ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ನಿಧನ
ಬೆಂಗಳೂರು, ಜೂನ್ 15: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇಂದು ಬೆಳಗಿನ ಜಾವ 3.34ಕ್ಕೆ ವೈದ್ಯರು ಅಧಿಕೃತ ಘೋಷಣೆ ಮಾಡಿದ್ದಾರೆ. ಮೆದುಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಅವರಿಗೆ ತಕ್ಷಣ ಶಸ್ತ್ರ ಚಿಕಿತ್ಸೆ ಮಾಡಿ, ಐಸಿಯುನಲ್ಲಿ ಇರಿಸಲಾಗಿತ್ತು. ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಆದ ಪರಿಣಾಮ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು.
48 ಗಂಟೆಗಳು ಕಳೆದರೂ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಪರಿಣಾಮವಾಗಿ ಸಂಚಾರಿ ವಿಜಯ್ ಮೃತರಾಗಿದ್ದಾರೆ. ಈ ಸುದ್ದಿ ಇಡೀ ಚಿತ್ರರಂಗಕ್ಕೆ ಆಘಾತ ಉಂಟು ಮಾಡಿದೆ.

''ಮೆದುಳಿನ ಬಲಭಾಗದಲ್ಲಿ ಹೆಚ್ಚು ಹೊಡೆತ ಬಿದ್ದು ತೀವ್ರ ರಕ್ತಸ್ರಾವ ಆಗಿತ್ತು. ಭಾನುವಾರ ಬೆಳಗ್ಗೆ ನಾಲ್ಕು ಗಂಟೆ ಸುಮಾರಿಗೆ ಸರ್ಜರಿ ಮಾಡಿದ್ದರು, ಅದಾಗಿ 36 ಗಂಟೆ ಕಳೆದರೂ ಅವರ ಬ್ರೇನ್ ಕಡೆಯಿಂದ ಪ್ರತಿಕ್ರಿಯೆ ಇರಲಿಲ್ಲ. ಮೆದುಳಿನ ಕೆಲಸಗಳು ನಿಂತು ಹೋಯಿತು. ಇದನ್ನು ಬ್ರೇನ್ ಡೆಡ್ ಎನ್ನುತ್ತೇವೆ''ಎಂದು ಅಪೊಲೊ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ವೈದ್ಯರ ಎಲ್ಲ ಪ್ರಯತ್ನಗಳು ವಿಫಲವಾಗಿವೆ.
ಸಂಚಾರಿ ವಿಜಯ್ ಬ್ರೇನ್ ಡೆಡ್ ಆದ ಬಳಿಕ ಅವರ ಅಂಗಾಂಗ ದಾನಕ್ಕೆ ಕುಟುಂಬದವರು ಸಮ್ಮತಿ ನೀಡಿದರು. ಇಂದು ಮಧ್ಯಾಹ್ನ 1.15ಕ್ಕೆ ವೈದ್ಯರು ಅಂಗಾಂಗ ದಾನದ ಪ್ರೋಟೋಕಾಲ್ ಪ್ರಕಾರ ಕಾರ್ಯ ನಿರ್ವಹಿಸಿದ್ದಾರೆ ಎಂಬುದು ಹೆಲ್ತ್ ಬುಲೆಟಿನ್ ಮೂಲಕ ತಿಳಿದುಬಂದಿದೆ.

ಜೂನ್ 12ರಂದು ರಾತ್ರಿ ಅವರಿಗೆ ಅಪಘಾತವಾಗಿತ್ತು, ಸ್ನೇಹಿತ ನವೀನ್ ಅವರ ಬೈಕ್ನಲ್ಲಿ ಹಿಂಬದಿ ಕುಳಿತು ವಿಜಯ್ ಪ್ರಯಾಣ ಮಾಡುತ್ತಿದ್ದರು. ಅಪಘಾತದ ತೀವ್ರತೆಗೆ ಅವರ ತಲೆ ಮತ್ತು ತೊಡೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.
''ಸಂಚಾರಿ ವಿಜಯ್ ಅವರು ನಿಧನರಾದರು ಎಂದು ತಿಳಿಸಲು ವಿಷಾಧಿಸುತ್ತೇವೆ, ಅವರ ನಿಧನಕ್ಕೆ ಇಡೀ ಅಪೊಲೊ ಕುಟುಂಬವು ಸಂತಾಪ ಸೂಚಿಸುತ್ತದೆ''ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.












Click it and Unblock the Notifications