ಶಾಸಕ ಸ್ಥಾನಕ್ಕೆ ಮಾಲೀಕಯ್ಯ ಗುತ್ತೇದಾರ್ ರಾಜೀನಾಮೆ
ಬೆಂಗಳೂರು, ಏಪ್ರಿಲ್ 05 : ಅಫಜಲಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗಾಗಲೇ ಅವರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದು, ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ.
ಗುರುವಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿರುವ ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರ ನಿವಾಸಕ್ಕೆ ತೆರಳಿದ ಮಾಲೀಕಯ್ಯ ಗುತ್ತೇದಾರ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದರು. ಹಾಲಿ ಶಾಸಕರೊಬ್ಬರು ಶಾಸಕ ಸ್ಥಾನ ತೊರೆದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಿದೆ.
ಕಾಂಗ್ರೆಸ್ನಿಂದ ಮಾಲೀಕಯ್ಯ ಗುತ್ತೇದಾರ್ ಉಚ್ಛಾಟನೆ
ಮಾರ್ಚ್ 29ರಂದು ಮಾಲೀಕಯ್ಯ ಗುತ್ತೇದಾರ್ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು. ಏಪ್ರಿಲ್ 7ರಂದು ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.
ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಗುತ್ತೇದಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದರು.
ಚುನಾವಣಾ ಕಾಲದಲ್ಲಿ ವಲಸೆ ಬಂದವರು ಇವರು
ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು 7 ಬಾರಿ ಚುನಾವಣೆಗೆ ಸ್ಪರ್ಧಿಸಿದ್ದು, 6 ಬಾರಿ ಗೆಲುವು ಕಂಡಿದ್ದಾರೆ. 2013ರ ಚುನಾವಣೆಯಲ್ಲಿ ಅವರು 38,093 ಮತಗಳನ್ನು ಪಡೆದು ಜಯಗಳಿಸಿದ್ದರು.