ಚಾಣಕ್ಯ ವಿವಿಗೆ 106 ಎಕರೆ ಭೂಮಿ: ಸರ್ಕಾರ, ಕೆಐಎಡಿಬಿಗೆ ನೋಟಿಸ್
ಬೆಂಗಳೂರು, ಆ.2. ವಿಧಾನಮಂಡಲದ ಉಭಯ ಸದನಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಚಾಣಕ್ಯ ಖಾಸಗಿ ವಿಶ್ವವಿದ್ಯಾಲಯಕ್ಕೆ ಕಡಿಮೆ ಬೆಲೆಯಲ್ಲಿ 106 ಎಕರೆ ಭೂಮಿ ಮಂಜೂರು ಮಾಡಿರುವ ವಿಚಾರ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಅನ್ಯ ಉದ್ದೇಶಕ್ಕೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ.
ಈ ಕುರಿತಂತೆ ವಕೀಲೆ ಸುಧಾ ಕಾಟ್ವಾ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಐಎಡಿಬಿ)ಸೇರಿದ ಬೆಲೆಬಾಳುವ ಜಮೀನನ್ನು ಕಾನೂನು ಬಾಹಿರವಾಗಿ ಚಾಣಕ್ಯ ಖಾಸಗಿ ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಿರುವುದನ್ನು ಪ್ರಶ್ನಿಸಿದ್ದಾರೆ.
ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರಕರಣದ ಸಂಬಂಧ ಕೆಐಎಡಿಬಿ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಅರ್ಜಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ, ಅವರಿಗೂ ನೋಟಿಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿದಾರರ ವಾದವೇನು?:
ಅರ್ಜಿದಾರರ ಪರ ವಕೀಲರು, ಚಾಣಕ್ಯ ವಿಶ್ವವಿದ್ಯಾಲಯ ನಿರ್ಮಾಣದ ಉದ್ದೇಶಕ್ಕಾಗಿ ಪ್ರಕರಣದ ನಾಲ್ಕನೇ ಪ್ರತಿವಾದಿಯಾದ ಸಮಾಜ ವಿಜ್ಞಾನಗಳ ಅಧ್ಯಯನ ಕೇಂದ್ರಕ್ಕೆ (ಸೆಸ್) ರಾಜ್ಯ ಸರ್ಕಾರ 2021ರ ಏ. 28ರಂದು ಹೊರಡಿಸಿರುವ ಆದೇಶ ರದ್ದುಗೊಳಿಸಬೇಕು. ಸೆಸ್ ಒಂದು ಖಾಸಗಿ ಸಂಸ್ಥೆಯಾಗಿದ್ದು, ಈ ಸಂಸ್ಥೆಯ ವತಿಯಿಂದ ಖಾಸಗಿ ವಿಶ್ವವಿದ್ಯಾಲಯ ನಿರ್ಮಿಸಲು 116 ಎಕರೆ 16 ಗುಂಟೆ ಜಮೀನನ್ನು ನೀಡಿರುವುದು ಕಾನೂನುಬಾಹಿರ ಎಂದರು.
ಅಲ್ಲದೆ, ದೇವನಹಳ್ಳಿ ಕೈಗಾರಿಕಾ ವಲಯದ ವ್ಯಾಪ್ತಿಯಲ್ಲಿ ಹೈಟೆಕ್ ಡೀಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಎರಡನೇ ಹಂತದ ನಿರ್ಮಾಣಕ್ಕಾಗಿ ಕೆಐಎಡಿಬಿ ಕಾಯ್ದೆ-1966ರ ಅನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದ್ದ ಈ ಜಮೀನು ಬಹುಕೋಟಿ ರೂಪಾಯಿಗಳ ಮೌಲ್ಯ ಹೊಂದಿದೆ ಎಂದು ಹೇಳಿದೆ.
ಅರ್ಜಿಯಲ್ಲಿ, ರಾಜ್ಯ ಸರ್ಕಾರ ಜಮೀನು ಮಂಜೂರು ಮಾಡುವಲ್ಲಿ ಯಾವುದೇ ನಿಯಮ ಪಾಲನೆ ಮಾಡಿಲ್ಲ, ಪಾರದರ್ಶಕ ಪ್ರಕ್ರಿಯೆ ಅನುಸರಿಸದೆ ರಿಯಾಯ್ತಿ ದರದಲ್ಲಿ ನೀಡಿದೆ. ಇದರಿಂದ ಸರ್ಕಾರಿ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗಿದೆ. ಈ ಜಮೀನು ಮಂಜೂರು ಮಾಡಿರುವುದು ಕೆಐಎಡಿಬಿ ರಿಯಲ್ ಎಸ್ಟೇಟ್ ಏಜೆನ್ಸಿ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬುದನ್ನು ತೋರಿಸುತ್ತಿದೆ. ಆದ್ದರಿಂದ, ಸರ್ಕಾರ ಜಮೀನು ಮಂಜೂರು ಮಾಡಿರುವ ಆದೇಶ ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.












Click it and Unblock the Notifications