Darshan: ಜುಲೈ 18ರ ತನಕ ದರ್ಶನ್ಗೆ ಜೈಲು ಊಟವೇ ಗತಿ!
ಬೆಂಗಳೂರು, ಜುಲೈ 10: ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್ಗೆ ಮನೆಯ ಊಟದ ಭಾಗ್ಯ ಸದ್ಯಕ್ಕೆ ಇಲ್ಲ. ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ನಟ ದರ್ಶನ್ ಪರ ವಕೀಲರು ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯ ಊಟ ಮಾಡಲು ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಮೂರು ಬೇಡಿಕೆಗಳಿಗೆ ಒಪ್ಪಿಗೆ ನೀಡಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಸಿದ್ದರು.

ಬುಧವಾರ ಅರ್ಜಿಯ ವಿಚಾರಣೆ ನಡೆಯಿತು. ವಕೀಲರ ವಾದ ಆಲಿಸಿದ ಕೋರ್ಟ್ ಜುಲೈ 18ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು. ಆದ್ದರಿಂದ ಜುಲೈ 18ರ ತನಕ ದರ್ಶನ್ ಜೈಲು ಊಟವನ್ನೇ ಮಾಡಬೇಕಿದೆ.
ಅರ್ಜಿಯ ವಿಚಾರಣೆ ವೇಳೆ ನ್ಯಾಯಾಧೀಶರು ಜೈಲಿನ ನಿಯಮಗಳು ಏನು ಹೇಳುತ್ತದೆ?. ಕಾನೂನಿನ ಪ್ರಕಾರವೇ ಎಲ್ಲವನ್ನೂ ಪರಿಶೀಲನೆ ನಡೆಸಬೇಕು ಎಂದು ಹೇಳಿದರು. ಬಳಿಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖಾಧಿಕಾರಿಗಳು, ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿದರು. ಅರ್ಜಿ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದರು.
ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿಯೂ ಜುಲೈ 18ರ ತನಕ ವಿಸ್ತರಣೆಯಾಗಿದೆ.
ಜೂನ್ 11ರ ಮಂಗಳವಾರ ಮೈಸೂರಿನಲ್ಲಿ ದರ್ಶನ್ ಬಂಧಿಸಲಾಗಿತ್ತು. ಪೊಲೀಸರ ವಿಚಾರಣೆ ಬಳಿಕ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸದ್ಯ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ದರ್ಶನ್ ಪರ ವಕೀಲರು ಮನೆಯ ಊಟ ಮಾಡಲು ಅವಕಾಶ ನೀಡಬೇಕು, ಮಲಗಲು ಹಾಸಿಗೆಯನ್ನು ತರಿಸಿಕೊಳ್ಳಲು ಒಪ್ಪಿಗೆ ನೀಡಬೇಕು ಮತ್ತು ಓದಲು ಪುಸ್ತಕ ತರಿಸಿಕೊಳ್ಳಲು ಒಪ್ಪಿಗೆ ನೀಡುವಂತೆ ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು ನಗರದ 24ನೇ ಎಸಿಎಂಎಂ ಕೋರ್ಟ್ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ರ ತನಕ ವಿಸ್ತರಣೆ ಮಾಡಿದೆ.
ನಟ ದರ್ಶನ್ ಮತ್ತು ಇತರ 13 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ನಾಲ್ವರು ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರನ್ನೂ ಜುಲೈ 4ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
ಆರೋಪಿ ದರ್ಶನ್ಗೆ ಯಾವುದೇ ಹೆಚ್ಚುವರಿ ಸೌಲಭ್ಯವನ್ನು ಜೈಲಿನಲ್ಲಿ ನೀಡಿಲ್ಲ. ಸಾಮಾನ್ಯ ಕೈದಿಗೆ ನೀಡುತ್ತಿರುವ ಊಟವನ್ನೇ ಅವರಿಗೆ ನೀಡಲಾಗುತ್ತಿದೆ. ಆದರೆ ಜೈಲಿನ ಊಟ ಅವರಿಗೆ ಜೀರ್ಣವಾಗುತ್ತಿಲ್ಲ. ವಾಂತಿ, ಅತಿಸಾರ ಉಂಟಾಗುತ್ತಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ಆದ್ದರಿಂದ ಜೈಲಿಗೆ ಮನೆಯ ಊಟ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಜೈಲಿನಲ್ಲಿ ಚಾಪೆಯಲ್ಲಿ ಮಲಗುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಮನೆಯಿಂದ ಹಾಸಿಗೆ ತರಿಸಿಕೊಳ್ಳಲು ಅವಕಾಶ ನೀಡಬೇಕು. ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕ ತರಿಸಿಕೊಳ್ಳಲು ಅವಕಾಶ ಕೊಡಬೇಕು ಎಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬಂದು ಪಟ್ಟಣಗೆರೆ ಶೆಡ್ನಲ್ಲಿ ಕೂಡಿ ಹಾಕಿ, ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಎಂಬುದು ಆರೋಪವಾಗಿದೆ. ನಟ ದರ್ಶನ್ ಬಂಧನವಾಗಿ ಜುಲೈ 11ಕ್ಕೆ ಒಂದು ತಿಂಗಳು ಕಳೆಯುತ್ತಿದೆ.












Click it and Unblock the Notifications