ಕರ್ನಾಟಕದಲ್ಲಿ ಮರಾಠ ಸಮುದಾಯಕ್ಕೆ 2ಎ ಮೀಸಲಾತಿಗೆ ಸ್ಪಂದನೆ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಜುಲೈ.20: ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದ ನಂತರ ಸಂವಿಧಾನದ ನಿಬಂಧನೆಗಳ ಅನುಗುಣವಾಗಿ ಮೀಸಲಾತಿಗಾಗಿ ಮರಾಠ ಸಮುದಾಯದ ಬೇಡಿಕೆಯ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮರಾಠಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಪ್ರಸ್ತುತ ಪ್ರವರ್ಗ 3 ಬಿ ಬದಲಿಗೆ ಪ್ರವರ್ಗ 2 ಎ ಅಡಿಯಲ್ಲಿ ಸೇರಿಸಬೇಕೆಂಬ ಸಮುದಾಯದ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತಿದೆ. ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿವಿಧ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದ ಬೊಮ್ಮಾಯಿ ಅವರು, ಮರಾಠಾ ಮಹಾನ್ ವ್ಯಕ್ತಿಗಳ ಅನನ್ಯ ಪರಂಪರೆಯ ಸ್ಮಾರಕಗಳ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ರಾಜ್ಯ ಸರ್ಕಾರ 10 ಕೋಟಿ ರುಪಾಯಿ ಅನುದಾನ ನೀಡಲು ನಿರ್ಧರಿಸಿದೆ ಎಂದು ಹೇಳಿದರು.
ರಾಮದಾಸ್, ತುಕಾರಾಂ ಮತ್ತು ಏಕನಾಥರಂತಹ ಮಹಾನ್ ಸಂತರ ಆದರ್ಶಗಳು ಶಾಶ್ವತವಾಗಿ ಉಳಿಯುವಂತಾಹದ್ದಾಗಿದ್ದು, ಅವರ ನೆನಪನ್ನು ಉಳಿಸಲಾಗುವುದು ಎಂದರು. ಕಾರವಾರದಿಂದ ಬೀದರ್ವರೆಗಿನ ರಾಜ್ಯದ ಗಡಿಗಳಲ್ಲಿ ಮರಾಠಾ ಸಮುದಾಯವು ಗಮನಾರ್ಹ ಅಸ್ತಿತ್ವವನ್ನು ಹೊಂದಿದೆ. ಈ ಗಡಿ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ಈಗಾಗಲೇ ರೂಪಿಸಲಾಗಿದೆ. ಗಡಿ ಭಾಗದ ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಬಜೆಟ್ನಲ್ಲಿ ಅನುದಾನವನ್ನೂ ನೀಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.
ಮರಾಠ ಸಮುದಾಯ ಕರ್ನಾಟಕದ ಮುಖ್ಯವಾಹಿನಿಗೆ ಸೇರಿಕೊಂಡಿದೆ. ಮರಾಠಾ ಅಭಿವೃದ್ಧಿ ನಿಗಮವು ಸ್ವ-ಉದ್ಯೋಗ ಯೋಜನೆಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯವರೆಗೆ ಸಮುದಾಯಕ್ಕಾಗಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು 100 ಕೋಟಿ ರುಪಾಯಿಗಳನ್ನು ನೀಡಿದೆ. ಅಗತ್ಯವಿದ್ದರೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಛತ್ರಪತಿ ಶಿವಾಜಿ ಮಹಾರಾಜರು 5000 ವರ್ಷಗಳ ಭಾರತೀಯ ಇತಿಹಾಸದ ನಿತ್ಯದ ನಕ್ಷತ್ರ ಎಂದು ಬಣ್ಣಿಸಿದ ಸಿಎಂ ಬೊಮ್ಮಾಯಿ, ಬಲವಾದ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ. ಆದ್ದರಿಂದ ಅವರು ಭಾರತೀಯ ಇತಿಹಾಸದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ ಎಂದು ಹೇಳಿದರು.
ಮರಾಠ ಸಮುದಾಯಕ್ಕೆ ಶ್ರೇಷ್ಠ ಇತಿಹಾಸವಿದೆ. ರಾಷ್ಟ್ರವು ತನ್ನ 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು ಆಚರಿಸುತ್ತಿರುವಾಗ ಪ್ರಧಾನಿ ಮೋದಿ ಅವರು ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸುತ್ತಿದ್ದಾರೆ. ಭಾರತವನ್ನು ವಿಶ್ವಗುರುವನ್ನಾಗಿ ಮಾಡುವ ಪ್ರಧಾನಿ ಮೋದಿಯವರ ಧ್ಯೇಯವನ್ನು ಸಾಕಾರಗೊಳಿಸಲು ಒಟ್ಟಾಗಿ ಕೆಲಸ ಮಾಡುವುದು ನಮ್ಮ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಸಮುದಾಯವೂ ಕೊಡುಗೆ ನೀಡಬೇಕು. ಈ ಉದ್ದೇಶದಿಂದಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮರಾಠಾ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.