SSLC ಪರೀಕ್ಷೆ ಬರೆಯುವ ಪ್ರತಿಯೊಬ್ಬ ವಿದ್ಯಾರ್ಥಿ ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!
ಬೆಂಗಳೂರು, ಜು. 18: ಹಲವು ಸವಾಲುಗಳ ಮಧ್ಯೆ ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ರಾಜ್ಯ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲು ಎಲ್ಲ ತಯಾರಿ ಮಾಡಿಕೊಂಡಿದ್ದಾಗಿ ತಿಳಿಸಿದೆ. ನಾಳೆ ನಡೆಯುವ ಪರೀಕ್ಷೆಗೆ ಪೂರ್ವಭಾವಿಯಾಗಿ ಶನಿವಾರ ಅಣಕು ಪರೀಕ್ಷೆಯನ್ನೂ ಕೂಡ ಈಗಾಗಲೇ ಮಾಡಲಾಗಿದೆ. ಆದರೂ ಕೂಡ ಕೊರೊನಾ ವೈರಸ್ ಆತಂಕ ವಿದ್ಯಾರ್ಥಿಗಳು ಹಾಗೂ ಸರ್ಕಾರವನ್ನು ಬಿಟ್ಟಿಲ್ಲ. ಹೀಗಾಗಿ ನಾಳೆಯ ಪರೀಕ್ಷೆ ಹೇಗೆ ನಡೆಯಲಿದೆ? ಅದಕ್ಕೆ ಸರ್ಕಾರ ಮಾಡಿಕೊಂಡಿರುವ ಸಿದ್ಧತೆಗಳು ಏನು? ಒಂದೊಮ್ಮೆ ಸಮಸ್ಯೆ ಎದುರಾದಲ್ಲಿ ವಿದ್ಯಾರ್ಥಿಗಳು ಏನು ಮಾಡಬೇಕು? ಈ ಎಲ್ಲ ಪ್ರಶ್ನೆಗಳಿಗೆ ಸಂಪೂರ್ಣ ಮಾಹಿತಿ ಮುಂದಿದೆ.
"ಎಸ್ಎಸ್ಎಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಈಗಾಗಲೇ ಮಕ್ಕಳು ತಮ್ಮ ಶಾಲೆಗಳಿಂದ ಹಾಲ್ಟಿಕೆಟ್ ಪಡೆದುಕೊಂಡಿದ್ದು, ಪರೀಕ್ಷೆಗೆ ಹಾಜರಾಗಲು ಉತ್ಸುಕರಾಗಿದ್ದಾರೆ" ಎಂದು ಶಿಕ್ಷಣ ಇಲಾಖೆ ಮಾಹಿತಿ ಕೊಟ್ಟಿದೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಏನೇನು ಸಿದ್ಧತೆ ಆಗಿದೆ? ಸಚಿವ ಸುರೇಶ್ ಕುಮಾರ್ ಮಾಹಿತಿ!
ಸೋಮವಾರ (ಜು.19) ಆರಂಭವಾಗುವ 2020-21ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಸಿದ್ಧತೆಗಳನ್ನು ಸ್ವತಃ ಪರಿಶೀಲನೆ ಮಾಡಿದ್ದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ತಿ ಳಿಸಿದ್ದಾರೆ. ಪರೀಕ್ಷಾ ಸಿದ್ಧತೆ ಪರಿಶೀಲಿಸಲು ಬೆಂಗಳೂರು ನಗರದ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂಬ ಮಾಹಿತಿಯಿದೆ.
ಹಾಲ್ ಟಿಕೆಟ್ ಸಿಕ್ಕಿಲ್ಲವಾ?
