ಡಿ.ಕೆ.ಶಿವಕುಮಾರ್ ಅವರನ್ನು ಬಲಿ ಹಾಕಲು 3 ಡಿಸಿಎಂಗಳ ಯೋಜನೆ: ಹೊಸ ಬಾಂಬ್ ಸಿಡಿಸಿದ ಬಿಜೆಪಿ ನಾಯಕ
ಬೆಂಗಳೂರು, ಜನವರಿ 08: ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗುಬಡಿಯಲು, ಅವರ ಸೊಕ್ಕು ಮುರಿಯಲು ಕಾಂಗ್ರೆಸ್ನ ಮಹಾನ್ ನಾಯಕರೆಲ್ಲರೂ ಸೇರಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಬಲಿ ಹಾಕಲು 3 ಡಿಸಿಎಂಗಳ ಯೋಜನೆ ಮುಂದಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಸರಕಾರವು ಅಭಿವೃದ್ಧಿ ಕೆಲಸಗಳನ್ನೇ ಮಾಡದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಆ ಭಗವಂತ ಇವರನ್ನು ಕ್ಷಮಿಸುವುದಿಲ್ಲ. ರಾಜ್ಯದ ಜನರು ನಿಮ್ಮ ಪ್ರತಿಯೊಂದು ನಡವಳಿಕೆಯನ್ನೂ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವು ವಿನಾಶಕಾಲೇ ವಿಪರೀತ ಬುದ್ಧಿ ಎಂಬ ಮಾದರಿಯಲ್ಲಿ ವರ್ತಿಸುತ್ತಿದೆ. ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆಯ ಶುಭ ಘಳಿಗೆಯಲ್ಲಿ ನಾವೆಲ್ಲರೂ ಇದ್ದೇವೆ. ಇಡೀ ದೇಶದಲ್ಲಿ ನಾವೆಲ್ಲ ಒಂದು ಎಂಬ ಭಾವನೆ ಮೂಡಿದೆ. ಇಂಥ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಬಿಜೆಪಿ ಸರಕಾರ ಇದ್ದಾಗ ಅಲ್ಪಸಂಖ್ಯಾತರಿಗೆ ಉತ್ತಮ ಯೋಜನೆಗಳನ್ನು ಕೊಟ್ಟಿದ್ದಲ್ಲದೆ, ಸಾಕಷ್ಟು ಅನುದಾನವನ್ನೂ ನೀಡಿದೆ. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲೂ ತ್ರಿವಳಿ ತಲಾಖ್ ಪದ್ಧತಿಯನ್ನು ರದ್ದು ಮಾಡಿ ಅಲ್ಪಸಂಖ್ಯಾತ ಮಹಿಳೆಯರಿಗೂ ಗೌರವ ಕೊಡಲಾಗುತ್ತಿದೆ ಎಂದು ತಿಳಿಸಿದರು.
ಇವೆಲ್ಲದರ ಮಧ್ಯೆ ರಾಜ್ಯದ ಕಾಂಗ್ರೆಸ್ ಸರಕಾರವು, ತಾವು ಅಲ್ಪಸಂಖ್ಯಾತರಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಭಾವನೆಯಲ್ಲಿ ಇದ್ದಂತಿದೆ. ರೈತರಿಗೆ ಬರಗಾಲ ಸಂಬಂಧ ಬೆಳೆ ಪರಿಹಾರ ಕೊಡುತ್ತಿಲ್ಲ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಹೇಳುತ್ತಿದ್ದಾರೆ.

ಈಗ ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣದಲ್ಲಿ ಯಾವ ದೇಶದ್ರೋಹಿಗಳು ಪೊಲೀಸ್ ಸ್ಟೇಷನ್ಗೆ ನುಗ್ಗಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೋ ಅವರನ್ನು ನಿರಪರಾಧಿಗಳು ಅನ್ನುವಂತೆ ಬಿಂಬಿಸುತ್ತಿರುವುದು ನಿಜಕ್ಕೂ ಖಂಡನೀಯ ಮತ್ತು ಅಕ್ಷಮ್ಯ ಅಪರಾಧ. ಇದರ ಮೂಲಕ ಇವರು ಬೇರೆಯವರಿಗೆ ಪ್ರೇರಣೆ ಮತ್ತು ಪ್ರಚೋದನೆ ಕೊಡುತ್ತಿದ್ದಾರೆ ಎಂದು ಟೀಕಿಸಿದರು.
ಇಲ್ಲಿ ದೇಶದ್ರೋಹಿಗಳನ್ನು ಮಾಫಿ ಮಾಡುವುದಾದರೆ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಯ ಕೇಸು ಎದುರಿಸುವ ದೇಶದ್ರೋಹಿಗಳಿಗೂ ಇದೇರೀತಿ ಮಾಡುತ್ತೀರಾ ಎಂದು ಪ್ರಶ್ನಿಸಿದರು. ಅವರನ್ನೂ ಅಮಾಯಕರು ಎನ್ನುವಿರಾ ಎಂದು ಕೇಳಿದರು.
ಅಯೋಧ್ಯೆಯ ಶ್ರೀರಾಮಮಂದಿರದ ಪ್ರತಿಷ್ಠಾಪನೆ ನೆರವೇರುವ ಹಿನ್ನೆಲೆಯಲ್ಲಿ ಇದೇ 22ರಂದು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಮ್ಮ ಮನೆಗಳಲ್ಲಿ 5 ದೀಪಗಳನ್ನು ಉತ್ತರಾಭಿಮುಖವಾಗಿ ಹಚ್ಚುವ ಮೂಲಕ ಪುಣ್ಯ ಕೆಲಸದಲ್ಲಿ ಭಾಗಿಯಾಗಬೇಕು ಎಂದು ವಿನಂತಿಸಿದರು.
ಈ ಹಿನ್ನೆಲೆಯಲ್ಲಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ಮನೆಮನೆಗೆ ವಿತರಿಸಲಾಗಿದೆ. ಪ್ರತಿ ಮನೆಗೂ ಮಂತ್ರಾಕ್ಷತೆ ಕೊಡುತ್ತಿದ್ದು, ಪ್ರತಿ ಮನೆಯವರೂ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.












Click it and Unblock the Notifications