ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಬಿ. ಎನ್. ಚಂದ್ರಪ್ಪ ನೇಮಕ
ಬೆಂಗಳೂರು, ಏಪ್ರಿಲ್ 09; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯ ಸಮಯದಲ್ಲಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ಮಾರ್ಚ್ ತಿಂಗಳಿನಲ್ಲಿ ನಿಧನ ಹೊಂದಿದ್ದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಭಾನುವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ. ಎನ್. ಚಂದ್ರಪ್ಪ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಂದ್ರಪ್ಪ ನೇಮಕ ಮಾಡಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರಾದ ಬಿ. ಎನ್. ಚಂದ್ರಪ್ಪ ಚಿಕ್ಕಬಳ್ಳಾಪುರ ಜಿಲ್ಲಾ ಪರಿಷತ್ ಸದಸ್ಯರಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ನಾರಾಯಣ ಸ್ವಾಮಿ ವಿರುದ್ಧ ಸೋಲು ಕಂಡಿದ್ದರು.
ಬಿ. ಎನ್. ಚಂದ್ರಪ್ಪ ಪರಿಚಯ; ಬಿ. ಎನ್. ಚಂದ್ರಪ್ಪ ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆಯರು. ಚಿಕ್ಕಮಗಳೂರಿನ ನಾಗಪ್ಪ ಮತ್ತು ಲಕ್ಷಮ್ಮ ದಂಪತಿಯ ಪುತ್ರ ಬಿ. ಎನ್. ಚಂದ್ರಪ್ಪ ಅಕ್ಟೋಬರ್ 1, 1955ರಲ್ಲಿ ಜನಿಸಿದರು. ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
1986 ರಿಂದ 1991ರ ತನಕ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ಮರು ಆಯ್ಕೆಗೊಂಡು ಉಪಾಧ್ಯಕ್ಷರು ಆದರು. 2001-2003 ಲಿಡ್ಕರ್ ಮಂಡಳಿಯ ಅಧ್ಯಕ್ಷರಾಗಿದ್ದರು. 2014-2019ರ ತನಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಆಗ ಹಲವಾರು ಸ್ಥಾಯಿ ಸಮಿತಿಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ದಲಿತ ಎಡಗೈ ಸಮುದಾಯಕ್ಕೆ ಸೇರಿದ ಬಿ. ಎನ್. ಚಂದ್ರಪ್ಪರನ್ನು ನೇಮಕ ಮಾಡುವ ಮೂಲಕ ಎಐಸಿಸಿ ಸಮಯದಾಯದ ಬೇಡಿಕೆ ಈಡೇರಿಸಿದೆ. ಹಲವು ನಾಯಕರು ದಲಿತ ಎಡಗೈ ಸಮುದಾಯಕ್ಕೆ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ಈ ಹಿಂದೆ ಒತ್ತಾಯಿಸಿದ್ದರು. ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ, ಮುನಿಯಪ್ಪ ಎಲ್ಲರೂ ದಲಿತ ಬಲಗೈ ಸಮುದಾಯಕ್ಕೆ ಸೇರಿದ ನಾಯಕರು.
2009ರ ಚುನಾವಣೆಯಲ್ಲಿ ಬಿಜೆಪಿಯ ಜನಾರ್ದನ ಸ್ವಾಮಿ ಚಿತ್ರದುರ್ಗದ ಸಂಸದರಾಗಿ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಬಿ. ಎನ್. ಚಂದ್ರಪ್ಪ ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂಬ ಆರೋಪದ ನಡುವೆಯೂ 4,47,511 ಮತಗಳನ್ನು ಪಡೆದು ಚಿತ್ರದುರ್ಗದಿಂದ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದ್ದರು.

ಎರಡು ಬಾರಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಬಿ. ಎನ್. ಚಂದ್ರಪ್ಪ ಅವರು ಸೋಲು ಅನುಭವಿಸಿದ್ದರು. 2014ರಲ್ಲಿ ನೇರವಾಗಿ ಲೋಕಸಭೆ ಪ್ರವೇಶ ಪಡೆದಿದ್ದರು. ಆದರೆ 2019ರ ಚುನಾವಣೆಯಲ್ಲಿ ಅವರು ಸೋಲು ಕಂಡಿದ್ದರು. ಈಗ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಚುನಾವಣೆಯ ಸಮಯದಲ್ಲಿ ಹೊಸ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡಿದೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಚಿತ್ರದುರ್ಗ ಜಿಲ್ಲೆಯ ಮೂಲಕ ಆಗಿತ್ತು. ಆಗ ಬಿ. ಎನ್. ಚಂದ್ರಪ್ಪ ಸಕ್ರಿಯವಾಗಿ ಸಂಘಟನೆ ನಡೆಸಿದ್ದರು, ಯಾತ್ರೆಯಲ್ಲಿಯೂ ಪಾಲ್ಗೊಂಡಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷರು; ಡಿ. ಕೆ. ಶಿವಕುಮಾರ್ ಕೆಪಿಸಿಸಿಯ ಅಧ್ಯಕ್ಷರು. ಪಕ್ಷ ಸಂಘಟನೆ, ಬಲವರ್ಧನೆಗಾಗಿ ಈಶ್ವರ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ ಮತ್ತು ಆರ್. ಧ್ರುವನಾರಾಯಣರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಮಾರ್ಚ್ 11ರಂದು ಆರ್. ಧ್ರುವನಾರಾಯಣ ನಿಧನ ಹೊಂದಿದ್ದರು. ತೆರವಾದ ಸ್ಥಾನಕ್ಕೆ ಚುನಾವಣೆಯ ಸಮಯದಲ್ಲಿ ಎಐಸಿಸಿ ಬಿ. ಎನ್. ಚಂದ್ರಪ್ಪರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿದೆ.












Click it and Unblock the Notifications