ಬೆಂಗಳೂರಿನಲ್ಲಿಯೇ ಅಂಬರೀಶ್ ಅಂತ್ಯಕ್ರಿಯೆ : ಎಚ್.ಡಿ.ಕುಮಾರಸ್ವಾಮಿ
Recommended Video
ಬೆಂಗಳೂರು, ನವೆಂಬರ್ 25 : ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಅಭಿಮಾನಿಗಳು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದರು.
ಶನಿವಾರ ರಾತ್ರಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಭಾನುವಾರ ಬೆಳಗ್ಗೆ 8 ಗಂಟೆಯಿಂದ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ' ಎಂದರು.
ಅಂಬರೀಶ್ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ ಸಂತಾಪ
'ಬೆಂಗಳೂರಿನಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂದು ಕುಟುಂಬದವರು ಬಯಸಿದ್ದಾರೆ. ಅಭಿಮಾನಿಗಳು ಸರ್ಕಾರಕ್ಕೆ ಸಹಕಾರ ನೀಡಬೇಕು. ಮಂಡ್ಯದಿಂದ ಅಭಿಮಾನಿಗಳು ಬೆಂಗಳೂರಿಗೆ ಬರಲು ವಿಶೇಷ ಕೆಎಸ್ಆರ್ಟಿಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ' ಎಂದು ಹೇಳಿದರು.
ನಟ-ಮಾಜಿ ಸಚಿವ ಅಂಬರೀಶ್ ಹೃದಯಾಘಾತದಿಂದ ನಿಧನ
'ರಾಜ್ಯಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ' ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಹಿರಿಯ ನಟ, ಮಾಜಿ ಸಚಿವ ಎಂ.ಎಚ್.ಅಂಬರೀಶ್ ಪರಿಚಯ
ವಿಕ್ರಂ ಆಸ್ಪತ್ರೆಯಿಂದ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಜೆ.ಪಿ.ನಗರದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಭಾನುವಾರ ಬೆಳಗ್ಗೆ 8ಗಂಟೆಯಿಂದ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.