ಅಪಘಾತ:ಪ್ರಧಾನಿ ಸಹೋದರನ ಮೇಲೆ ಕಾಳಜಿ, ಜನಸಾಮಾನ್ಯರ ನಿರ್ಲಕ್ಷ್ಯ: ಎಎಪಿ
ಬೆಂಗಳೂರು, ಡಿಸೆಂಬರ್ 28: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಸಾಕಷ್ಟು ಅಪಘಾತಗಳು ಸಂಭವಿಸಿವೆ. ಜನಸಾಮಾನ್ಯ ಬಗ್ಗೆ ಕಾಳಜಿ ವಹಿಸದ ಸರ್ಕಾರ, ಪ್ರಧಾನಮಂತ್ರಿಗಳ ಸಹೋದರನಿಗೆ ವಿಐಪಿ ಚಿಕಿತ್ಸೆ ಕೊಡಿಸಿದೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ಆಕ್ರೋಶ ಹೊರ ಹಾಕಿದೆ.
ಬೆಂಗಳೂರಿನ ಆಮ್ ಆದ್ಮಿ ಪಕ್ಷದ ರಾಜ್ಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಮುಖಂಡ ಬ್ರಿಜೇಶ್ ಕಾಳಪ್ಪ, ಕಳೆದ ಮೂರು ತಿಂಗಳುಗಳಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ 65 ಅಪಘಾತಗಳು ಸಂಭವಿಸಿವೆ. ಇದರಿಂದ 36 ಮಂದಿ ಮೃತಪಟ್ಟಿದ್ದರೂ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ಮೈಸೂರು-ನಂಜನಗೂಡು ಮಾರ್ಗದಲ್ಲಿ ಅಪಘಾತದಿಂದ ಗಾಯಗೊಂಡ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರಿಗೆ ವಿಐಪಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸಾಲುಸಾಲು ಅಪಘಾತ ಸಂಭವಿಸಿ ಜನಸಾಮಾನ್ಯರ ಸಾವುಗಳ ಸಂಭವಿಸುತ್ತಿದ್ದರೂ ಸರ್ಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ದೂರಿದರು.

ಸಮಸ್ಯೆ ಪರಿಹಾರಕ್ಕೆ ತಜ್ಞರ ಸಮಿತಿ ರಚಿಸಿ
ದಶಪಥ ಹೆದ್ದಾರಿಯು ಅವೈಜ್ಞಾನಿಕವಾಗಿದ್ದರಿಂದಲೇ ಈ ಮಟ್ಟದಲ್ಲಿ ಅಪಘಾತಗಳು ಸಂಭವಿಸಿವೆ. ಶೀಘ್ರವೇ ತಜ್ಞರ ಸಮಿತಿ ರಚಿಸಿ ಹೆದ್ದಾರಿ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಬೇಕು. ಆ ವರದಿ ಆಧರಿಸಿ ಲೋಪದೋಷಗಳನ್ನು ಸರಿಪಡಿಸಬೇಕು. ನಿರ್ಲಕ್ಷ್ಯ ವಹಿಸಿ ಅಮಾಯಕ ವಾಹನ ಸವಾರರ ಜೀವದ ಜೊತೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು ಹೇಳಿದರು.
ಜೋರು ಮಳೆ ಬಂದರೂ ದಶಪಥ ರಸ್ತೆಯ ಹಲವೆಡೆ ಮಳೆ ನೀರು ನಿಂತು ನದಿಯಂತಾಗುತ್ತದೆ. ರಸ್ತೆ ಪಕ್ಕದ ಚರಂಡಿ ಹಾಗೂ ಸರ್ವಿಸ್ ರಸ್ತೆಯ ವಿನ್ಯಾಸ ಅವೈಜ್ಞಾನಿಕವಾಗಿದೆ. ಡಾಂಬರೀಕರಣ ಕೂಡ ಕಳಪೆಯಾಗಿದ್ದು, ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಅಲ್ಲಲ್ಲಿ ಕಿತ್ತು ಹೋಗಿದೆ. ಈ ಎಲ್ಲ ಹುಳುಕುಗಳನ್ನು ಮುಚ್ಚಿ ಹಾಕಲು ಸಂಸದ ಪ್ರತಾಪ್ ಸಿಂಹ ದಶಪಥ ರಸ್ತೆಯನ್ನು ಅತಿಯಾಗಿ ಹೊಗಳುತ್ತಿದ್ದಾರೆ ಎಂದು ಕಿಡಿ ಕಾರಿದರು.
ಅಮಿತ್ ಶಾ ಭೇಟಿ: ಸರ್ವಪಕ್ಷ ಸಭೆಗೆ ಆಗ್ರಹ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅರವರು ಡಿಸೆಂಬರ್ 29 ರಿಂದ ಮೂರು ದಿನಗಳ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ. ಈ ವೇಳೆ ಬೆಳಗಾವಿ ಗಡಿ ವಿವಾದದ ಕುರಿತು ಆಮ್ ಆದ್ಮಿ ಪಾರ್ಟಿ ಸೇರಿದಂತೆ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಬೇಕು. ಕೇಂದ್ರ, ಕರ್ನಾಟಕ ಹಾಗೂ ಮಹಾರಾಷ್ಟ್ರ ಮೂರೂ ಕಡೆ ಬಿಜೆಪಿಯ ತ್ರಿಬಲ್ ಎಂಜಿನ್ ಸರ್ಕಾರವಿದ್ದರೂ ಬೆಳಗಾವಿ ಗಡಿ ವಿವಾದ ಬಗ್ಗೆ ಅವರು ಜಾಣಕುರುಡು ತೋರುವುದು ಸರಿಯಲ್ಲ ಎಂದು ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.












Click it and Unblock the Notifications