ಬೂಸ್ಟರ್ ಡೋಸ್ಗೆ ಸಲಹೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ
ಬೆಂಗಳೂರು, ಡಿ.2: ಓಮಿಕ್ರಾನ್ ಆತಂಕದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ಗುರುವಾರ (ಡಿ.2) ದೆಹಲಿಗೆ ಪ್ರಯಾಣಿಸಲಿದ್ದಾರೆ.
ಜಗತ್ತಿನಾದ್ಯಂತ ಓಮಿಕ್ರಾನ್ ಆತಂಕ ಎದುರಾಗಿದೆ. ಭಾರತದಲ್ಲಿ, ಕರ್ನಾಟಕದಲ್ಲಿ ಓಮಿಕ್ರಾನ್ ಪತ್ತೆಯಾಗಿಲ್ಲ. ಆದರೂ ಸಹ ಕರ್ನಾಟಕದಲ್ಲಿ ರಚಿಸಲಾಗಿರುವ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಲಸಿಕಾ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರದ ಆರೋಗ್ಯ ಸಚಿವರು ಮತ್ತು ಇತರೆ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಲಿದ್ದಾರೆ.
"ಡಿಸೆಂಬರ್ 2 ರಂದು ದೆಹಲಿಗೆ ತೆರಳಲಿದ್ದು, ಆ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿಯಲ್ಲಿರುವ ಕೋವಿಡ್ ಕಾರ್ಯಕರ್ತರು ಲಸಿಕೆ ಪಡೆದು 6 ತಿಂಗಳಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕವಾಗಿ ಆಗಿರುವ ಪ್ರಗತಿ ಹಾಗೂ ಕೇಂದ್ರ ಸರ್ಕಾರದ ಶಿಫಾರಸ್ಸುಗಳ ಬಗ್ಗೆ ಚರ್ಚಿಸುವುದಾಗಿ'' ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಸಿದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಫ್ರಂಟ್ ಲೈನ್ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವುದು ಸೂಕ್ತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ಬೂಸ್ಟರ್ ಡೋಸ್ ನೀಡಬೇಕಾದರೆ ಅದನ್ನು ಕೇಂದ್ರ ಸರ್ಕಾರ ತೀರ್ಮಾನಿಸಿ, ಮಾರ್ಗಸೂಚಿ ಬಿಡುಗಡೆ ಮಾಡಬೇಕು. ಈ ಸಂಬಂಧ ರಾಜ್ಯದ ಅಭಿಪ್ರಾಯ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಪ್ರಸ್ತಾಪವೇ ಇಲ್ಲ ಎಂದು ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಸದ್ಯಕ್ಕೆ ಲಾಕ್ಡೌನ್ ಮಾಡುವ ಸಾಧ್ಯತೆ ಇಲ್ಲವಾದರೂ ಅದನ್ನು ಹೊರತುಪಡಿಸಿ ಕೈಗೊಳ್ಳಬೇಕಾದ ಇತರೆ ಕ್ರಮಗಳ ಕುರಿತು ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚರ್ಚೆ ಮಾಡುತ್ತಾರೆ ಎನ್ನಲಾಗಿದೆ.
ವಿಧಾನ ಪರಿಷತ್ ಚುನಾವಣೆ:
ರಾಜ್ಯದಲ್ಲಿ 25 ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಡಿ.10ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ಕೇಂದ್ರದ ಯಾವ ನಾಯಕರೂ ಭಾಗಿಯಾಗುತ್ತಿಲ್ಲ. ಹೀಗಾಗಿ ಚುನಾವಣೆಗೆ ನಡೆದಿರುವ ಸಿದ್ಧತೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕೇಂದ್ರದ ನಾಯಕರನ್ನು ಭೇಟಿಯಾಗಿ ವಿವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಳೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಪಾಲಿಗೆ ಮಿಶ್ರ ಪ್ರತಿಕ್ರಿಯೆ ಇದೆ. ಸಿಂಧಗಿಯಲ್ಲಿ ಗೆದ್ದು ಬೀಗಿದರೆ, ಹಾನಗಲ್ನಲ್ಲಿ ಸೋತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಜುಗರ ಅನುಭವಿಸುವಂತಾಗಿತ್ತು. ಈಗ 25 ಕ್ಷೇತ್ರಗಳಿಗೆ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಕ್ಷೇತ್ರಗಳನ್ನಾದರೂ ಗೆಲ್ಲುವು ಗುರಿಯನ್ನು ಕೇಂದ್ರ ನಾಯಕರು ನೀಡಿದ್ದಾರೆ. ಹೀಗಾಗಿ ಏನೇನು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದನ್ನೂ ಬೊಮ್ಮಾಯಿ ಅವರು ವಿವರಿಸಲಿದ್ದಾರೆ.
ಮತ್ತೊಂದೆಡೆ ರಾಜ್ಯದ ನಾಲ್ಕು ದಿಕ್ಕುಗಳಲ್ಲಿ ಬಿಜೆಪಿ ನಾಯಕರ ಜನಸ್ವರಾಜ್ ಯಾತ್ರೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಹಿತ ಹಲವು ನಾಯಕರು ಪಾಲ್ಗೊಂಡಿದ್ದಾರೆ. ಇದರ ಪರಿಣಾಮ ಏನು ಬೀರಿದೆ ಎಂಬುದರ ಬಗ್ಗೆಯೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ವಿವರಿಸಲಿದ್ದಾರೆ.
ಮುಖ್ಯಮಂತ್ರಿ ಕಳೆದ ಬಾರಿ ಭೇಟಿ ನೀಡಿದ್ದಾಗ ರಾಜ್ಯದಲ್ಲಿ ಬಿಟ್ಕಾಯಿನ್ ವಿಷಯ ಸದ್ದು ಮಾಡುತ್ತಿತ್ತು. ಪ್ರತಿಪಕ್ಷಗಳು ನಿರಂತರವಾಗಿ ಸರ್ಕಾರದ ಮೇಲೆ ಮುಗಿಬಿದ್ದಿದ್ದವು. ಇದು ಮುಖ್ಯಮಂತ್ರಿಯ ಮೇಲೆ ತೀವ್ರ ಒತ್ತಡ ಉಂಟು ಮಾಡಿತ್ತು. ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವರಲ್ಲಿ ಮುಖ್ಯಮಂತ್ರಿಯವರೇ ಈ ವಿಷಯವನ್ನು ಖುದ್ದು ಪ್ರಸ್ತಾಪಿಸಿದ್ದರು. ಈ ಬಾರಿ ಈ ವಿಷಯ ಚರ್ಚೆಗೆ ಬರುವ ಸಾಧ್ಯತೆ ಕಡಿಮೆ ಇದೆ.












Click it and Unblock the Notifications