ಅಡ್ವೊಕೇಟ್ ಜನರಲ್ ರವಿವರ್ಮ ಕುಮಾರ್ ರಾಜೀನಾಮೆ
ಬೆಂಗಳೂರು, ಅಕ್ಟೋಬರ್ 27 : ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸದಲ್ಲಿದ್ದು, ಅವರು ಮರಳಿದ ಬಳಿಕ ರಾಜೀನಾಮೆ ಅಂಗೀಕಾರದ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿಗೆ ತೆರಳಿದ ರವಿವರ್ಮ ಕುಮಾರ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. 'ದೆಹಲಿಯಿಂದ ಮರಳಿಗೆ ಬಳಿಕ ಇದನ್ನು ಪರಿಶೀಲಿಸುತ್ತೇನೆ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. [ಏನಿದು ಕಳಸಾ-ಬಂಡೂರಿ ಯೋಜನೆ?]

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿದ ಬಳಿಕ 2013ರ ಮೇ 24ರಂದು ರವಿವರ್ಮ ಕುಮಾರ್ ಅವರು ಅಡ್ವೊಕೇಟ್ ಜನರಲ್ ಆಗಿ ಅಧಿಕಾರ ಸ್ವೀಕರಿಸಿದ್ದರು. ಹಿಂದೆಯೂ ಒಮ್ಮೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಅದನ್ನು ವಾಪಸ್ ಪಡೆದಿದ್ದರು.
ರಾಜೀನಾಮೆ ಏಕೆ? : ಸರ್ಕಾರದ ನಿರ್ಧಾರದಿಂದ ಅಸಮಾಧಾನಗೊಂಡಿರುವ ರವಿವರ್ಮ ಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹಿರಿಯ ವಕೀಲ ರಾಘವೇಂದ್ರ ವಿ.ನಾಡಗೌಡ ಮತ್ತು ಸುಪ್ರೀಂಕೋರ್ಟ್ ವಕೀಲರಾಗಿರುವ ದೇವದತ್ತ ಕಾಮತ್ ಅವರನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳನ್ನಾಗಿ ನೇಮಕ ಮಾಡಲಾಗಿದೆ.
ಈ ಸ್ಥಾನಗಳಿಗೆ ರವಿವರ್ಮ ಕುಮಾರ್ ಶಿಫಾರಸು ಮಾಡಿದ ವ್ಯಕ್ತಿಗಳನ್ನು ಪರಿಗಣಿಸಿರಲಿಲ್ಲ ಎಂಬುದು ರಾಜೀನಾಮೆಗೆ ಕಾರಣವಾಗಿದೆ. ಕಳಸಾ ಬಂಡೂರಿ ವಿವಾದಕ್ಕೆ ಸಂಬಂಧಿಸಿದಂತೆ ರವಿವರ್ಮ ಕುಮಾರ್ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದ್ದರು. ಆದರೆ ಸರ್ಕಾರ ಆ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂಬುದು ಕಾರಣ ಎಂದು ತಿಳಿದುಬಂದಿದೆ.












Click it and Unblock the Notifications