶೋಭಾ ಕರಂದ್ಲಾಜೆ ಮುಂತಾದ ನಾಯಕರಿದ್ದರು.












Click it and Unblock the Notifications