ಬಿಜೆಪಿಗೆ ಹಾರುತ್ತಿರುವ ಆಳಂದದ ಕೆಜೆಪಿ ಶಾಸಕ
ಗುಲ್ಬರ್ಗ, ಅ.20 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾದ ಆಳಂದ ಕ್ಷೇತ್ರದ ಕೆಜೆಪಿ ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಬಿಜೆಪಿ ನಾಯಕರೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಪಕ್ಷ ಸೇರ್ಪಡೆಯಾಗುವುದಾಗಿ ಅವರು ಹೇಳಿದ್ದಾರೆ.
ಗುಲ್ಬರ್ಗದಲ್ಲಿ ಸೋಮವಾರ ಮಾತನಾಡಿದ ಬಿ.ಆರ್.ಪಾಟೀಲ್, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರುತ್ತಿರುವುದಾಗಿ ಹೇಳಿದರು. ಪಕ್ಷ ಸೇರ್ಪಡೆ ಕುರಿತು ರಾಜ್ಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಅಧಿಕೃತವಾಗಿ ಸೇರ್ಪಡೆಗೊಳ್ಳುತ್ತೇನೆ ಎಂದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಆಳಂದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ.ಆರ್.ಪಾಟೀಲ್ ಗೆಲುವು ಸಾಧಿಸಿದ್ದರು. ನಂತರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿ, ಕಾಂಗ್ರೆಸ್ ಸೇರುವ ಸೂಚನೆ ನೀಡಿದ್ದರು. [ಯಡಿಯೂರಪ್ಪಗೆ ಬಂಡಾಯಗಾರರ ಖಡಕ್ ಪ್ರಶ್ನಾವಳಿ]
ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಪಾಟೀಲ್ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ. ಕಾರ್ಯಕರ್ತರು ಸಹ ಬಿಜೆಪಿ ಸೇರುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ಪಾಟೀಲ್ ತಿಳಿಸಿದ್ದಾರೆ. [ಬಿಜೆಪಿ-ಕೆಜೆಪಿ ವಿಲೀನಕ್ಕೆ ಸ್ಪೀಕರ್ ಅಂಕಿತ]
ಕೆಜೆಪಿಯಲ್ಲಿದ್ದ ಪಾಟೀಲ್ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳಿದರೂ ಕೆಜೆಪಿ ಶಾಸಕರಾಗಿ ಗುರುತಿಸಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಪರಮಾಪ್ತರಾಗಿದ್ದ ಅವರು, ಕಾಂಗ್ರೆಸ್ ಸೇರಬಹುದು ಎಂದು ನಿರೀಕ್ಷಿಸಲಾಗಿತ್ತು.












Click it and Unblock the Notifications