ಕರ್ನಾಟಕದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ; ಆಕಾಂಕ್ಷಿಗಳಿಗೆ ಸಿಹಿಸುದ್ದಿ
ಬೆಂಗಳೂರು, ಏಪ್ರಿಲ್ 26; ಕರ್ನಾಟಕದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಬಗ್ಗೆ ಜ್ಞಾಪನ ಪತ್ರವನ್ನು ಹೊರಡಿಸಲಾಗಿದೆ. ಈಗ ಆಯ್ಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಈ ಮೂಲಕ ಸೂಚನೆ ನೀಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 8/3/2023ರಂದು 1:1 ಅನುಪಾತದ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. 26 ಜಿಲ್ಲೆಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ಕಾರ್ಯಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ಕೊಡಲಾಗಿದೆ.

ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಂತೆ ಸರ್ಕಾರವು ದಿನಾಂಕ 1/2/2023ರ ಸುತ್ತೋಲೆಯ ಅನ್ವಯಿಸುವ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮೂಲ ದಾಖಲೆ ಪರಿಶೀಲನೆ ನಡೆಯಲಿದೆ.
ಯಾವ-ಯಾವ ದಾಖಲೆಗಳು ಬೇಕು?; 1:1 ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಸಹ ಪರಿಶೀಲನೆ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಅಭ್ಯರ್ಥಿಗಳು ವೈದ್ಯಕೀಯ ಪ್ರಮಾಣ ಪತ್ರ (Health and Fitness certificate), ಪೊಲೀಸ್ ಪರಿಶೀಲನಾ ಪ್ರಮಾಣಪತ್ರ (Police verification certificate), ಸಿಂಧುತ್ವ ಪ್ರಮಾಣ ಪತ್ರ, ಗ್ರಾಮೀಣ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಮಾಜಿ ಸೈನಿಕರ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ, 9. ಸಂಬಂಧಿಸಿದ ಎಲ್ಲಾ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು, ಸೇವಾನಿರತ ಶಿಕ್ಷಕರು ಸಲ್ಲಿಸಿರುವ ನಿರಾಪೇಕ್ಷಣ ಪ್ರಮಾಣ ಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಜ್ಞಾಪನಾ ಪತ್ರದಲ್ಲಿ ಮೇಲ್ಕಂಡ ಪ್ರಮಾಣಪತ್ರಗಳ ನೈಜತ್ವವನ್ನು ಪರಿಶೀಲನೆಗೊಳಪಡಿಸುವ ಸಂಬಂಧ ಸಕ್ಷಮ ಪ್ರಾಧಿಕಾರಿಗಳಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಕಾಲಬದ್ದ ಮಿತಿಯಲ್ಲಿ ಕಳುಹಿಸಿ ಕ್ರಮವಹಿಸುವಂತೆ ತಿಳಸಲಾಗಿದೆ.
ಹೈಕೋರ್ಟ್ ಆದೇಶವೇನು?; 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಅಕ್ಷತಾ ಚೌಗಲ ಸೇರಿದಂತೆ ಮಹಿಳಾ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಪತಿಯ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಪರಿಗಣಿಸಿದ್ದ ಶಿಕ್ಷಣ ಇಲಾಖೆಯ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸುಮಾರು 80ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಕೆ ಮಾಡಿದ್ದರು. ಅರ್ಜಿಗಳನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ನೇಮಕವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಅನೂರ್ಜಿತಗೊಳಿಸಿರುವ ನ್ಯಾಯಾಲಯ, ಅಭ್ಯರ್ಥಿಗಳ ತಂದೆಯ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಪರಿಗಣಿಸಿ ಹೊಸ ಪಟ್ಟಿ ಸಿದ್ಧಪಡಿಸುವಂತೆ ಸರ್ಕಾರಕ್ಕೆ ಅದೇಶ ನೀಡಿತ್ತು.
ಹೈಕೋರ್ಟ್ ಮೊರೆ ಹೋಗಿದ್ದ ಅಭ್ಯರ್ಥಿಗಳು ಅರ್ಜಿದಾರರು 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವವರ ಅಭ್ಯರ್ಥಿಗಳ ಹೆಸರುಗಳಿವೆ. ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿರುವುದರಿಂದ ಅರ್ಜಿದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಹೇಳಿದ್ದಾರೆ ಎಂದು ಉಲ್ಲೇಖಿಸಿದ್ದರು.












Click it and Unblock the Notifications