ವಿಧಾನ ಪರಿಷತ್ ಚುನಾವಣೆ: ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆ
ಬೆಂಗಳೂರು, ಜೂ. 18: ವಿಧಾನಸಭೆಯಿಂದ ವಿಧಾನ ಪರಿಷತ್ನ 7 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. ವಿಧಾನ ಪರಿಷತ್ನ 7 ಸ್ಥಾನಗಳಿಗೆ ಇದೇ ಜೂನ್ 29 ರಂದು ಚುನಾವಣೆ ನಡೆಯಬೇಕಾಗಿತ್ತು. ಆದರೆ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಅವಿರೋಧವಾಗಲಿದೆ.
Recommended Video
ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇವತ್ತು (ಜೂ.18) ಕೊನೆಯ ದಿನ. ಕೊನೆಯ ದಿನ ಬಿಜೆಪಿಯಿಂದ 4, ಕಾಂಗ್ರೆಸ್ ಪಕ್ಷದಿಂದ 2 ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.

ರಾಜರಾಜೇಶ್ವರಿನಗರ ಹಾಗೂ ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಬಾಕಿಯಿದೆ. ಹೀಗಾಗಿ ವಿಧಾನಸಭೆಯಲ್ಲಿ 224 ಸದಸ್ಯರಿದ್ದಾರೆ. ಬಿಜೆಪಿ 116, ಕಾಂಗ್ರೆಸ್ 68 ಹಾಗೂ ಜೆಡಿಎಸ್ 34 ಸದಸ್ಯರನ್ನು ಹೊಂದಿವೆ. ಸಧ್ಯ ವಿಧಾನಸಭೆಯ ಬಲಾಬಲದಂತೆ ಪರಿಷತ್ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿ ಗೆಲ್ಲಲು 33 ಶಾಸಕರ ಬೆಂಬಲ ಅಗತ್ಯವಿತ್ತು. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ತಲಾ 4, 2 ಹಾಗೂ 1 ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸಾಧ್ಯವಾಗುತ್ತಿತ್ತು. ಅಷ್ಟೇ ಅಭ್ಯರ್ಥಿಗಳು ಇದೀಗ ನಾಮಪತ್ರ ಸಲ್ಲಿಸಿದ್ದಾರೆ. ಅದರಿಂದಾಗಿ ಚುನಾವಣೆ ನಡೆಯದೇ ಅವಿರೋಧ ಆಯ್ಕೆಯಾಗಲಿದೆ.

ಬಿಜೆಪಿಯಿಂದ ಮಾಜಿ ಸಚಿವರಾದ ಎಂಟಿಬಿ ನಾಗರಾಜ್, ಆರ್. ಶಂಕರ್, ಮಾಜಿ ಶಾಸಕ ಸುನಿಲ್ ವಲ್ಯಾಪುರೆ ಹಾಗೂ ಪಕ್ಷದ ಮುಖಂಡ ಪ್ರತಾಪ್ ಸಿಂಹ ನಾಯಕ್ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಿ.ಕೆ. ಹರಿಪ್ರಸಾದ್ ಹಾಗೂ ನಸೀರ್ ಅಹಮ್ಮದ್ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ನಿಂದ ಇಂಚರ ಗೋವಿಂದರಾಜು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ 7 ಸ್ಥಾನಗಳಿಗೆ 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ. ಹೀಗಾಗಿ ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.












Click it and Unblock the Notifications