ಹೈಕೋರ್ಟಿಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ಕ್ಷಮೆಯಾಚಿಸಿದ ರಾಮನಗರ ಎಸಿ
ಬೆಂಗಳೂರು, ಮಾ.10: ಅಗ್ರಿ ಗೋಲ್ಡ್ ಕಂಪನಿ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ಗೆ ಸುಳ್ಳು ಮಾಹಿತಿ ನೀಡಿದ್ದ ರಾಮನಗರದ ಉಪವಿಭಾಗಾಧಿಕಾರಿ ಮಂಜುನಾಥ್ ಅವರು ನ್ಯಾಯಾಲಯಕ್ಕೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ನ್ಯಾಯಾಲಯದ ನಿರ್ದೇಶದನಂತೆ ಅವರು ಇಂದು ಹೈಕೋರ್ಟ್ನಲ್ಲಿ ಖುದ್ದು ಹಾಜರಾಗಿದ್ದರು. ಆಗ ನ್ಯಾಯಪೀಠ ತರಾಟೆಗೆ ತೆಗೆದುಕೊಂಡ ನಂತರ ಬಹಿರಂಗವಾಗಿ ಕ್ಷಮೆ ಯಾಚನೆ ಮಾಡಿದರು.
ಮಂಗಳೂರಿನ ಅಗ್ರಿ ಗೋಲ್ಡ್ ಗ್ರಾಹಕರು ಮತ್ತು ಏಜೆಂಟ್ರ ಕಲ್ಯಾಣ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿದ್ದ ವಿಭಾಗೀಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತು.
ಸುಪ್ರೀಂಕೋರ್ಟ್ಗೆ 2022ರ ಜ.5ರಂದು ಅರ್ಜಿಯು ಸಲ್ಲಿಕೆಯಾಗಿದ್ದರೂ ಅದಕ್ಕೂ ಮುನ್ನ ಹೈಕೋರ್ಟ್ನಲ್ಲಿ ಪ್ರಕರಣ ನಾಲ್ಕು ಬಾರಿ ಅರ್ಜಿ ವಿಚಾರಣೆಗೆ ಬಂದಾಗ, ಸುಪ್ರೀಂ ಕೋರ್ಟ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿದ ರಾಮನಗರ ಉಪ ವಿಭಾಗಾಧಿಕಾರಿ ಮಂಜುನಾಥ್ ನ್ಯಾಯಾಲಯ ನಿರ್ದೇಶನದ ಮೇರೆಗೆ ಕೋರ್ಟ್ ಸೂಚನೆ ಮೇರೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಆಗ ನ್ಯಾಯಪೀಠ ''ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ನಿಮ್ಮನ್ನು ಜೈಲಿಗೆ ಕಳಿಸಬಹುದು. ನಿಮ್ಮ ಉದ್ಯೋಗ ಹೋಗುತ್ತದೆ. ಇದು ನಿಮಗೆ ಗೊತ್ತೇ? 14 ವರ್ಷ ಸೇವಾನುಭವದಲ್ಲಿ ಹೀಗೆಯೇ ಕಾರ್ಯ ನಿರ್ವಹಣೆ ಮಾಡಿಕೊಂಡು ಬಂದಿರೋದಾ''ಎಂದು ತರಾಟೆಗೆ ತೆಗೆದುಕೊಂಡಿತು.
ಬಳಿಕ ಉಪ ವಿಭಾಗಾಧಿಕಾರಿಯು ತಮ್ಮ ತಪ್ಪಿಗೆ ಬೇಷರತ್ ಕ್ಷಮೆ ಯಾಚಿಸಿದರು. ಅದನ್ನು ಒಪ್ಪಿದ ನ್ಯಾಯಪೀಠ, ಭವಿಷ್ಯದಲ್ಲಿ ತುಂಬಾ ಎಚ್ಚರದಿಂದ ಇರಬೇಕು. ಇಂತಹ ತಪ್ಪು ಪುನಃ ಮಾಡಬಾರದು ಎಂದು ಎಚ್ಚರಿಕೆ ನೀಡಿತು.
ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಹೈಕೋರ್ಟ್ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಬಗ್ಗೆ ವಿವರಣೆ ನೀಡಲು ರಾಮನಗರ ಉಪ ವಿಭಾಗಾಧಿಕಾರಿ ಮಾ.10ಕ್ಕೆ ಖುದ್ದು ಹಾಜರಾಗಬೇಕು ಆದೇಶಿಸಿತ್ತು.
ಅರ್ಜಿದಾರರ ಪರ ವಕೀಲರು, ಅಗ್ರಿ ಗೋಲ್ಡ್ ಕಂಪನಿ ವಂಚನೆ ವಿರುದ್ಧ ಕರ್ನಾಟಕ, ತೆಲಂಗಾಣ ಸೇರಿ ದೇಶದ ಇತರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ.
