ಪರಿಷತ್ ಚುನಾವಣೆ : ಮಂಗಳವಾರ ಮತ ಎಣಿಕೆ
ಬೆಂಗಳೂರು, ಜೂನ್ 11 : ವಿಧಾನಪರಿಷತ್ತಿನ 6 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ಯಾವ ಪಕ್ಷಗಳು ಗೆದ್ದು ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಳ್ಳಲಿವೆ ಎಂದು ಕಾದು ನೋಡಬೇಕು.
ಆಗ್ನೇಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ನೈಋತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ಈಶಾನ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ತಿಗೆ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 8ರಂದು ಚುನಾವಣೆ ನಡೆದಿತ್ತು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಎಣಿಕೆ ಬೆಂಗಳೂರಿನಲ್ಲಿ, ಈಶಾನ್ಯ ಪದವೀಧರರ ಕ್ಷೇತ್ರದ ಎಣಿಕೆ ಕಲಬುರಗಿಯಲ್ಲಿ, ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಮೈಸೂರಿನಲ್ಲಿ ನಡೆಯಲಿದೆ.

ಆಯಾ ಪ್ರಾದೇಶಿಕ ಕೇಂದ್ರಗಳಲ್ಲಿ ಮತ ಎಣಿಕೆ ನಡೆಸಿ, ಮಂಗಳವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆಯನೂರು ಮಂಜುನಾಥ್, ವಾಟಾಳ್ ನಾಗರಾಜ್ ಸೇರಿದಂತೆ ಹಲವು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 91.59, ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 77.56, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 68.62, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 84ರಷ್ಟು ಮತದಾನ ನಡೆದಿತ್ತು.
ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಜೆಡಿಎಸ್ನ ರಮೇಶ್ ಬಾಬು, ಮರಿತಿಬ್ಬೇಗೌಡ, ಬಿಜೆಪಿಯ ಗಣೇಶ್ ಕಾರ್ಣಿಕ್, ಬಿ.ರಾಮಚಂದ್ರ ಗೌಡ, ಅಮರನಾಥ್ ಪಾಟೀಲ್ ಸೇರಿ 6 ಸದಸ್ಯರ ಅಧಿಕಾರಾವಧಿ ಜೂನ್ 21ಕ್ಕೆ ಮುಕ್ತಾಯವಾಗುತ್ತಿದೆ. ಈ ಸದಸ್ಯರ ಸ್ಥಾನವನ್ನು ಭರ್ತಿ ಮಾಡಲು ಚುನಾವಣೆ ನಡೆದಿತ್ತು.












Click it and Unblock the Notifications