ಅಂಗನವಾಡಿಯ ಪೌಷ್ಠಿಕ ಆಹಾರ ಕಾಳಸಂತೆಯಲ್ಲಿ ಮಾರಾಟ: ಹೈಕೋರ್ಟ್ ಗರಂ
ಬೆಂಗಳೂರು ಮೇ 11. ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿನ ಪೌಷ್ಠಿಕ ಆಹಾರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ, ಅದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಅಂಗನವಾಡಿಗಳ ಮೂಲಸೌಕರ್ಯ ಕೊರತೆ ನೀಗಿಸಲು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುರುನಾಥ ವಡ್ಡೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ನ್ಯಾಯಮೂರ್ತಿ ಬಿ.ಎಂ. ಶ್ಯಾಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ರಜಾಕಾಲದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.

ಅರ್ಜಿದಾರರ ಆಕ್ಷೇಪವೇನು?
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಬಡ ಮಕ್ಕಳ ಅಪೌಷ್ಠಿಕತೆ ನಿವಾರಿಸುವ ಮತ್ತು ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಅಂಗನವಾಡಿ ಕೇಂದ್ರ ಆರಂಭಿಸಿದೆ. ಆದರೆ, ಬೀದರ್ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಮಕ್ಕಳಿಗೆ ಸೂಕ್ತ ವಾತಾವರಣವಿಲ್ಲ. ಕೋಣೆಗಳು ಕಿರಿದಾಗಿವೆ. ಪೌಷ್ಠಿಕಾಂಶ ಆಹಾರ ದೊರೆಯುತ್ತಿಲ್ಲ. ಶೌಚಾಲಯದ ವ್ಯವಸ್ಥೆ ಸಮರ್ಪಕವಾಗಿಲ್ಲ. ವಿದ್ಯುತ್ ಸಂಪರ್ಕ ಹಾಗೂ ಫ್ಯಾನ್ ಸೌಲಭ್ಯವಿಲ್ಲ ಎಂದರು.
ಅಲ್ಲದೆ, ಅಂಗನವಾಡಿ ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆಯಿಂದಾಗಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿವೆ. ಈ ಕುರಿತು ಬೀದರ್ ಜಿಲ್ಲಾ ಪ್ರಧಾನ ಮತ್ತು ಸತ್ತ್ರ ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದ್ದರು ಎಂದರು.
ಕಾಳಸಂತೆಯಲ್ಲಿ ಮಾರಾಟ:
ಅಂಗನವಾಡಿ ಮಕ್ಕಳಿಗೆ ನೀಡಬೇಕಿರುವ ಪೌಷ್ಠಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರೇ ತಮ್ಮ ಮನೆಗಳಿಗೆ ಕೊಂಡೊಯ್ಯುತ್ತಿದ್ದಾರೆ. ಪೌಷ್ಠಿಕ ಆಹಾರ ಉತ್ಪಾದನಾ ಘಟಕಗಳ ಕಳಪೆ ಆಹಾರ ಉತ್ಪಾದಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಅಲ್ಲದೆ, ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ಒದಗಿಸಬೇಕು. ಕೇಂದ್ರಗಳಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಬಯೋಮೆಟ್ರಿಕ್ ಮತ್ತು ಸಿಸಿಟಿವಿ ಆಳವಡಿಸಬೇಕು. ಆ ಮೂಲಕ ವ್ಯವಸ್ಥೆ ಸುಧಾರಿಸಬೇಕು ಹಾಗೂ ಭ್ರಷ್ಟಾಚಾರ ನಿಯಂತ್ರಿಸಬೇಕು. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಕಳೆದ ಏಪ್ರಿಲ್ನಲ್ಲಿ ಮನವಿ ಪತ್ರ ಸಲ್ಲಿಸಲಾಗಿದೆ. ಆ ಮನವಿ ಪರಿಗಣಿಸಿ ಅಗತ್ಯಕ್ರಮ ಜರುಗಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.












Click it and Unblock the Notifications