ಎಲ್ಲಾ ಹಾಲಿ ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಖಚಿತ!
ಬೆಂಗಳೂರು, ಮಾರ್ಚ್ 27 : ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ಕಾಂಗ್ರೆಸ್ ಹೈಕಮಾಂಡ್ಗೆ ಶಿಫಾರಸು ಮಾಡಿದೆ. ಏಪ್ರಿಲ್ 9 ಮತ್ತು 10ರಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂತಾದ ನಾಯಕರ ನೇತೃತ್ವದಲ್ಲಿ ಸಭೆ ನಡೆದಿದೆ.
ಜೆಡಿಎಸ್, ಬಿಜೆಪಿ ತೊರೆದು ಬಂದಿರುವ ಶಾಸಕರು, ಕಾಂಗ್ರೆಸ್ ಸೇರಿರುವ ಪಕ್ಷೇತರ ಶಾಸಕರಿಗೂ ಟಿಕೆಟ್ ನೀಡುವಂತೆ ಶಿಫಾರಸು ಮಾಡಲಾಗಿದೆ. 2013ರಲ್ಲಿ ಆಯ್ಕೆಯಾದ ಎಲ್ಲಾ ಶಾಸಕರಿಗೂ ಟಿಕೆಟ್ ನೀಡಬೇಕು ಎಂದು ಸಮಿತಿ ತೀರ್ಮಾನ ಕೈಗೊಂಡಿದೆ.

ಬಂಡಾಯ ಶಾಸಕರ ಕಥೆ? : ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ ಜಮೀರ್ ಅಹಮದ್ ಖಾನ್, ಎನ್.ಚೆಲುವರಾಯಸ್ವಾಮಿ, ಇಕ್ಬಾಲ್ ಅನ್ಸಾರಿ, ಭೀಮಾ ನಾಯಕ್ ಮತ್ತು ರಮೇಶ್ ಬಂಡಿಸಿದ್ದೇಗೌಡ ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಟಿಕೆಟ್ ನೀಡಲು ನಿರ್ಣಯ ಕೈಗೊಳ್ಳಲಾಗಿದೆ.
ಅಖಂಡ ಶ್ರೀನಿವಾಸಮೂರ್ತಿ ಅವರ ಹೆಸರನ್ನು ಶಿಫಾರಸು ಮಾಡಿಲ್ಲ. ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ಟಿಕೆಟ್ ನೀಡಲು ಸಮಿತಿ ತೀರ್ಮಾನಿಸಿದೆ. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತ ಅಭ್ಯರ್ಥಿಗಳಿಗೂ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.
ಅಭ್ಯರ್ಥಿಗಳು ಅಂತಿಮ : 'ಏ.9 ಮತ್ತು 10ರಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ. ಏಪ್ರಿಲ್ 15ರೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ' ಎಂದು ಡಾ.ಜಿ.ಪರಮೇಶ್ವರ ಹೇಳಿದ್ದಾರೆ.












Click it and Unblock the Notifications