ಲೋಕಾಯುಕ್ತ ಹುದ್ದೆಗೆ ಕನ್ನಡಿಗರನ್ನು ನೇಮಿಸಿ
ಬೆಂಗಳೂರು, ಜನವರಿ 08 : ಕರ್ನಾಟಕದ ಲೋಕಾಯುಕ್ತ ಹುದ್ದೆಗೆ ಕನ್ನಡಿಗರನ್ನು ನೇಮಿಸಬೇಕು ಎಂಬ ಕೂಗು ಕೇಳಿಬರುತ್ತಿದೆ. ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರನ್ನು ಲೋಕಾಯುಕ್ತರಾಗಿ ನೇಮಿಸಬಾರದು ಎಂದು ವಕೀಲರು ಸಹಿ ಸಂಗ್ರಹಣೆ ಮಾಡುತ್ತಿದ್ದಾರೆ.
ಬೆಂಗಳೂರು ವಕೀಲರ ಸಂಘದ ಸದಸ್ಯರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಸಹಿ ಸಂಗ್ರಹಣೆ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಕನ್ನಡಿಗರನ್ನು ಲೋಕಾಯುಕ್ತರಾಗಿ ನೇಮಿಸಿ ಎಂದು ಮನವಿ ಸಲ್ಲಿಸಲಿದ್ದಾರೆ. [ಲೋಕಾಯುಕ್ತ ಹುದ್ದೆಗೆ ವಿಕ್ರಂಜಿತ್ ಸೇನ್ ಹೆಸರು]

ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ಅವರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾಗ ಬೇರೆ ಜಿಲ್ಲೆಗಳಿಗೆ ಭೇಟಿ ಕೊಟ್ಟಿಲ್ಲ. ಜಿಲ್ಲಾ ನ್ಯಾಯಾಲಯಗಳ ಕುಂದು ಕೊರತೆಗಳನ್ನು ಆಲಿಸಿಲ್ಲ. ಸಿಟಿ ಸಿವಿಲ್ ಕೋರ್ಟ್ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ. [ನ್ಯಾ.ವಿಕ್ರಂಜಿತ್ ಸೇನ್ ನೂತನ ಲೋಕಾಯುಕ್ತ?]
ಕರ್ನಾಟಕದ ಸಂಸ್ಕೃತಿ, ಭಾಷೆಯ ಬಗ್ಗೆ ವಿಕ್ರಂಜಿತ್ ಸೇನ್ ಅವರಿಗೆ ಅರಿವಿಲ್ಲ. ಆದ್ದರಿಂದ ಕನ್ನಡಿಗರನ್ನು ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಬೇಕು ಎಂದು ವಕೀಲರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದಾರೆ. [ಕರ್ನಾಟಕ ಲೋಕಾಯುಕ್ತ ಹಗರಣದ Timeline]
ಇಬ್ಬರ ಹೆಸರು ಕೇಳಿಬರುತ್ತಿದೆ : ಕರ್ನಾಟಕದ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ವೈ. ಭಾಸ್ಕರರಾವ್ ರಾಜೀನಾಮೆಯಿಂದ ತೆರವಾಗಿರುವ ಹುದ್ದೆಗೆ ಯಾರನ್ನು ನೇಮಿಸಬೇಕು? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಎರಡು ದಿನಗಳ ಹಿಂದೆ ನಡೆದ ಸಭೆಯಲ್ಲಿ ವಿಕ್ರಂಜಿತ್ ಸೇನ್ ಮತ್ತು ಎಸ್.ಆರ್.ನಾಯಕ್ ಅವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಎರಡು ದಿನದಲ್ಲಿ ಅಂತಿಮ : ಲೋಕಾಯುಕ್ತ ನೇಮಕಾತಿ ಬಗ್ಗೆ ಗುರುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಎರಡು ದಿನದಲ್ಲಿ ಲೋಕಾಯುಕ್ತರ ಹೆಸರನ್ನು ಅಂತಿಮಗೊಳಿಸಲಾಗುತ್ತದೆ' ಎಂದು ಹೇಳಿದ್ದಾರೆ.












Click it and Unblock the Notifications