ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ಯಾಚುಟಿ ಸೌಲಭ್ಯ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಲು ಕ್ರಮ : ಹಾಲಪ್ಪ ಆಚಾರ್
ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ ಅವರು, ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಸಚಿವ ಹಾಲಪ್ಪ ಆಚಾರ್ ಭರವಸೆ ನೀಡಿದ್ದಾರೆ.
ಬೆಂಗಳೂರು, ಫೆಬ್ರವರಿ2: ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಹಂತ ಹಂತವಾಗಿ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿದ ಅವರು, ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.
ಸಭೆಯ ಬಳಿಕ ಮಾಹಿತಿ ನೀಡಿದ ಸಚಿವರು, ಅಂಗನವಾಗಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಲು ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಆದಷ್ಟು ಬೇಗ ಆದೇಶ ಹೊರಡಿಸಲಾಗುವುದು. ಇದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ನೀಡಬೇಕೆಂಬ ಬೇಡಿಕೆ ಕುರಿತಂತೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮೂರು ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ತೆಗೆದುಕೊಳ್ಳುವ ಜೊತೆಗೆ ಅಂಗನವಾಡಿ ಕಾರ್ಯಕರ್ತರಿಗೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಪತ್ರ ಬರೆದು ಉಚಿತ ಆರೋಗ್ಯ ಸೌಲಭ್ಯ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತರ ಮುಷ್ಕರ ಅಂತ್ಯ
ಗ್ರಾಚ್ಯೂಟಿ ಸೇರಿ ವಿವಿಧ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕಾಗಿ ಸ್ಪಂದನೆ ನೀಡಿದ ಹಿನ್ನೆಲೆಯಲ್ಲಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಕಳೆದ 10 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂಗನವಾಡಿ ಕಾರ್ಯಕರ್ತೆಯರು ವಾಪಸ್ ಪಡೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಗ್ರಾಚ್ಯುಟಿ ನೀಡಬೇಕು. ಶಾಲಾ ಪೂರ್ವ ಶಿಕ್ಷಣಕ್ಕೆ ಸಮಯ ನಿಗದಿ, ಪದೋನ್ನತಿ ಕುರಿತು ಆದೇಶ ವಾಪಸ್ ಸೇರಿ ಬಹುತೇಕ ಬೇಡಿಕೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಿದೆ. ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜ.23ರಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಿಂಪಡೆಯಲಾಗಿದೆ ಎಂದು ಅಂಗನವಾಡಿ ನೌಕರರ ಸಂಘ ಘೋಷಿಸಿದೆ.