ಸರ್ಕಾರಿ ಜಮೀನು ಒತ್ತುವರಿ ತೆರವು: ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆಗೆ ಸಿದ್ದರಾಮಯ್ಯ ಸೂಚನೆ
ನವದೆಹಲಿ: ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿದ್ದು, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
80 ಕೋಟಿ ಮೌಲ್ಯದ ಸರಕಾರಿ ಜಾಗ ವಶಕ್ಕೆ
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಪ್ರದೇಶದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಸುಮಾರು 5 ಎಕರೆ ಸರಕಾರಿ ಜಾಗವನ್ನು ಭಾರೀ ಕಾರ್ಯಾಚರಣೆ ಮೂಲಕ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಸುಮಾರು 80 ಕೋಟಿ ಮೌಲ್ಯದ ಸರಕಾರಿ ಸ್ವತ್ತನ್ನು ಸಂರಕ್ಷಿಸಲಾಗಿದೆ ಎಂದು ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಿಇಒ ಕರೀಗೌಡ ತಿಳಿಸಿದರು. ಪೊಲೀಸ್ ಬಿಗಿ ಭದ್ರತೆಯೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ 150ಕ್ಕೂ ಹೆಚ್ಚು ಅನಧಿಕೃತ ಶೆಡ್ಗಳು ಹಾಗೂ ಮನೆಗಳನ್ನು ಜೆಸಿಬಿಗಳ ಮೂಲಕ ನೆಲಸಮ ಮಾಡಲಾಗಿದೆ.
ಇನ್ನೂ ಈ ಕಾರ್ಯಾಚರಣೆಗೆ 9 ಟ್ರ್ಯಾಕ್ಟರ್ಗಳು, 9 ಜೆಸಿಬಿಗಳನ್ನು ಬಳಸಲಾಗಿದ್ದು, 70 ಮಾರ್ಷಲ್ಗಳು ಸೇರಿದಂತೆ 200ಕ್ಕೂ ಅಧಿಕ ಸಿಬ್ಬಂದಿ ಪಾಲ್ಗೊಂಡಿದ್ದರು. ವಶಕ್ಕೆ ಪಡೆದ ಜಾಗವನ್ನು ಮುಂದಿನ ದಿನಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಯೋಜನೆಗಳಿಗೆ ಬಳಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಅಕ್ರಮ ಒತ್ತುವರಿ ವಿರುದ್ಧ ನಗರದಾದ್ಯಂತ ಕಠಿಣ ಕ್ರಮ ಮುಂದುವರಿಯಲಿದ್ದು ಸರಕಾರಿ ಭೂಮಿ ರಕ್ಷಣೆಗಾಗಿ ಇಂತಹ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.












Click it and Unblock the Notifications