ಕರ್ನಾಟಕ; ರಾಜ್ಯಸಭೆ ಚುನಾವಣೆ, ನಾಲ್ವರು ಅವಿರೋಧ ಆಯ್ಕೆ
ಬೆಂಗಳೂರು, ಜೂನ್ 12 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ವರು ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ 2ನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
Recommended Video
ಶುಕ್ರವಾರ ರಾಜ್ಯಸಭೆ ಚುನಾವಣೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಕಣದಲ್ಲಿ ನಾಲ್ವರು ಅಭ್ಯರ್ಥಿಗಳು ಮಾತ್ರ ಉಳಿದ ಕಾರಣ ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಜೂನ್ 19ರಂದು ರಾಜ್ಯಸಭಾ ಸದಸ್ಯರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗಿತ್ತು.
ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ. ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ನಿಂದ ಎಚ್. ಡಿ. ದೇವೇಗೌಡ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಎಚ್. ಡಿ. ದೇವೇಗೌಡ 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಕರ್ನಾಟಕ ವಿಧಾನಸಭೆ ಮುಖ್ಯ ಕಾರ್ಯದರ್ಶಿ ವಿಶಾಲಾಕ್ಷಿ ರಾಜ್ಯಸಭೆ ಚುನಾವಣೆಯ ಚುನಾವಣಾಧಿಕಾರಿಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಅವರು ಪ್ರಮಾಣ ಪತ್ರವನ್ನು ನೀಡಲಿದ್ದಾರೆ.

ನಾಮಪತ್ರ ತಿರಸ್ಕಾರ
ರಾಜ್ಯಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಿದ್ದರು. ಆದರೆ, ಶಾಸಕರು ಸೂಚಕರಾಗಿ ಸಹಿ ಹಾಕದ ಕಾರಣ ನಾಮಪತ್ರವನ್ನು ತಿರಸ್ಕಾರ ಮಾಡಲಾಯಿತು. ಆದ್ದರಿಂದ, ಕಣದಲ್ಲಿ ನಾಲ್ವರು ಮಾತ್ರ ಉಳಿದರು.

ಎಚ್. ಡಿ. ದೇವೇಗೌಡ
87 ವರ್ಷದ ಎಚ್. ಡಿ. ದೇವೇಗೌಡರು 2ನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಲ್ಲಿ ಸೋಲು ಕಂಡಿದ್ದ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಪುನಃ ಸಂಸತ್ ಪ್ರವೇಶ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ
77 ವರ್ಷದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಪುನಃ ಸಂಸತ್ ಪ್ರವೇಶ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಗುಲ್ಬರ್ಗ ಕ್ಷೇತ್ರದಲ್ಲಿ ಅವರು ಸೋಲು ಕಂಡಿದ್ದರು. ಇದೇ ಮೊದಲ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಈರಣ್ಣ ಕಡಾಡಿ
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 54 ವರ್ಷದ ಈರಣ್ಣ ಕಡಾಡಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶ ಮಾಡಿದ್ದಾರೆ. ಬಿಜೆಪಿಯ ಮೊದಲ ಅಭ್ಯರ್ಥಿಯಾಗಿದ್ದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಮಸಾಲಿ ಲಿಂಗಾಯಿತ ಸಮುದಾಯಕ್ಕೆ ಸೇರಿದ ಈರಣ್ಣ ಕಡಾಡಿ ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿದ್ದರು. 32 ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದಾರೆ.

ಅಶೋಕ ಗಸ್ತಿ
55 ವರ್ಷದ ಅಶೋಕ್ ಗಸ್ತಿ ರಾಯಚೂರು ಜಿಲ್ಲೆಯವರು. ಇದೇ ಮೊದಲ ಬಾರಿಗೆ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಎ, ಎಲ್ಎಲ್ಬಿ ವ್ಯಾಸಂಗ ಮಾಡಿರುವ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು.












Click it and Unblock the Notifications