Breaking; ಕೃಷಿ ಸಚಿವ ಬಿ. ಸಿ. ಪಾಟೀಲ್ ಆಸ್ಪತ್ರೆಗೆ ದಾಖಲು
ಬೆಂಗಳೂರು, ನವೆಂಬರ್ 22; ಹಿರೇಕೆರೂರು ಕ್ಷೇತ್ರದ ಬಿಜೆಪಿ ಶಾಸಕ, ಕೃಷಿ ಸಚಿವ ಬಿ. ಸಿ. ಪಾಟೀಲ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರು ಫೇಸ್ಬುಕ್ ವಿಡಿಯೋವೊಂದನ್ನು ಹಾಕಿದ್ದಾರೆ.
ಸಚಿವ ಬಿ. ಸಿ. ಪಾಟೀಲ್ ಮಣಿಪಾಲ ಆಸ್ಪತ್ರೆಯಲ್ಲಿ ಮಂಡಿ ನೋವಿನ ಹಿನ್ನೆಲೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಗುಣಮುಖನಾಗುತ್ತಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
"ನಿನ್ನೆ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಮಂಡಿ ನೋವಿನ ಹಿನ್ನೆಲೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಗುಣಮುಖನಾಗುತ್ತಿದ್ದೇನೆ" ಎಂದು ಸಚಿವರು ವಿಡಿಯೋ ಪೋಸ್ಟ್ ಮಾಡಿದ್ದಾರೆ.

"ದಯವಿಟ್ಟು ಕೆಲವು ದಿನಗಳ ಕಾಲ ಸಹಕರಿಸಬೇಕಾಗಿ ವಿನಂತಿ. ಇಲಾಖೆ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ಸಾಗಲು ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಸೂಕ್ತ ಸೂಚನೆ ನೀಡುತ್ತಿದ್ದೇನೆ" ಎಂದು ಸಚಿವರು ತಿಳಿಸಿದ್ದಾರೆ.
2018ರ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ. ಸಿ. ಪಾಟೀಲ್ ಚುನಾವಣೆ ಎದುರಿಸಿದ್ದರು. 72,461 ಮತಗಳನ್ನು ಪಡೆದು ಜಯಗಳಿಸಿದ್ದರು.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಬಿಜೆಪಿ ಸೇರಿದರು. 2019ರ ಡಿಸೆಂಬರ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದರು.
ಉಪ ಚುನಾವಣೆಯಲ್ಲಿ ಗೆದ್ದ ಬಳಿಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಕೃಷಿ ಸಚಿವರಾದರು. ಯಡಿಯೂರಪ್ಪ ರಾಜೀನಾಮೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಕೃಷಿ ಸಚಿವರಾಗಿ ಮುಂದುವರೆದಿದ್ದಾರೆ.
ರಾಜಕೀಯ ಹೊರತುಪಡಿಸಿ ನಟನಾಗಿಯೂ ಬಿ. ಸಿ. ಪಾಟೀಲ್ ಗುರುತಿಸಿಕೊಂಡಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ 'ಗರಡಿ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅವರು ನಟಿಸಿದ್ದು, ಚಿತ್ರ ಇನ್ನೂ ತೆರೆ ಕಾಣಬೇಕಿದೆ.












Click it and Unblock the Notifications