ಮತದಾನದ 48 ಗಂಟೆ ಮೊದಲು ಜಾಹೀರಾತು ನಿಯಮಗಳು
ಬೆಂಗಳೂರು, ಮೇ 06; ಕರ್ನಾಟಕ ವಿಧಾನಸಭಾ ಚುನಾವಾಣೆಯ ಮತದಾನ ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ನಡೆಯಲಿದೆ. ಮತದಾನದ 48 ಗಂಟೆ ಮೊದಲ ಅವಧಿಯಲ್ಲಿ ಹಲವಾರು ನಿಯಮಗಳನ್ನು ಪಾಲನೆ ಮಾಡಬೇಕಿದೆ. ಬಹಿರಂಗ ಚುನಾವಣಾ ಪ್ರಚಾರ ಮೇ 8ರಂದು ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ.
ಮತದಾನದ 48 ಗಂಟೆ ಮೊದಲು ಅಂದರೆ (ಮೇ 9 ಮತ್ತು ಮೇ 10ರಂದು) ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿ, ಸಂಘ-ಸಂಸ್ಥೆ, ವ್ಯಕ್ತಿಗತವಾಗಿ ಮುದ್ರಣ ಮಾಧ್ಯಮದಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸಬೇಕಾದಲ್ಲಿ ಸಂಬಂಧಿಸಿದ ಜಿಲ್ಲಾ, ರಾಜ್ಯ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪೂರ್ವಾನುಮತಿ ಪಡೆಯವುದು ಕಡ್ಡಾಯವಾಗಿದೆ.

ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿಗೆ ಮುಖ್ಯ ಚುನಾವಣಾಧಿಕಾರಿಗಳು, ನಿರ್ವಾಚನ ನಿಲಯ, ಶೇಷಾದ್ರಿ ರಸ್ತೆ, ಬೆಂಗಳೂರು ಇಲ್ಲಿ ಸ್ಥಾಪಿಸಲಾಗಿರುವ ರಾಜ್ಯ ಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಗೆ ಹಾಗೂ ಅದೇ ರೀತಿ ಜಿಲ್ಲೆಯ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮ ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಒಪ್ಪಿಗೆ ಪಡೆಯಬೇಕು.
ಜಾಹೀರಾತು ನೀಡಲು ಮೇ 7ರೊಳಗೆ ಅನುಬಂಧ-ಸಿ ನಿಗದಿತ ಅರ್ಜಿ ನಮೂನೆಯೊಂದಿಗೆ ಸ್ವಯಂ ದೃಢೀಕೃತ ಎರಡು ಜಾಹೀರಾತು ಪ್ರತಿಯನ್ನು ಸಲ್ಲಿಸಿ ಪೂರ್ವಾನುಮತಿ ಪಡೆದು ಜಾಹೀರಾತು ಪ್ರಕಟಿಸುವುದು ಕಡ್ಡಾಯವಾಗಿರುತ್ತದೆ. ಅನುಮತಿ ಪಡೆಯದೇ ಜಾಹೀರಾತು ಪ್ರಕಟಿಸುವವರ ಕುರಿತು ಆಯೋಗ ಹದ್ದಿನ ಕಣ್ಣಿಟ್ಟಿದೆ.

ಪೂರ್ವಾನುಮತಿ ನೀಡಲಾಗುತ್ತದೆ; ಚುನಾವಣಾ ಬಹಿರಂಗ ಪ್ರಚಾರ ಮೇ 8ರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗೆ ಮೇ 8ರ ಸಂಜೆ 5 ಗಂಟೆ ವರೆಗೆ ಸುದ್ದಿ ವಾಹಿನಿ, ಕೇಬಲ್ ಟಿವಿ, ರೇಡಿಯೋ, ಸಾಮಾಜಿಕ ಜಾಲತಾಣದಲ್ಲಿ ಚುನಾವಣಾ ಜಾಹೀರಾತು ಬಿತ್ತರಿಸಲು ಪೂರ್ವಾನುಮತಿ ನೀಡಲಾಗುತ್ತದೆ.
ಇನ್ನು ಪತ್ರಿಕೆಗಳು ಮೇ 9 ಮತ್ತು 10 ರಂದು ಯಾವುದೇ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುವ ಮುನ್ನ ಸಮತಿಯಿಂದ ಪೂರ್ವಾನುಮತಿ ಪಡೆಯಲಾಗಿದಿಯೇ? ಎಂಬುದನ್ನು ಖಾತ್ರಿಪಡಿಸಿಕೊಂಡೆ ಜಾಹೀರಾತು ಪ್ರಕಟಿಸಬೇಕು. ಅನುಮತಿ ಇಲ್ಲದೆ ಹೋದಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
ಕಾಸಿಗಾಗಿ ಸುದ್ದಿ ಮೇಲು ತೀವ್ರ ನಿಗಾ: ಜಾಹೀರಾತುಗಳು ಮಾತ್ರವಲ್ಲ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮ, ರೇಡಿಯೋ, ಕೇಬಲ್ ವಾಹಿನಿಗಳು ಹಾಗೂ ಸಾಮಾಜಿಕ ಜಾಲತಾಣಗಳ ಪ್ರಸಾರವಾಗುವ ಕಾಸಿಗಾಗಿ ಸುದ್ದಿ ಮೇಲೆ ನಿಗಾ ಇಡಲು ಮೀಡಿಯಾ ಮಾನಿಟರಿಂಗ್ ಸೆಲ್ 24 ಗಂಟೆ ಕಾರ್ಯನಿರ್ವಹಿಸುತ್ತಿದೆ. ಮತದಾನದ ಪೂರ್ವ 72 ಗಂಟೆ ಅವಧಿಯಲ್ಲಿ ಬಿತ್ತರಿಸುವ ಸುದ್ದಿ, ಪ್ರಸಾರದ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣು ಇಟ್ಟಿದೆ.
ಮತದಾನದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 8ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6 ಗಂಟೆಯವರೆಗೆ ಹಾಗೂ ಮೇ 13 ರಂದು ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಸಿ. ಆರ್. ಪಿ. ಸಿ. 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಆದೇಶಿಸಲಾಗುತ್ತಿದೆ.
ಮೇ 8ರ ಸಂಜೆ 5 ಗಂಟೆಯಿಂದ ಮೇ 11ರ ಬೆಳಗ್ಗೆ 6 ಗಂಟೆಯವರೆಗೆ ಶಾಂತಿಯುತವಾಗಿ ಮತದಾನದ ಉದ್ದೇಶದಿಂದ ಮತ್ತು ಮೇ 13ರ ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಮತ ಎಣಿಕೆ ದಿನಗಳಂದು ಶುಷ್ಕ ದಿನ (Dry Day) ಎಂದು ಆದೇಶವನ್ನು ಹೊರಡಿಸಲಾಗುತ್ತಿದೆ.
ಶುಷ್ಕ ದಿನಗಳಂದು ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯ ತಯಾರಿಕೆ, ಬಾರ್, ದೇಸಿಯ ಸರಾಯಿ ತಯಾರಿಕಾ ಘಟಕಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.












Click it and Unblock the Notifications