ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಗೆ ಗೆಲುವು: ಪ್ರಿಯಾಂಕ ಗಾಂಧಿಗೆ ಧನ್ಯವಾದ ತಿಳಿಸಿದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ ಡಿಸೆಂಬರ್ 8: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಗುರುವಾರ 4:30ರ ಸಮಯದಲ್ಲಿ ಕಾಂಗ್ರೆಸ್ ಪಕ್ಷ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಹಿಮಾಚಲ ಪ್ರದೇಶ ಮತದಾರರಿಗೆ ನಾನು ಧನ್ಯವಾದ ಹೇಳಲು ಭಯಸುತ್ತೇನೆ ಎಂದಿದ್ದಾರೆ.
ಮಾತು ಮುಂದುವರಿಸಿದ ಅವರು, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿಗೆ ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಕಾರಣ. ಅವರ ಪರಿಶ್ರಮದಿಂದ ಇಂದು ಈ ಫಲಿತಾಂಶ ಬಂದಿದೆ. ಹಿಮಾಚಲ ಪ್ರದೇಶ ಚುನಾವಣೆಗೆ ಶ್ರಮಿಸಿದ ಪ್ರಿಯಾಂಕ ಗಾಂಧಿ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

ಇನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ನಡೆಸಿದ ಭಾರತ್ ಜೋಡೋ ಯಾತ್ರೆ ಕೂಡ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಗೆಲುವಿಗೆ ಸಹಕಾರಿಯಾಗಿದೆ. ಸೋನಿಯಾ ಗಾಂಧಿ ಅವರ ಹಾರೈಕೆ ನಮ್ಮ ಮೇಲಿದೆ ಇದೆ ಎಂದು ಪಕ್ಷದ ಮುಖಂಡರಿಗೆ ಧನ್ಯವಾದ ತಿಳಿಸಿ ಖುಷಿ ಹಂಚಿಕೊಂಡರು.
ಗುಜರಾತ್ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಾಮಾನ್ಯ. ನಾವು ನಮ್ಮ ಸೈದ್ಧಾಂತಿ ಹೋರಾಟವನ್ನು ಮುಂದುವರಿಸುತ್ತೇವೆ. ಗುಜರಾತ್ ಚುನಾವಣೆಯಲ್ಲಿ ನಡೆದ ಲೋಪದೋಷಗಳನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಗುಜರಾತ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಶುಕ್ರವಾರ 4: 30ಕ್ಕೆ ಬಿಜೆಪಿ 157 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಕ್ಷ 5 ಕ್ಷೇತ್ರದಲ್ಲಿ, ಹಾಗೂ ಇತರರು 4 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಕ್ಷ 0 ಕ್ಷೇತ್ರದಲ್ಲಿ, ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.












Click it and Unblock the Notifications