ಬಿತ್ತನೆ ಬೀಜ, ರಸಗೊಬ್ಬರದ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಕೃಷಿ ಸಚಿವ
ಮೈಸೂರು, ಜುಲೈ 4: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕೃಷಿ ಚಟುವಟಿಕೆಗಳಲ್ಲಿ ರೈತರು ತೊಡಗಿದ್ದಾರೆ. ಇತ್ತ ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆಯಾಗುತ್ತಿದೆ ಎನ್ನಲಾಗಿದ್ದು, ಈ ಬಗ್ಗೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ರೈತರಿಗೆ ಶುಭಸುದ್ದಿಯನ್ನ ನೀಡಿದ್ದಾರೆ.
ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯ ನಂತರ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ. ಶೇ 100% ಬಿತ್ತನೆಯಾಗುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು. ಭೂಮಿಯ ಫಲವತ್ತತೆ, ಪರಿಸರ ಸಂರಕ್ಷಣೆ ಹಾಗೂ ಮಾನವನ ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಮತ್ತು ಕೀಟನಾಶಕಗಳ ಬಳಕೆ ಕಡಿಮೆ ಮಾಡಲು ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸಿ ಎಂದು ಅವರು ನಿರ್ದೇಶನ ನೀಡಿದರು.

ಮಳೆ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಬೆಳೆಗಳ ಬಗ್ಗೆಯೂ ಮಾರ್ಗದರ್ಶನ ನೀಡಿ,ಕೃಷಿ ಯಾಂತ್ರಿಕರಣ,ಕೃಷಿ ಭಾಗ್ಯ ಯೋಜನೆ ಜಾರಿ ,ಸಾವಯವ ಕೃಷಿ,ಸಮಗ್ರ ಬೇಸಾಯದ ಬಗ್ಗೆ ಜಾಗೃತಿ ಮೂಡಿಸಲು ಆದ್ಯತೆ ನೀಡಿ. ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಫಲ ರೈತರಿಗೆ ತಲುಪಿಸುವಲ್ಲಿ ಆಸಕ್ತಿ ವಹಿಸಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು. ರಾಜ್ಯದಲ್ಲಿ ಹಾಲಿ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ 50% ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭೂಮಿಯ ಫಲವತ್ತತೆ ಕಾಯ್ದುಕೊಳ್ಳುವ ಉದ್ದೇಶದಿಂದ ಯೂರಿಯಾ ಬಳಕೆ ಕಡೆಮೆ ಮಾಡಲು ಕರೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದ ಎರೆಡು ವರ್ಷಗಳಿಂದ ರಾಸಾಯನಿಕಗಳು ಹಾಗೂ ಕೀಟನಾಶಕಗಳ ಬಳಕೆ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸಾವಯವ ಕೃಷಿ, ಸಮಗ್ರ ಬೇಸಾಯದ ಲಾಭಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಪೂರ್ವ ಮುಂಗಾರು ಅಧಿಕವಾಗಿ ಸುರಿದು ಕೆಲವೆಡೆ ಹಾನಿ ಮಾಡಿದೆ. ರೈತರು ಪ್ರತಿ ವರ್ಷ ಬೆಳೆವಿಮೆ ಮಾಡಿಸಿ ಸಂಭವನೀಯ ನಷ್ಟ ಕಡಿತ ಮಾಡಿಕೊಳ್ಳಬೇಕು ಎಂದು ಕೃಷಿ ಸಚಿವರು ಕರೆ ನೀಡಿದರು.
2023-24 ರಲ್ಲಿ ಬರ ಪರಿಸ್ಥಿತಿ ಕಾಡಿತ್ತು. ರೈತರ ಸಂಕಷ್ಟಕ್ಕೆ ಸ್ಪಂದಿಸಿ, 3454 ಕೋಟಿ ರೂ ಬರಪರಿಹಾರ ನೀಡಲಾಗಿತ್ತು. 2024 -25 ನೇ ಸಾಲಿನಲ್ಲಿ ಗುರಿಗಿಂತ ಹೆಚ್ಚು ಅಂದರೆ 153 ಲಕ್ಷ ಟನ್ ಆಹಾರ ಉತ್ಪಾದನೆಯಾಗಿತ್ತು .ಈ ವರ್ಷ148.48 ಲಕ್ಷ ಮೆ.ಟನ್ ಆಹಾರ ಧಾನ್ಯ ಗಳು ಮತ್ತು 12.20 ಲಕ್ಷ ಟನ್ ಎಣ್ಣೆಕಾಳು ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಕೃಷಿ ಸಚಿವರು ಹೇಳಿದರು. ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಆಧ್ಯತೆ ನೀಡಲಾಗಿದೆ. ಹಿಂದೆಂದೂ ಕಂಡಿರದ ಪ್ರಮಾಣದಲ್ಲಿ ಯಂತ್ರೋಪಕರಣಗಳು, ಸೂಕ್ಷ್ಮ ನೀರಾವರಿ ಸಲಕರಣೆಗಳನ್ನು ಸಹಾಯಧನದಲ್ಲಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಕೃಷಿ ಭಾಗ್ಯ ಯೋಜನೆ ಎಲ್ಲಾ ಕ್ಷೇತ್ರಗಳಿಗೆ ವಿಸ್ತರಿಸಲಾಗಿದ್ದು 24000 ಕೃಷಿ ಹೊಂಡ ನಿರ್ಮಾಣ ಗುರಿ ಪೂರೈಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ತಾವು ರಾಜ್ಯಾದ್ಯಂತ ಪ್ರವಾಸ ಮಾಡಿ ಕೃಷಿ ಯೋಜನೆಗಳ ಅನುಷ್ಠಾನ ಹಾಗೂ ಕೃಷಿ ಪರಿಸ್ಥಿತಿಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು ಎಲ್ಲಾ ವಿಭಾಗಗಳಲ್ಲೂ ಅಧಿಕಾರಿಗಳ ಸಭೆ ಮಾಡಿ ಸಲಹೆ ,ಸೂಚನೆ ನೀಡಲಾಗುತ್ತಿದೆ ಎಂದು ಹೇಳಿದರು.












Click it and Unblock the Notifications