Akka Pade: ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು, ಆಗಸ್ಟ್ 13: ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15 ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, ಬಾಲ್ಯ ವಿವಾಹಗಳ ಸಂಖ್ಯೆ ಹೆಬ್ಬಾಗುತ್ತಿರುವುದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಲ್ಯವಿವಾಹಗಳನ್ನು ತಡೆಗಟ್ಟಲು ಸರ್ಕಾರ ಈಗಾಗಲೇ ಕಾಯ್ದೆಯನ್ನು ಜಾರಿಗೆ ತಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ (ಸಿಡಬ್ಲ್ಯುಸಿ) ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿ 4 ಕೇಂದ್ರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಸಿಡಬ್ಲ್ಯುಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು. ಬಾಲ್ಯ ವಿವಾಹ ತಡೆಗಟ್ಟುವ ಸಲುವಾಗಿ ಸೋಷಿಯಲ್ ಮೀಡಿಯಾಗಳಿಗೆ ಕಡಿವಾಣ ಹಾಕಬೇಕು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಗೃಹ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಅಂಗನವಾಡಿ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ
ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪಾರದರ್ಶಕವಾಗಿ ಆಯ್ಕೆ ನಡೆದಿದೆ. ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು.
ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ 52 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಈ ಪೈಕಿ 51 ಮಂದಿಗೆ ಆದೇಶ ಪತ್ರ ನೀಡಲಾಗಿದೆ. ಓರ್ವ ಅಭ್ಯರ್ಥಿ ವಿದ್ಯಾ ಗೋವಿಂದ್ ಪೂಜಾರಿ ಅವರ ಆಯ್ಕೆಗೆ ಆಕ್ಷೇಪಣೆ ಬಂದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ತಡೆಹಿಡಿಯಲಾಗಿತ್ತು. ಇದೀಗ ಅವರಿಗೂ ಆದೇಶ ಪತ್ರ ನೀಡಲಾಗಿದೆ ಎಂದು ಉತ್ತರಿಸಿದರು. ಎಲ್ಲರಿಗೂ ನ್ಯಾಯ ಒದಗಿಸಿಕೊಡುವುದೇ ನಮ್ಮ ಸರ್ಕಾರದ ಉದ್ದೇಶ, ಶಿಕ್ಷಕರ ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ನಡೆದಿಲ್ಲ. ಯಾವುದೇ ಒತ್ತಡಕ್ಕೂ ಮಣಿದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.












Click it and Unblock the Notifications