ಎಲ್ಲ ಪ್ರಕರಣಗಳ ವಿಚಾರಣೆಗೆ ಒಂದೇ ಒಂದು ಕೋರ್ಟ್ ಸ್ಥಾಪಿಸಲು ನಿರ್ದೇಶನ ನೀಡುವಂತೆ ಕೋರಿ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ಹಲವು ತಿಂಗಳುಗಳಿಂದ ಹೇಳುತ್ತಿದೆ, ಆದರೆ ಅದರ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿಲ್ಲ ಎಂದರು.
ಆಗ ಸರ್ಕಾರದ ಪರ ವಕೀಲರು, ಹಿಂದೆ ರಾಮನಗರ ಉಪ ವಿಭಾಗಾಧಿಕಾರಿ ಕಚೇರಿಯಿಂದ ಬಂದ ಮಾಹಿತಿಯಂತೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಕೋರ್ಟ್ ಗೆ ತಿಳಿಸಲಾಗಿತ್ತು. ಆದರೆ, ಈ ಬಗ್ಗೆ ಪರಿಶೀಲಿಸಿದಾಗ ಉಡುಪಿ ಕೋರ್ಟ್ನಲ್ಲಿ ಮಾತ್ರ ಪ್ರಕರಣ ಬಾಕಿ ಇದೆ. ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಯಾವುದೇ ಅರ್ಜಿ ಸಲ್ಲಿಸಿಲ್ಲ ವಿಚಾರಣೆಯೂ ಬಾಕಿ ಇಲ್ಲ ಎಂದರು.
ಆಗ ಸಿಟ್ಟಿಗೆದ್ದ ಸಿಜೆ, ಇದೇನಿದು ಹೈಕೋರ್ಟ್ ಅನ್ನು ಏನೆಂದು ಭಾವಿಸಿದ್ದೀರಿ, ಕೋರ್ಟ್ ಗೆ ನೀಡಿರುವ ಹೇಳಿಕೆಗೆ ಬೆಲೆ ಇಲ್ಲವೇ? ಯಾವ ಅಧಿಕಾರಿ ತಪ್ಪು ಮಾಹಿತಿ ನೀಡಿದ್ದು, ಏಕೆ ತಪ್ಪು ಮಾಹಿತಿ ನೀಡಿದ್ದು ಎಂದು ಖಾರವಾಗಿ ಪ್ರಶ್ನಿಸಿದರು. ಅಲ್ಲದೆ, ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬಾಕಿ ಇದೆ ಎಂಬ ಕಾರಣ ನೀಡಿ ಅರ್ಜಿಯನ್ನು ನಾಲ್ಕು ಬಾರಿ ಸರ್ಕಾರ ಮುಂದಕ್ಕೆ ಹಾಕಿಸಿಕೊಂಡಿದೆ. 6 ತಿಂಗಳಿನಿಂದ ವಿಚಾರಣೆ ವಿಳಂಬವಾಗಿದೆ. ಇದೀಗ ಸುಪ್ರೀಂಕೋರ್ಟ್ಗೆ ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂದರೆ ಏನರ್ಥ ಎಂದು ತರಾಟೆಗೆ ತೆಗೆದುಕೊಂಡಿತ್ತು.
32 ಲಕ್ಷ ಹೂಡಿಕೆದಾರರಿಗೆ ವಂಚನೆ: ಕಳೆದ ವರ್ಷ ಜು.6ರಂದು ನಡೆದಿದ್ದ ಅರ್ಜಿ ವಿಚಾರಣೆಗೆ ಹಾಜರಾಗಿದ್ದ ಸಕ್ಷಮ ಪ್ರಾಧಿಕಾರದ ಅಧಿಕಾರಿ, ಕಂಪನಿಯಲ್ಲಿ ಅಂದಾಜು 32 ಲಕ್ಷ ಹೂಡಿಕೆದಾರರಿದ್ದು, ರಾಜ್ಯದ 8.8 ಲಕ್ಷ ಹೂಡಿಕೆದಾರರು ವಿವಿಧ ಶಾಖೆಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಸೇರಿ ಇತರ ರಾಜ್ಯಗಳಲ್ಲಿ ಅಗ್ರಿಗೋಲ್ಡ್ ಕಂಪನಿಯ ಅವ್ಯವಹಾರ ನಡೆದಿದೆ. ಅಲ್ಲಿಯೂ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಕಂಪನಿಗೆ ಸೇರಿದ ಒಟ್ಟು 290 ಆಸ್ತಿಗಳನ್ನು ತೆಲಂಗಾಣ ಸರ್ಕಾರ ಜಪ್ತಿ ಮಾಡಿದೆ ಎಂದು ಹೇಳಿದ್ದರು.
ಅಲ್ಲದೆ, ಎಲ್ಲ ರಾಜ್ಯಗಳಲ್ಲಿನ ಪ್ರಕರಣಗಳ ವಿಚಾರಣೆಗೆ ಒಂದು ನೋಡಲ್ ರಾಜ್ಯ ಹಾಗೂ ಒಂದು ನ್ಯಾಯಾಲಯ ಸ್ಥಾಪನೆಗೆ ಕೋರಿ ಸುಪ್ರೀಂಕೊರ್ಟ್ಗೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದರು.












Click it and Unblock the Notifications