ರಾಜಕೀಯಕ್ಕೆ ನೋ ಎಂಟ್ರಿ ಎಂದ ಡಾಲಿ ಧನಂಜಯ್ : ಸಿದ್ದರಾಮಯ್ಯ ಮುಂದಿಟ್ಟ ಬೇಡಿಕೆ ಏನು?
ಬೆಂಗಳೂರು,ಫೆಬ್ರವರಿ 02: ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಅದ್ದೂರಿ ಚಾಲನೆ ಸಿಕ್ಕಿದೆ. ರಾಜಕೀಯಕ್ಕೆ ನೋ ಎಂಟ್ರಿ ಎಂದಿರುವ ನಟ ಹಾಗೂ ಈ ಬಾರಿ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಡಾಲಿ ಧನಂಜಯ ಚಿತ್ರೋದ್ಯಮದ ಪರವಾಗಿ ಒಂದಿಷ್ಟು ಬೇಡಿಕೆಗಳನ್ನು ಸಿಎಂ ಮುಂದಿಟ್ಟಿದ್ದಾರೆ.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್ ಮಾತನಾಡಿ, ಕೊರೊನಾ ಬಳಿಕ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ, ಇದರ ಜೊತೆಗೆ ಪ್ರಶಸ್ತಿ ಕೂಡ ನಿಂತಿದೆ.

ಸದ್ಯ ನಿಂತಿರುವ ಪ್ರಶಸ್ತಿ ಮತ್ತು ಸಬ್ಸಿಡಿಯನ್ನು ಮುಂದುವರಿಸಬೇಕೆಂದು ಚಿತ್ರರಂಗದ ಪರವಾಗಿ ನಾನು ಸಿಎಂ ಬಳಿ ಕೇಳಿಕೊಳ್ಳುತ್ತಿದ್ದೇನೆ. ಕಲಾವಿದರಿಗೆ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಕಾಂತರ, ಕೆಜಿಎಫ್ ಅಂತಹ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ. ಇದರ ಜೊತೆಗೆ ಸರ್ಕಾರದ ಪ್ರೋತ್ಸಾಹ ಕೂಡ ತುಂಬಾ ಮುಖ್ಯ ಎಂದು ಹೇಳಿದರು.
ಇನ್ನು, ನಟ ಡಾಲಿ ಧನಂಜಯ್ ಅವರ ಮಾತುಗಳಿಗೆ ಸಿಎಂ ಸಿದ್ದರಾಮಯ್ಯ ಅಲ್ಲೇ ಸಮ್ಮತಿ ಸೂಚಿಸಿದರು. ಚಿತ್ರೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಿತ್ರೋತ್ಸವಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಾಯವನ್ನು ನೀಡಿದೆ, ಮುಂದೆಯೂ ಸಹ ಚಿತ್ರರಂಗಕ್ಕೆ ಎಲ್ಲಾ ರೀತಿಯ ಸಹಾಯವನ್ನು ಮಾಡಲಿದೆ.
ಕನ್ನಡ ಚಿತ್ರರಂಗಕ್ಕೆ ಎಲ್ಲಾ ರೀತಿಯ ಬೆಂಬಲ, ಹಣಕಾಸಿನ ಸಹಕಾರವನ್ನು ಕೊಡುತ್ತೇನೆ. 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ಈಗ ನಾನು ಕಮಿಟಿಗಳನ್ನು ಮಾಡಿದ್ದೇನೆ. ಆ ಕಮಿಟಿ ವರದಿ ಕೊಟ್ಟ ತಕ್ಷಣ ಎಲ್ಲಾ ವರ್ಷದ ಪ್ರಶಸ್ತಿಗಳನ್ನು ಕೊಡುತ್ತೇವೆ ಎಂದು ಹೇಳಿದ್ದಾರೆ.
ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡಿ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ.

ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದರು.
ಅಂಬೇಡ್ಕರ್ ಅವರ ಸಂವಿಧಾನ ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ. ಅಂಬೇಡ್ಕರ್ ಮತ್ತು ಇವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ವೆಚ್ವು ಪಾಲಿಸುವಂಥಾ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದರು.
2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಆ ಎಲ್ಲಾ ಬಾಕಿ ಉಳಿದಿರುವ ಎಲ್ಲಾ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದರು.












Click it and Unblock the Notifications