ಎಸಿಬಿ ಎಫ್ಐಆರ್ : ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು, ಅ.23 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಆಗಸ್ಟ್ 28ರ ತನಕ ಯಡಿಯೂರಪ್ಪ ಬಂಧಿಸದಂತೆ ಎಸಿಬಿ ಪೊಲೀಸರಿಗೆ ಸೂಚನೆ ಕೊಟ್ಟಿದೆ.
ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ವಿಚಾರಣೆಯನ್ನು ಆಗಸ್ಟ್ 28ಕ್ಕೆ ಮುಂದೂಡಿದರು. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಎಂದು ಯಡಿಯೂರಪ್ಪ ಮಾಡಿರುವ ಮನವಿಯ ವಿಚಾರಣೆ ಇನ್ನೂ ಬಾಕಿ ಇದೆ.

ಬಿ.ಎಸ್.ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು. ಎಸಿಬಿ ಪರವಾಗಿ ರವಿಮರ್ಮ ಕುಮಾರ್ ವಾದ ಮಂಡಿಸಿದರು.
ವಾದ ಮಂಡನೆ ಆಲಿಸಿದ ಕೋರ್ಟ್ ಆಗಸ್ಟ್ 28ರ ತನಕ ಯಡಿಯೂರಪ್ಪ ಬಂಧಿಸದಂತೆ ಎಸಿಬಿ ಪೊಲೀಸರಿಗೆ ಸೂಚನೆ ನೀಡಿತು. ಇಂದು ವಿಚಾರಣೆಗೆ ಹಾಜರಾಗಬೇಕು ಎಂದು ಎಸಿಬಿ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿತ್ತು.
ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಲು ಮೀಸಲಿಟ್ಟ ಭೂಮಿಯನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿನೋಟಿಫೈ ಮಾಡಿದ್ದಾರೆ ಎಂಬುದು ಆರೋಪವಾಗಿದೆ. ಯಡಿಯೂರಪ್ಪ ವಿರುದ್ಧ ಡಾ.ಡಿ.ಅಯ್ಯಪ್ಪ ಎಸಿಬಿಗೆ ದೂರು ನೀಡಿದ್ದರು.












Click it and Unblock the Notifications