"ರಾಜ್ಯದ 14,929 ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ನೊಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಪ್ರವೇಶಪತ್ರಗಳನ್ನು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರು ಮಂಡಳಿಯ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಂಡಿದ್ದಾರೆ" ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
"ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆದಿದ್ದಾರೆ. ಉಳಿದ ಮಕ್ಕಳು ಪ್ರವೇಶ ಪತ್ರ ಪಡೆದು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಸೋಮವಾರ ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಗೆ ನೊಂದಾಯಿಸಿದ ಯಾವುದೇ ವಿದ್ಯಾರ್ಥಿ ಪ್ರವೇಶ ಪತ್ರ ಪಡೆಯಲು ಸಾಧ್ಯವಾಗದಿದ್ದಲ್ಲಿ ಸಂಬಂಧಿಸಿದ ಬಿಇಒ ಅಥವಾ ಡಿಡಿಪಿಐಗಳನ್ನು ಸಂಪರ್ಕಿಸಿ ಪಡೆಯಬಹುದು. ಅದರ ಸಮನ್ವಯಕ್ಕಾಗಿ ಈಗಾಗಲೇ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ" ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಪರೀಕ್ಷಾ ಕೇಂದ್ರಗಳಿಗೆ ಭೇಟಿ
ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ, ಎಂಇಎ ಪ್ರೌಢಶಾಲೆ, ಸದಾಶಿವನಗರದ ಪೂರ್ಣಪ್ರಜ್ಞಾ ವಿದ್ಯಾಸಂಸ್ಥೆ, ದಾಸರಹಳ್ಳಿ, ಪೀಣ್ಯದ ಸರ್ಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಕೊನೆ ಹಂತದ ಸಿದ್ಧತೆಗಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೋಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ - 2021 : ಪರೀಕ್ಷೆಗೆ ಹೋಗುವ ಮುನ್ನ ಈ ವಿಷಯ ಗೊತ್ತಿರಲಿ !
ರಾಜ್ಯಾದ್ಯಂತ ಸ್ಥಾಪಿಸಲಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಣ ಇಲಾಖೆ ಸಿಬ್ಬಂದಿ, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸ್ವಯಂ ಸೇವಕರು, ಸಹಾಯಕರು ಸೇರಿದಂತೆ ಪರೀಕ್ಷೆ ನಡೆಸಲು ನಿಯೋಜನೆ ಮಾಡಿರುವ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಜೊತೆಗೆ ರಾಜ್ಯ ಆರೋಗ್ಯ ಇಲಾಖೆ ಹಾಗೂ ಕೋವಿಡ್ ಕಾರ್ಯಪಡೆ ಕೊಟ್ಟಿರುವ ಮಾರ್ಗಸೂಚಿಯಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. "ಪರೀಕ್ಷೆ ನಡೆಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು" ಎಂದು ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಪರೀಕ್ಷಾ ಕೇಂದ್ರ, ಆವರಣ ಸ್ಯಾನಿಟೈಸ್
ಸೋಮವಾರ (19.07.2021) ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಇಂದು ಎಲ್ಲ ಪರೀಕ್ಷಾ ಕೇಂದ್ರಗಳನ್ನು ಮತ್ತು ಪರೀಕ್ಷೆ ನಡೆಯುವ ಶಾಲೆಗಳ ಆವರಣವನ್ನು ಸ್ಯಾನಿಟೈಜ್ ಮಾಡಲಾಗುತ್ತಿದೆ. ನಾಳೆ ಪರೀಕ್ಷೆ ಮುಗಿದ ಬಳಿಕವೂ ಸ್ಯಾನಿಟೈಜ್ ಮಾಡಲಾಗುತ್ತದೆ. ನಾಳೆ ಜುಲೈ 19ರಂದು ಕೋರ್ ವಿಷಯಗಳಿಗೆ ಮತ್ತು 22ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭಗೊಳ್ಳಲಿವೆ.
ಈಗಾಗಲೇ ಕೋವಿಡ್ ಲಸಿಕೆ ಹಾಕಿಸಿಕೊಂಡಿರುವ 1,19,469 ಸಿಬ್ಬಂದಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಲಸಿಕೆ ಪಡೆದವರಷ್ಟೇ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಒಂದು ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿರಬೇಕು. ಒಂದು ಡೆಸ್ಕ್ನಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಪೇಪರ್ ಬರೆಯಲಿದ್ದಾರೆ. ಕಳೆದ ವರ್ಷದ ಅನುಭವದ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ದ್ವಿಗುಣಗೊಳಿಸಲಾಗಿದೆ. ಪರೀಕ್ಷಾ ಕೊಠಡಿಗಳನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಕನಿಷ್ಠ 2 ವಿಶೇಷ ಕೊಠಡಿಗಳು
ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಅಥವಾ ಈ ಲಕ್ಷಣಗಳಿರುವ ವಿದ್ಯಾರ್ಥಿಗಳಿಗಾಗಿ ಪ್ರತಿ ಕೇಂದ್ರದಲ್ಲಿಯೂ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಲಾಗಿದೆ. ಸಿಬ್ಬಂದಿ ಮತ್ತು ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದೊಡನೆ ಮೊದಲು ನೇರವಾಗಿ ಆರೋಗ್ಯ ತಪಾಸಣಾ ಕೌಂಟರ್ ಪ್ರವೇಶಿಸಬೇಕು. ಅಲ್ಲಿ ಪರೀಕ್ಷೆ ಮಾಡಲಾಗುತ್ತದೆ. ಈ ಆರೋಗ್ಯ ಕೌಂಟರ್ಗಳು ನಾಳೆ ಬೆಳಗ್ಗೆ 8.30ಕ್ಕೆ ಅರಂಭವಾಗಿ ಪರೀಕ್ಷೆ ಅವಧಿ ಮುಗಿದು ಇಡೀ ಪ್ರಕ್ರಿಯೆ ಮುಗಿಯುವ ತನಕ ತೆರದಿರಲಿವೆ.
