ಸಪ್ತ ಭ್ರಷ್ಟರ ಬೇಟೆಯಾಡಿದ ಎಸಿಬಿ ಅಧಿಕಾರಿಗಳು
ಬೆಂಗಳೂರು, ಫೆಬ್ರವರಿ 02: ರಾಜ್ಯದ ವಿವಿಧ ಇಲಾಖೆಗಳ ಏಳು ಮಂದಿ ಭ್ರಷ್ಟರ ನಿವಾಸ ಮತ್ತು ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಏಕ ಕಾಲಕ್ಕೆ ರಾಜ್ಯದಲ್ಲಿ 30 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿ ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
ಬೆಂಗಳೂರಿನ ವಿಜಯನಗರದಲ್ಲಿರುವ ಸಹಕಾರ ಇಲಾಖೆಯ ಜಂಟಿ ನಿಬಂಧಕ ಪಾಂಡುರಂಗ ಗರ್ಗ್ ಅವರ ನಿವಾಸದ ಮೇಲೆ ಡಿವೈಎಸ್ಪಿ ಸುಬ್ರಮಣ್ಯ ಮತ್ತು ತಂಡ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನ ಹಾಗೂ ನಗದು ಪತ್ತೆ ಮಾಡಿದೆ. ಬೆಳಗ್ಗೆ ವಾಯು ವಿಹಾರ ಮುಗಿಸಿಕೊಂಡು ಬರುವಷ್ಟರಲ್ಲಿ ಎಸಿಬಿ ಅಧಿಕಾರಿಗಳು ಮನೆಗೆ ಲಗ್ಗೆ ಯಿಟ್ಟು ಶೋಧ ನಡೆಸಿದರು. ವಿವಿಧ ಬಾಕ್ಸ್ ಗಳಲ್ಲಿ ಅಡಗಿಸಿಟ್ಟಿದ್ದ ಚಿನ್ನದ ಆಭರಣ ಮತ್ತು ನಗದು ಹಣವನ್ನು ವಶಪಡಿಸಿಕೊಂಡರು. ಆಸ್ತಿಗೆ ಸಂಬಂಧಿಸಿದಂತೆ ಹಲವು ದಾಖಲೆಗಳನ್ನು ಎಸಿಬಿ ಪೊಲೀಸರು ಜಪ್ತಿ ಮಾಡಿದ್ದು, ಅವುಗಳ ಪರಿಶೀಲನಾ ಕಾರ್ಯ ಮುಂದುವರೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಘಟಕದ ಎಸಿಬಿ ಎಸ್ಪಿ ಕುಲದೀಪ್ ಕುಮಾರ್ ಆರ್. ಜೈನ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಮಲ್ಲೇಶ್ವರದಲ್ಲಿರುವ ಸಹಕಾರ ಸೌಧದಲ್ಲಿ ಜಂಟಿ ನಿಬಂಧಕರಾಗಿ ಗರ್ಗ್ ಕಾರ್ಯ ನಿರ್ವಹಿಸುತ್ತಿದ್ದು, ಎಸಿಬಿ ಅಧಿಕಾರಿಗಳ ನೋಡಿ ದಂಗಾಗಿದ್ದಾರೆ.
ಧಾರವಾಡ ಜಿಲ್ಲೆಯ ಶಿಗ್ಗಾವಿಯ ಸಣ್ಣ ನೀರಾವರಿ ಇಲಾಖೆಯ ಕಾರ್ಯ ನಿರ್ವಾಹಕ ಇಂಜಿನಿಯರ್ ದೇವರಾಜ್ ಕೈಲೇಶ್ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆದಿದೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ಎಸಿಬಿ ಅಧಿಕಾರಿಗಳು ಸಂಗ್ರಹಿಸಿದ್ದರು. ಎಸ್ಪಿ ಉಮಾ ಪ್ರಶಾಂತ್ ಅವರ ಮಾರ್ಗದರ್ಶನದಲ್ಲಿ ಇಂದು ಎರಡು ತಂಡಗಳು ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ನಗರ ಯೋಜನೆ ಜಂಟಿ ನಿರ್ದೇಶಕ ಜಯರಾಜ್ ಕೆ.ವಿ. ಅವರ ಮಂಗಳೂರು ನಿವಾಸದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿಯನ್ನು ಎಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗದ ಎಸಿಎಫ್ ಶ್ರೀನಿವಾಸ್ ಅವರ ಮನೆ ಮೇಲೆ ದಾಳಿ ನಡೆಸಿದಾಗ ಕೆ.ಜಿ. ಗಟ್ಟಲೇ ಚಿನ್ನಾಭರಣ ದೊರೆತಿದ್ದು, ಎಸಿಬಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಅಪಾರ ಪ್ರಮಾಣದ ಚಿನ್ನದ ಆಭರಣ, ಮುತ್ತು ಆಭರಣ ಹಾಗೂ ಬೆಳ್ಳಿ ವಸ್ತು ಸೇರಿದಂತೆ ಐದು ನೂರು ರೂಪಾಯಿಯ ನೋಟಿನ ಕಂತುಗಳನ್ನು ಎಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
Recommended Video
ಕೋಲಾರ ಜಿಲ್ಲಾ ಆರೋಗ್ಯ ಅಧಿಕಾರಿ ವಿಜಯ್ ಕುಮಾರ್, ಕೊಪ್ಪಳ ಕಿಮ್ಸ್ ಆಸ್ಪತ್ರೆಯ ವೈದ್ಯ ಡಾ. ಶ್ರೀನಿವಾಸ್ , ಮಾಗಡಿ ಉಪ ವಿಭಾಗದ ಕಿರಿಯ ಅಭಿಯಂತರ ಚನ್ನಬಸಪ್ಪ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ಸೋರ್ಸ್ ವರದಿ ತಯಾರಿಸಿದ್ದರು. ವರದಿಯಲ್ಲಿ ಆರೋಪಿತ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಖಚಿತವಾದ ಹಿನ್ನೆಲೆಯಲ್ಲಿ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಳು ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಅಕ್ರಮ ಅಸ್ತಿ ಗಳಿಕೆ ಪ್ರಕರಣ ದಾಖಲಿಸಲಾಗಿದೆ.