ಎಐಸಿಸಿ ಅಧ್ಯಕ್ಷ ಚುನಾವಣೆ: ಕೆಪಿಸಿಸಿ ಕಚೇರಿಯಲ್ಲಿ ಮತದಾನ ವ್ಯವಸ್ಥೆ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಕರ್ನಾಟಕದ ಮತದಾರರಿಗಾಗಿ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಗೆ ಒಂದು ದಿನ ತಾತ್ಕಾಲಿಕ ವಿರಾಮ ನೀಡಲಾಗಿದೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯಸಭಾ ಸದಸ್ಯ ಶಶಿ ತರೂರ್ ಸ್ಪರ್ಧಿಸಿದ್ದಾರೆ. ಇಬ್ಬರಲ್ಲಿ ಅಧ್ಯಕ್ಷರು ಯಾರಾಗಬೇಕು ಎಂದು ಮತದಾರರು ಇಂದು ನಿರ್ಧರಿಸಲಿದ್ದಾರೆ. ಚುನಾವಣಾ ಫಲಿತಾಂಶ ಅ.19ರಂದು ಹೊರಬೀಳಲಿದೆ.

ಬೆಳಗ್ಗೆ 10ರಿಂದ ಸಂಜೆ 4:
ಎಐಸಿಸಿ ಅಧ್ಯಕ್ಷ ಗಾದಿಯ ಚುನಾವಣೆ ಮತದಾನ ಸೋಮವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 04.00 ರವರಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿದ್ದು, ಕರ್ನಾಟಕದ ಕಾಂಗ್ರೆಸ್ ಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.
ಭಾರತ್ ಜೋಡೊ ಯಾತ್ರಗೆ ಬಿಡುವು:
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಭಾರತ್ ಜೋಡೊ ಯಾತ್ರೆಗೆ ಸೋಮವಾರ ಒಂದು ದಿನ ಬಿಡುವು ನೀಡಲಾಗಿದೆ. ಈಗಾಗಲೇ ಬಳ್ಳಾರಿ ದಾಟಿ ಸಂಗನಕಲ್ಲು ಎಂಬಲ್ಲಿ ಭಾನುವಾರ ರಾತ್ರಿ ವಾಸ್ತವ್ಯ ಮಾಡಲಾಗಿದೆ.
ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದಲ್ಲಿಯೇ ಮತದಾನ ಮಾಡಲಿದ್ದಾರೆ. ರಾಹುಲ್ಗಾಂಧಿ ಜೊತೆ ಯಾತ್ರೆಯಲ್ಲಿ ಭಾಗವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಸಂವಹನ ವಿಭಾಗ ಮುಖ್ಯಸ್ಥ ಜೈರಾಮ್ ರಮೇಶ್ ಸಹಿತ ಸುಮಾರು 70 ಮತದಾರರು ಸಂಗನಕಲ್ಲು ಗ್ರಾಮದಲ್ಲಿ ಮತದಾನ ಮಾಡಲಿದ್ದಾರೆ. ಇದಲ್ಲದೆ ಸಂಸದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ, ಶಾಸಕ ನಾಗೇಂದ್ರ ಅವರಿಗೂ ಸಹ ಸಂಗನಕಲ್ಲು ಮತದಾನ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗಿದೆ.












Click it and Unblock the Notifications