ಕಲಬುರಗಿ ಸಂಪುಟ ಸಭೆಗೆ ಅಂಬರೀಶ್ ಗೈರು!
ಬೆಂಗಳೂರು, ನ.28 : ನಿಗಮ-ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ತಮ್ಮ ಬೆಂಬಲಿಗರಿಗೆ ಸ್ಥಾನ ಸಿಕ್ಕಿಲ್ಲ ಎಂದು ಬಹಿರಂಗವಾಗಿ ಸಿಎಂ ವಿರುದ್ಧ ಆರೋಪ ಮಾಡಿದ್ದ ವಸತಿ ಸಚಿವ ಅಂಬರೀಶ್ ಕಲಬುರಗಿಯಲ್ಲಿ ಇಂದು ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿದ್ದಾರೆ.
ಎಲ್ಲಾ ಸಚಿವರು ಕಲಬುರಗಿಯಲ್ಲಿ ನಡೆಯುತ್ತಿರುವ ಆರನೇ ಸಚಿವ ಸಂಪುಟ ಸಭೆಗೆ ಹಾಜರಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಆದರೆ, ವಸತಿ ಸಚಿವ ಅಂಬರೀಶ್ ಅವರು ಸಭೆಗೆ ಗೈರು ಹಾಜರಾಗಿದ್ದು, ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ. [ನಮಗೂ ರಾಜಕೀಯ ಗೊತ್ತು ಅಂದ್ರು ಅಂಬರೀಶ್]

ತಮ್ಮ ಬೆಂಬಲಿಗರಿಗೆ ಸ್ಥಾನ ನೀಡಿಲ್ಲ ಎಂದು ಸಿಎಂ ವಿರುದ್ಧ ಮುನಿಸಿಕೊಂಡಿದ್ದ ವಸತಿ ಸಚಿವ ಅಂಬರೀಶ್, 'ಮಂಡ್ಯದಲ್ಲಿ ರಾಜಕೀಯ ಹೇಗಿದೆ ಎಂಬುದು ನಮಗೆ ಗೊತ್ತಿದೆ. ಪ್ರಾಮಾಣಿಕರಿಗೆ ಅವಕಾಶ ನೀಡಿ' ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.
ಇದನ್ನೇ ಕಾರಣವಾಗಿಟ್ಟುಕೊಂಡು ಅವರು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡಿಲ್ಲ ಎಂದು ತಿಳಿದುಬಂದಿದೆ. ಅಂಬರೀಶ್ ಬಹಿರಂಗವಾಗಿ ಸಿಎಂ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರೂ ಸಿಎಂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದ್ದರಿಂದ ಸಭೆಗೆ ಗೈರು ಹಾಜರಾಗಿ ಸಿಎಂ ವಿರುದ್ಧ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಂಬರೀಶ್ ಹೇಳುವುದೇನು? : ಸಚಿವ ಸಂಪುಟ ಸಭೆಗೆ ಗೈರಾಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ವಸತಿ ಸಚಿವ ಅಂಬರೀಶ್ ಶನಿವಾರ ಡಾ.ರಾಜ್ಕುಮಾರ್ ಸ್ಮಾರಕ ಉದ್ಘಾಟನೆ ಬೆಂಗಳೂರಿನಲ್ಲಿ ನಡೆಯಲಿದ್ದು, ಅದಕ್ಕೆ ಸಂಬಂಧಪಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿಯಲ್ಲಿದ್ದೇನೆ. ಆದ್ದರಿಂದ ಸಂಪುಟ ಸಭೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.












Click it and Unblock the Notifications