ನ.14ರಿಂದ ಮೂಡಬಿದಿರೆಯಲ್ಲಿ ಆಳ್ವಾಸ್ ನುಡಿಸಿರಿ 2014
ಮೂಡಬಿದಿರೆ, ಅ. 9 : ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 11ನೇ ವರ್ಷದ ಆಳ್ವಾಸ್ ನುಡಿಸಿರಿ 2014 ಕಾರ್ಯಕ್ರಮ ನ.14ರಿಂದ 16ರವರೆಗೆ ನಡೆಯಲಿದೆ. ನಾಡೋಜ ಡಾ. ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ಸಾಹಿತಿ ನಾ.ಡಿಸೋಜ ನುಡಿಸಿರಿಯನ್ನು ಉದ್ಘಾಟಿಸಲಿದ್ದಾರೆ.
ಬುಧವಾರ ಮೂಡಬಿದಿರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅವರು ಆಳ್ವಾಸ್ ನುಡಿಸಿರಿ 2014ನೇ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ನ.14, 15 ಮತ್ತು 16ರಂದು 'ಕರ್ನಾಟಕ : ವರ್ತಮಾನದ ತಲ್ಲಣಗಳು' ಎಂಬ ಮುಖ್ಯ ಪರಿಕಲ್ಪನೆಯಲ್ಲಿ ನುಡಿಸಿರಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಮೂಡಬಿದಿರೆ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ನಡೆಯಲಿರುವ ನುಡಿಸಿರಿಯ ಅಧ್ಯಕ್ಷತೆಯನ್ನು ಕವಿ, ನಾಡೋಜ ಡಾ.ಸಿದ್ದಲಿಂಗಯ್ಯ ವಹಿಸಿಕೊಳ್ಳಲಿದ್ದು, ನಾ.ಡಿಸೋಜ ನುಡಿಸಿರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಮೂರು ದಿನಗಳ ನುಡಿಸಿರಿಯಲ್ಲಿ ತುಳು, ಕೊಂಕಣಿ, ಬ್ಯಾರಿ ಭಾಷೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಮೋಹನ್ ಆಳ್ವ ಹೇಳಿದರು. [ವಿಶ್ವ ನುಡಿಸಿರಿ : ಡಾ. ಮೋಹನ್ ಆಳ್ವ ಸಂದರ್ಶನ]
ಕಳೆದ ಹತ್ತು ವರ್ಷಗಳಿಂದ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿಕೊಂಡು ಬರಲಾಗುತ್ತಿದೆ. 2013ರಲ್ಲಿ ಆಳ್ವಾಸ್ ನುಡಿಸಿರಿಯ ದಶಮಾನೋತ್ಸವ ಸಂಭ್ರಮಕ್ಕಾಗಿ 'ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ 2013' ಅನ್ನು ಆಯೋಜಿಸಲಾಗಿತ್ತು ಎಂದು ಮೋಹನ್ ಆಳ್ವಾ ಹೇಳಿದರು. ಈ ಬಾರಿ 11ನೇ ವರ್ಷದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.
ಮೂರುದಿನಗಳ ನುಡಿಸಿರಿಯಲ್ಲಿ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ, ಇತರ ಪ್ರತಿನಿಧಿಗಳಿಗೆ 100 ರೂ. ಪ್ರತಿನಿಧಿ ಶುಲ್ಕದೊಂದಿಗೆ ಮೂರು ದಿನವೂ ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ನಾಡಿನ ಪ್ರಸಿದ್ಧ ಸಾಹಿತಿಗಳು, ವಿದ್ವಾಂಸರು, ಕವಿಗಳು ನುಡಿಸಿರಿಯಲ್ಲಿ ಪಾಲ್ಗೊಳ್ಳುತ್ತಿದ್ದು, ಹೆಚ್ಚಿನ ಜನರು ನುಡಿಸಿರಿಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮೋಹನ್ ಆಳ್ವ ಮನವಿ ಮಾಡಿದರು.












Click it and Unblock the Notifications