ದೇಶ ಕಟ್ಟಲು ಯುವ ಶಕ್ತಿ ಸದ್ಭಳಕೆ ಅಗತ್ಯ: ನಿರ್ಮಲಾನಂದ ಶ್ರೀ
ಮಂಡ್ಯ, ಜ. 04: ನಮ್ಮ ದೇಶವನ್ನು ಸಮರ್ಥವಾಗಿ ಕಟ್ಟಲು ಯುವ ಶಕ್ತಿ ಸದ್ಭಳಕೆಯಾಗಬೇಕು. ನಮ್ಮ ದೇಶದಲ್ಲಿ ಯುವ ಶಕ್ತಿ ಹೆಚ್ಚಿದ್ದರೂ, ಅದನ್ನು ಸರಿಯಾದ ರೂಪದಲ್ಲಿ ಬಳಕೆ ಮಾಡಿಕೊಳ್ಳದೆ ಮಾನವ ಸಂಪನ್ಮೂಲ ವ್ಯರ್ಥವಾಗುತ್ತಿದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ 2021-22 ನೇ ಸಾಲಿನ ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಸಾನಿಧ್ಯ ವಹಿಸಿ ಮಾತನಾಡಿದರು.
ಎಲ್ಲಾ ಸಂಪನ್ಮೂಲಗಳಂತೆ ಮಾನವ ಸಂಪನ್ಮೂಲ ಕೂಡ ಪ್ರಮುಖವಾಗಿದೆ. ಅದರಂತೆ ನಮ್ಮ ದೇಶದಲ್ಲಿ ಮಾನವ ಸಂಪನ್ಮೂಲ ಹೆಚ್ಚಿದ್ದು, ದೇಶ ಕಟ್ಟುವಲ್ಲಿ ಇರುವ ಮಾನವ ಸಂಪನ್ಮೂಲ ಸದ್ಭಳಕೆ ಮಾಡಿಕೊಳ್ಳದಿದ್ದರೇ ವ್ಯರ್ಥವಾಗುತ್ತದೆ. ರಾಜ್ಯದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಲು ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಮಕ್ಕಳು ಬಂದಿದ್ದೀರಾ, ನಿಮಗೆಲ್ಲರಿಗೂ ಕಾಲಬೈರವೇಶ್ವರ ಸ್ವಾಮಿ ಒಳಿತು ಮಾಡಲಿ. ಇಲ್ಲಿ ಗೆದ್ದು ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲೂ ಯಶಸ್ಸು ಸಿಗಲಿ ಎಂದು ಸ್ವಾಮೀಜಿ ಹಾರೈಸಿದರು.