ಎಸ್ಎಸ್ಎಲ್ ಸಿ ಪರೀಕ್ಷೆ2021: ಸುರಕ್ಷತಾ ಮಾರ್ಗಸೂಚಿ ಪ್ರಕಟ
ಥರ್ಮಲ್ ಸ್ಯಾನರ್, ಪಲ್ಸ್ ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳಿರಲಿವೆ. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ನೀಡಲಾಗುತ್ತದೆ.
ತುರ್ತು ಚಿಕಿತ್ಸೆ ಲಭ್ಯ!
"ಆರೋಗ್ಯ ಇಲಾಖೆಯೊಂದಿಗೆ ಒತೆಯಾಗಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನವನ್ನು ಮೀಸಲಿಡಲಾಗುತ್ತಿದೆ. ಪರೀಕ್ಷಾ ಸಿಬ್ಬಂದಿಯೂ ಯಾವುದೇ ಸಂದರ್ಭದಲ್ಲೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲೇಬೇಕು. ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್ ಬಳಸಬೇಕು. ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆ ನಡೆಯುವ ದಿನ ರಾಜ್ಯದ ಗಡಿ ಪ್ರವೇಶಕ್ಕೆ ಆಯಾ ಜಿಲ್ಲಾಧಿಕಾರಿಗಳು ಗಡಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಗಮನಕೊಡಲು ಸೂಚಿಸಲಾಗಿದೆ" ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನಾ ಪಾಸಿಟಿವ್ ಇದ್ದಲ್ಲಿ ಏನು ಮಾಡಬೇಕು?
ಪರೀಕ್ಷೆ ಬರೆಯುವ ವಿದ್ಯಾರ್ಥಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ, ಅವರುಬ ಪರೀಕ್ಷೆ ಬರೆಯಲು ತಾಲೂಕಿಗೊಂದು 'ಕೋವಿಡ್ ಕೇರ್ ಕೇಂದ್ರ'ಗಳನ್ನು ಸ್ಥಾಪಿಸಲಾಗಿದೆ. ಆ ಕೇಂದ್ರದಲ್ಲಿ ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಯ ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಅಂತಹ ವಿದ್ಯಾರ್ಥಿ ಐಸೋಲೇಷನ್ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಆರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಕೇರ್ ಪರೀಕ್ಷಾ ಕೇಂದ್ರದಲ್ಲಿ ಒಂದು ಅಂಬುಲೆನ್ಸ್ ವಾಹನ ಕಾಯ್ದಿರಿಸಲು ಇಲಾಖೆ ಕ್ರಮಕೈಗೊಂಡಿದೆ.
SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ
Recommended Video
ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಸೀಟ್ಗಳ ಕಳುಹಿಸುವ ಕುರಿತು ಈಗಾಗಲೇ ನಿಗದಿತ ಸೂಚನೆಗಳನ್ನು ನೀಡಲಾಗಿದೆ. ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಶಿಕ್ಷಣ ಇಲಾಖೆ ಬಹುತೇಕ ಸಿದ್ಧತೆಗಳನ್ನು ಮಾಡಿಕೊಂಡಿದೆ.
"ಯಾವುದೇ ಪ್ರಕರಣಗಳಿಗೆ ಅವಕಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಆಯಾ ಜಿಲ್ಲಾಧಿಕಾರಿಗಳು ಪರೀಕ್ಷಾ ಕೇಂದ್ರದ ಸುತ್ತಮುತ್ತ ಜೆರಾಕ್ಸ್ ಸೆಂಟರ್ ಗಳನ್ನು ಮುಚ್ಚಿಸಲು ಮತ್ತು ಸೆಕ್ಷನ್ 144 ಜಾರಿಗೊಳಿಸಲು ಕ್ರಮ ವಹಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ರವಾನೆ ಸಮಯದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸರು ಪರೀಕ್ಷಾ ಕೇಂದ್ರದ ಬಳಿ ಸಂಚಾರ ದಟ್ಟಣೆ ಕ್ರಮ ವಹಿಸುವರು" ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿವರಿಸಿದ್ದಾರೆ.