Breaking; ಎಎಪಿ ಸೇರಿದ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ
ಬೆಂಗಳೂರು, ಸೆಪ್ಟೆಂಬರ್ 05: ಕಾಂಗ್ರೆಸ್ ತೊರೆದಿದ್ದ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಂಡರು. ಸುಪ್ರೀಂಕೋರ್ಟ್ನ ವಕೀಲರಾಗಿರುವ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರಾಗಿದ್ದರು.
ಭಾನುವಾರ ತಮ್ಮ ಟ್ವೀಟ್ ಖಾತೆಯಲ್ಲಿ ಬ್ರಿಜೇಶ್ ಕಾಳಪ್ಪ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭೇಟಿ ಮಾಡಿದ ಫೋಟೋ ಹಾಕಿದ್ದರು. ಬೆಂಗಳೂರಿನಲ್ಲಿ ಸೋಮವಾರ ಅವರು ಎಎಪಿ ಸೇರಿದರು.

ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿ, ದೆಹಲಿ ಶಾಸಕ ಹಾಗೂ ಮುಖ್ಯ ಸಚೇತಕರಾದ ದಿಲೀಪ್ ಪಾಂಡೆ, ಎಎಪಿ ಕರ್ನಾಟಕದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಉಪಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸಮ್ಮುಖದಲ್ಲಿ ಬ್ರಿಜೇಶ್ ಕಾಳಪ್ಪ ಎಎಪಿಗೆ ಸೇರ್ಪಡೆಗೊಂಡರು.

1997ರಲ್ಲಿ ಕಾಂಗ್ರೆಸ್ ಸೇರಿದ್ದ ಬ್ರಿಜೇಶ್ ಕಾಳಪ್ಪ ಸುದೀರ್ಘ ರಾಜಕೀಯದ ಅನುಭವ ಹೊಂದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದಾರೆ.
ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ವಕ್ತಾರರಾಗಿ ಮತ್ತು ಕಾನೂನು ಸಲಹೆಗಾರರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಅವರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಳಿಕ ಈ ವರ್ಷದ ಜೂನ್ನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಗೆ ಸಹ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಕ್ಕಿರಲಿಲ್ಲ.
ಕಾಂಗ್ರೆಸ್ ಬಿಟ್ಟಾಗ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಬ್ರಿಜೇಶ್ ಕಾಳಪ್ಪ, "ನನಗೆ ಪಕ್ಷ ಹಲವು ಅವಕಾಶಗಳನ್ನು ನೀಡಿದೆ. ಅದಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ" ಎಂದು ಹೇಳಿದ್ದರು.
"2013ರಿಂದ ನಾನು ರಾಷ್ಟ್ರೀಯ ಹಾಗೂ ವಿವಿಧ ಮಾಧ್ಯಮಗಳಲ್ಲಿ ಕಾಂಗ್ರೆಸ್ ವಕ್ತಾರನಾಗಿ ಪಕ್ಷವನ್ನು ಸಮರ್ಥಿಸಿಕೊಂಡಿದ್ದೇನೆ. ಸುಮಾರು 6,497 ಮಾಧ್ಯಮ ಚರ್ಚೆಗಳಲ್ಲಿ ಭಾಗಿಯಾಗಿದ್ದೇನೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ" ಎಂದು ತಿಳಿಸಿದ್ದರು.












Click it and Unblock the Notifications