ರಾಜ್ಯಪಾಲರ ಭಾಷಣ:
ದೇಶದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ರಾಜ್ಯ ಉತ್ಸವ, ರಾಷ್ಟ್ರ ಉತ್ಸವ ಆಗಿ ಸಾಂಸ್ಕೃತಿಕ, ಅಧ್ಯಾತ್ಮಿಕ ವಾಗಿ ಗಮನ ಸೆಳೆಯುತ್ತಿದೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಯುವಕರ ಪಾತ್ರ ಬಹುಮುಖ್ಯ. ಮಾರ್ಷಲ್ ಆರ್ಟ್ಸ್, ಯುವಕರ ಕಲಾಪ್ರದರ್ಶನದ ಕಾರ್ಯಾಗಾರಗಳಲ್ಲಿ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಯುವಕ ಯುವತಿಯರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಈ ಕಾಯಕ್ರಮಗಳು ಸಹಕಾರಿಯಾಗುತ್ತವೆ ಎಂದು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.
ಯುವಜನತೆಗೆ ಶಕ್ತಿ ತುಂಬಲು ಬದ್ಧ:
ಸಚಿವ ನಾರಾಯಣಗೌಡ ಮಾತನಾಡಿ, ಆದಿಚುಂಚನಗಿರಿ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಯುವ ಜನೋತ್ಸವ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ, ಮಹಾಮಾರಿ ಕೊರೋನಾ ಭೀತಿಯಿಂದಾಗಿ ಸರಳವಾಗಿ ಆಚರಿಸಲಾಗುತ್ತಿದೆ. ಯುವಜನತೆಗೆ ಶಕ್ತಿಯನ್ನು ತುಂಬಲು ಸರ್ಕಾರ ಬದ್ಧವಾಗಿದ್ದು, ಆರ್ ಬಾಲಸುಬ್ರಹ್ಮಣ್ಯಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ನೀಡುವ ಸಲಹೆಗಳನ್ನು ಸ್ವೀಕರಿಸಿ ನೀತಿಗಳನ್ನು ರಚಿಸಲಾಗುತ್ತದೆ. ನಮ್ಮ ಕ್ರೀಡಾ ಇಲಾಖೆಯಿಂದ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಜಕ್ಕೂರು ವೈಮಾನಿಕ ತರಬೇತಿ ಶಾಲೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ. ಮುಂದಿನ ಒಲಂಪಿಕ್ಗೆ ಕರ್ನಾಟಕದಿಂದ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಬೇಕೆಂಬ ಗುರಿ ಹೊಂದಲಾಗಿದ್ದು, ಅಮೃತ ಕ್ರೀಡಾ ದತ್ತು ಯೋಜನೆಯಲ್ಲಿ 75 ಕ್ರೀಡಾಪಟುಗಳನ್ನು ದತ್ತು ಪಡೆಯಲಾಗಿದೆ. ಕ್ರೀಡೆಗೆ ಹೆಚ್ಚಿನ ಶಕ್ತಿಯನ್ನು ತುಂಬಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಸಚಿವ ಸುನೀಲ್ ಕುಮಾರ್ ಯುವ ಮಾತು:
ಇಂಧನ ಸಚಿವ ಸುನೀಲ್ ಕುಮಾರ್ ಮಾತನಾಡಿ, ಯುವ ಮನಸ್ಸಿಗಳಿಗೆ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಯುವ ಜನೋತ್ಸವ ಹಮ್ಮಿಕೊಳ್ಳಲಾಗಿದೆ. ಸ್ವಾಮಿ ವಿವೇಕಾನಂದರು ಹೇಳಿದಂತೆ ಯುವಕರು ಮನಸ್ಸು ಮಾಡಿದರೆ ಮಾತ್ರ ಪರಿವರ್ತನೆ ಸಾಧ್ಯ. ಅಮೃತ ಮಹೋತ್ಸವದ ಸಂಭ್ರಮದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪರಿವರ್ತನೆ ಆಗಬೇಕು. ಅದಕ್ಕಾಗಿ ಗ್ರಾಮಗ್ರಾಮಗಳಲ್ಲಿ ಯುವಕರು ಕಾರ್ಯಪ್ರವೃತ್ತರಾಗಬೇಕು. ಯುವ ಜನೋತ್ಸವವೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೀಮಿತವಾಗದೇ ಸಮಾಜ ನಿರ್ಮಾಣದ ಪರಿಕಲ್ಪನೆಯೊಂದಿಗೆ ಯುವ ಸಂಘಟನೆಗಳು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಪ್ರತಿಬಿಂಬಿಸಲು ಯುವ ಜನೋತ್ಸವವನ್ನು ಆಚರಿಸಲಾಗುತ್ತಿದೆ. ಯುವ ಜನೋತ್ಸವ ಕಾರ್ಯಕ್ರಮದಲ್ಲಿ 18 ಪ್ರಕಾರದ ಕಾರ್ಯಕ್ರಮಗಳು ನಡೆಯಲಿದ್ದು, ಪ್ರತಿ ಜಿಲ್ಲೆಯಿಂದ ತಲಾ 57 ಸ್ಪರ್ಧಿಗಳಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸ್ಪರ್ಧಿಗಳು ಆಗಮಿಸಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದ 100 ಜನರನ್ನು ಪುದುಚೇರಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಕಳುಹಿಸಿಕೊಡಲಾಗುತ್ತದೆ ಎಂದು ಸುನೀಲ್ ಕುಮಾರ್ ತಿಳಿಸಿದರು.

ಯುವ ನೀತಿ ರಚನಾ ಸಮಿತಿ ಅಧ್ಯಕ್ಷರಾದ ಆರ್. ಬಾಲಸುಬ್ರಹ್ಮಣ್ಯಂ, ನಾಗಮಂಗಲ ಶಾಸಕ ಸುರೇಶ್ ಗೌಡ, ಮಂಡ್ಯ ಶಾಸಕ ಶ್ರೀನಿವಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಹೆಚ್ ಎನ್ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಅಶ್ವತಿ ಉಪಸ್ಥಿತರಿದ್ದರು.












Click it and Unblock the Notifications