ಡಿಕೆಶಿ ಆಪ್ತ ಮಾಗಡಿ ಎಂಎಲ್ಎ ಬಾಲಕೃಷ್ಣಗೆ ಸಚಿವ ಸ್ಥಾನ?
ಬೆಂಗಳೂರು, ಜನವರಿ 14: ಆಡಳಿತಾರೂಢ ಕಾಂಗ್ರೆಸ್ನಲ್ಲಿನ ನಾಯಕತ್ವ ಬಿಕ್ಕಟ್ಟನ್ನು ಶಮನಗೊಳಿಸಲು ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಆಗಮಿಸಿದ್ದು, ಸೋಮವಾರ ನಡೆದ ಶಾಸಕಾಂಗ ಸಭೆಯಲ್ಲಿ ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡಿದ್ದಾರೆ.
ಸಚಿವರ ಕಾರ್ಯಕ್ಷಮತೆಯ ಕುರಿತು ವರದಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ಹೇಳಿದ ಸುರ್ಜೇವಾಲಾ, ಮತ್ತೊಂದು ಸುತ್ತಿನ ಮೌಲ್ಯಮಾಪನದ ನಂತರ ಸಂಭಾವ್ಯ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಸುಳಿವು ನೀಡಿದ್ದಾರೆ.

ಇನ್ನೂ ಕಾಂಗ್ರೆಸ್ ನಲ್ಲಿ ಈಗಾಗಲೇ ಸಚಿವ ಸಂಪುಟ ಪುನರ್ ರಚನೆ ಕುರಿತು ಚರ್ಚೆಯಾಗುತ್ತಿದ್ದು, ಕೆಲ ಹಿರಿಯ ಸಚಿವರನ್ನ ಸಂಪುಟದಿಂದ ಕೈ ಬಿಟ್ಟು, ಕೆಲ ಹಿರಿಯ ಶಾಸಕರಿಗೆ ಮಂತ್ರಿಭಾಗ್ಯವನ್ನ ನೀಡುವ ನಿಟ್ಟಿನಲ್ಲಿ ಹೈಕಮಾಂಡ್ ಸಿದ್ದತೆಯನ್ನ ನಡೆಸಿದೆ. ಮಾಗಡಿ ಶಾಸಕ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಆಪ್ತರಾಗಿರುವ ಡಿ ಕೆ ಶಿವಕುಮಾರ್ ಅವರಿಗೆ ಈ ಬಾರೀ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.ಸಚಿವ ಸ್ಥಾನ ಕಳೆದುಕೊಂಡಿರುವ ಬಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಆಪ್ತರಾಗಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದಾರೆ. ಬಿ.ಕೆ ಹರಿಪ್ರಸಾದ್, ಅನಿಲ್ ಚಿಕ್ಕಮಾದು, ವಿಜಯಾನಂದ ಕಾಶಪ್ಪನವರ್, ವಿನಯ್ ಕುಲಕರ್ಣಿ ಸೇರಿದಂತೆ ಇನ್ನೂ ಅನೇಕ ಶಾಸಕರು ಸಚಿವ ಸ್ಥಾನ ಬೇಕೆ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮಾರ್ಚ್ ನಲ್ಲಿ ನಡೆಯುವ ಬಜೆಟ್ ಅಧಿವೇಶನದ ಬಳಿಕ ಹಲವು ಶಾಸಕರಿಗೆ ಮಂತ್ರಿ ಭಾಗ್ಯ ಒಲಿದು ಬರಲಿದೆ ಎಂದು ಹೇಳಲಾಗಿದೆ.
ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಪಕ್ಷದ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್' ಸಮಾವೇಶದ ಕುರಿತು ಸಭೆಯಲ್ಲಿ ಹಲವು ಸೂಚನೆಯನ್ನ ಸುರ್ಜೆವಾಲಾ ಅವರು ನೀಡಿದ್ದಾರೆ. ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣ ಉಪಚುನಾವಣೆಗಳಲ್ಲಿ ಪಕ್ಷದ ಗೆಲುವಿನ ಶ್ರೇಯಸ್ಸು ಯಾವುದೇ ವ್ಯಕ್ತಿಗೆ ಸಲ್ಲಬಾರದು, ಸಚಿವರು ಮತ್ತು ಕಾರ್ಯಕರ್ತರು ಸೇರಿದಂತೆ ಇಡೀ ನಾಯಕತ್ವಕ್ಕೆ ಸಲ್ಲಬೇಕು ಎಂದು ಸಿದ್ದರಾಮಯ್ಯ ಹೇಳಿದರು. ಎಸ್ಸಿ/ಎಸ್ಟಿ ಶಾಸಕರ ಪ್ರತ್ಯೇಕ ಸಭೆ ನಡೆಸಲು ಯೋಜಿಸಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಗೈರುಹಾಜರಾಗಿದ್ದರು. ಸುರ್ಜೇವಾಲಾ ಅವರು ಈ ಸಭೆಯನ್ನು ತಡೆಹಿಡಿದಿದ್ದಾರೆ ಎನ್ನುವ ಮಾತುಗಳು ಕೈ ಪಾಳಯದಲ್ಲಿ ಕೇಳಿಬರುತ್ತಿದೆ.
ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ 'ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ರ್ಯಾಲಿ' ನಮ್ಮ ಸಂವಿಧಾನ, ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ರಕ್ಷಿಸುವ ಸ್ಪಷ್ಟ ಕರೆಯಾಗುವುದಲ್ಲದೆ, ಅಮಿತ್ ಶಾ ಪ್ರತಿಪಾದಿಸಿದ ಬಿಜೆಪಿಯ ಸಿದ್ಧಾಂತದ ವಿರುದ್ಧ ಒಗ್ಗಟ್ಟಿನಿಂದ ಮಂತ್ರವಾಗಿದೆ ಎಂದು ಕರೆ ನೀಡಿದರು.












Click it and Unblock the Notifications