ಪ್ರತಿನಿತ್ಯ 1471 ಟನ್ ಆಕ್ಸಿಜನ್ ನೀಡಿ: ಯಡಿಯೂರಪ್ಪ ಕೇಂದ್ರಕ್ಕೆ ಮನವಿ
ಬೆಂಗಳೂರು, ಏಪ್ರಿಲ್ 24: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ನಿತ್ಯ 1471 ಟನ್ ಆಕ್ಸಿಜನ್ ನೀಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದಾರೆ.
ಇದೇ ವೇಳೆ ಮುಂದಿನ 10 ದಿನಗಳಿಗೆ ಎರಡು ಲಕ್ಷ ಡೋಸ್ಗಳಷ್ಟು ರೆಮ್ಡೆಸಿವಿರ್ ಔಷಧವನ್ನು ರಾಜ್ಯಕ್ಕೆ ನೀಡಬೇಕೆಂದು ಕೇಳಿಕೊಂಡಿದ್ದಾರೆ.
ಕೋವಿಡ್ 19: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಎಂದ ಯಡಿಯೂರಪ್ಪ
ಗುರುವಾರ ಒಂದೇ ದಿನ ರಾಜ್ಯದಲ್ಲಿ 500 ಟನ್ ಆಮ್ಲಜನಕ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳು ಮುಚ್ಚುವ ಪರಿಸ್ಥಿತಿ ಎದುರಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಆಮ್ಲಜನಕ ಬಳಕೆ ಪ್ರತಿದಿನ ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯಕ್ಕೆ ಏ.25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ.
ಹಾಗೂ ಏ.30ರ ನಂತರ 1471 ಟನ್ ಆಮ್ಲಜನಕ ಅಗತ್ಯವಿದೆ. ಹೀಗಾಗಿ ಆಮ್ಲಜನಕದ ಕೊರತೆ ನೀಗಿಸಿ, ತಕ್ಷಣ 1471 ಟನ್ ಆಮ್ಲಜನಕ ಹಂಚಿಕೆ ಮಾಡಿ ಎಂದು ಹೇಳಿದರು.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಾಸಿಟಿವಿಟಿ ದರ ಶೇ.16ರಷ್ಟಿದೆ. ಬೆಂಗಳೂರು ನಗರ ಅತಿ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಯಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.
Recommended Video